ಎಸ್.ಸಿ, ಎಸ್.ಟಿ. ಸಮುದಾಯಗಳ ವಿಷಯದಲ್ಲಿ ಕಾಂಗ್ರೆಸ್ಸಿಗರ ಶಕುನಿ ವಾತ್ಸಲ್ಯ: ಬಿ.ಶ್ರೀರಾಮುಲು
ಬಳ್ಳಾರಿ, ನವೆಂಬರ್ 18 : ಕಾಂಗ್ರೆಸ್ ಮುಖಂಡರು ಹಲವು ದಶಕಗಳ ಕಾಲ ಆಳ್ವಿಕೆ ಸಂದರ್ಭದಲ್ಲಿ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡಗಳ ಬಗ್ಗೆ ಕೇವಲ ಮತ ಬ್ಯಾಂಕ್ ರಾಜಕಾರಣ ಮಾಡಿದ್ದರು. ಈ ಸಮುದಾಯಗಳ ಕುರಿತು ಶಕುನಿ ವಾತ್ಸಲ್ಯವನ್ನು ಪ್ರದರ್ಶನ ಮಾಡಿದ್ದವು ಎಂದು ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಟೀಕಿಸಿದ್ದಾರೆ.
ಬಳ್ಳಾರಿಯಲ್ಲಿ ನವೆಂಬರ್ 20 ರಂದು ಬಿಜೆಪಿ ಎಸ್ಟಿ ಮೋರ್ಚಾ ನವಶಕ್ತಿ ಸಮಾವೇಶ ನಡೆಯುವ ಸ್ಥಳವನ್ನು ಪರಿಶೀಲಿಸಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾಮಾಜಿಕ ನ್ಯಾಯದ ವಿಚಾರದಲ್ಲಿ ನುಡಿದಂತೆ ನಡೆದಿದ್ದಾರೆ. ಪರಿಶಿಷ್ಟ ಜಾತಿ, ಪಂಗಡಕ್ಕೆ ಸಾಮಾಜಿಕ ನ್ಯಾಯ ನೀಡಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ಸಿಗರು ಕಪಟ ರಾಜಕಾರಣ ಮಾಡಿದರು. ನಮ್ಮ ಪರಿಶಿಷ್ಟ ಜಾತಿ, ಪಂಗಡಗಳಿಗೆ ಸಾಮಾಜಿಕ ನ್ಯಾಯ ಕೊಡಲಿಲ್ಲ ಎಂದು ಆರೋಪಿಸಿ, ಕಾಂಗ್ರೆಸ್ ಸಾಧನೆ ಸೊನ್ನೆ ಎಂದು ಟೀಕಿಸಿದರು. ಇನ್ನೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು ಬಿಜೆಪಿಯ ಶಕ್ತಿಯಾಗಿದ್ದವು. ಈಗಲೂ ಶಕ್ತಿಯಾಗಿಯೇ ಮುಂದುವರಿದಿದ್ದು, ಮುಂದೆಯೂ ಬಿಜೆಪಿಗೆ ಬೆಂಬಲ ಕೊಡಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹಿಂದಿನ ಸಿಎಂಬಿ.ಎಸ್. ಯಡಿಯೂರಪ್ಪ ಅವರು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರಕಾರಿ ಕಾರ್ಯಕ್ರಮವಾಗಿ ಪ್ರಕಟಿಸಿ ರಜೆ ಘೋಷಿಸಿದ್ದಲ್ಲದೆ, ವಾಲ್ಮೀಕಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ್ದರು. ಬಿಜೆಪಿ ಆಡಳಿತದಲ್ಲಿ ಪರಿಶಿಷ್ಟ ಸಮುದಾಯಕ್ಕೆ ಗಂಗಾ ಕಲ್ಯಾಣ ಯೋಜನೆ ಸೇರಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿಯವರು ಪರಿಶಿಷ್ಟ ವರ್ಗಗಳಿಗೆ ಸಚಿವಾಲಯ ಮಾಡಿ ಒಬ್ಬರು ಮಂತ್ರಿಯನ್ನಾಗಿ ನನಗೆ ಅವಕಾಶ ಕೊಟ್ಟಿದ್ದಾರೆ. ಮೀಸಲಾತಿ ಹೆಚ್ಚಳ ಮಾಡುವ ವಿಚಾರದಲ್ಲೂ ಶಕ್ತಿ ತುಂಬುವ ಕಾರ್ಯ ಮಾಡಿದೆ ಎಂದು ತಿಳಿಸಿದರು.
ಪ್ರಧಾನಿ ಮೋದಿಜಿಯವರು ಮಹರ್ಷಿ ವಾಲ್ಮೀಕಿ- ಕನಕದಾಸರವರ ಪುತ್ಥಳಿಗೆ ಗೌರವಾರ್ಪಣೆ ಮಾಡಿದ್ದು, ಹಿಂದುಳಿದ ಜಾತಿಗಳ ಏಳಿಗೆಗೆ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ. ಈ ಸಮಾವೇಶದಲ್ಲಿ ಬೊಮ್ಮಾಯಿ ಮತ್ತು ಮೋದಿಜಿ ಅವರಿಗೆ ಅಭಿನಂದನೆ ಮತ್ತು ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮವೂ ನಡೆಯಲಿದೆ ಎಂದರು.
ಈ ಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸರಕಾರದ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಅರ್ಜುನ್ ಮುಂಡಾ, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಂಸದೀಯ ಮಂಡಳಿಯ ಸದಸ್ಯರೂ ಆದ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್, ಕೇಂದ್ರ - ರಾಜ್ಯ ಸರಕಾರಗಳ ಸಚಿವರು, ಕೋರ್ ಕಮಿಟಿ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕಾಗಿ ಎಲ್ಲ ಪೂರ್ವತಯಾರಿ ನಡೆದಿದೆ ಎಂದು ಹೇಳಿದರು.
2013 ರಿಂದ 5 ವರ್ಷ ಅಧಿಕಾರದಲ್ಲಿದ್ದ ಸಿದ್ದರಾಮಯ್ಯ, ತಾಕತ್ತು, ಧಮ್ ಬಗ್ಗೆ ಮಾತನಾಡುತ್ತಾರೆ. ತಾಕತ್ತು ಮತ್ತು ಧಮ್ ಇರುವ ಕಾರಣ ಬಿಜೆಪಿ ಎಸ್ಸಿ, ಎಸ್ಟಿ ಸಮುದಾಯಗಳ ಮೀಸಲಾತಿ ಹೆಚ್ಚಳ ಮಾಡಿದೆ. ನೀವು ಮೀಸಲಾತಿ ಹೆಚ್ಚಿಸಿಲ್ಲವೇಕೆ ಎಂದು ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದರು. ಎಸ್ಸಿ, ಎಸ್ಟಿ ಸಮುದಾಯಗಳ ಮತ ಗಳಿಸಲು ಸುಳ್ಳು ಕಥೆಗಳ ಮೂಲಕ ಕಾಂಗ್ರೆಸ್ಸಿಗರು ಸುಳ್ಳು ಸಾಮ್ರಾಜ್ಯ ನಿರ್ಮಿಸುತ್ತಿದ್ದರು. ಹಿಂದುಳಿದ ಸಮಾಜಗಳಿಗೆ ಕಾಂಗ್ರೆಸ್ಸಿಗರ ಮೋಸ ಅರ್ಥವಾಗಿದೆ ಎಂದರು.

ಹೊಸ ವಾಹನಗಳ ನಂಬರ್ ಪ್ಲೇಟ್ ಮಾದರಿಯಲ್ಲಿ ಅಹಿಂದ ನಾಯಕ ಸಿದ್ದರಾಮಯ್ಯ ರಾಜಕಾರಣ ಮಾಡುತ್ತ ಬಂದಿದ್ದಾರೆ. ಹಿಂದುಳಿದ ನಾಯಕರು, ವರ್ಗ, ಜನರ ಬಗ್ಗೆ ಮಾತನಾಡುವ ಅವರು, ಹಿಂದುಳಿದ ವರ್ಗದವರು ಮುಖ್ಯಮಂತ್ರಿ ಆಗಬೇಕೆನ್ನುತ್ತಾರೆ. ಅಹಿಂದಕ್ಕಾಗಿ ಸಿದ್ದರಾಮಯ್ಯ ಏನೂ ಮಾಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಬೀದರ್ ನಿಂದ ಚಾಮರಾಜನಗರದ ವರೆಗೆ ಪಕ್ಷದ ಈ ಸಮುದಾಯಗಳ ಕಾರ್ಯಕರ್ತರು, ಮುಖಂಡರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಸಮಾವೇಶದಲ್ಲಿ ಸುಮಾರು 10 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ಹಿರಿಯ ನಾಯಕರೂ ಭಾಗವಹಿಸುತ್ತಾರೆ, ಆರೋಗ್ಯ ವ್ಯವಸ್ಥೆ ನೋಡಿಕೊಳ್ಳಲು ಆಂಬುಲೆನ್ಸ್, ಆರೋಗ್ಯ ಕೇಂದ್ರವೂ ಇರಲಿದೆ ಎಂದರು.
10 ಸಾವಿರ ಬಸ್, 25 ಸಾವಿರ ಕ್ರೂಸರ್ ವ್ಯವಸ್ಥೆ
ಸಮಾವೇಶದ ಯಶಸ್ವಿಗೆ 41 ಸಮಿತಿ ರಚಿಸಿದ್ದು, 5 ಸಾವಿರ ಕಾರ್ಯಕರ್ತರನ್ನು ಜೋಡಿಸಿದ್ದೇವೆ. 200ಕ್ಕೂ ಅಧಿಕ ಶೌಚಾಲಯಗಳಿರುತ್ತವೆ. 28 ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡಿದ್ದೇವೆ. 8 ಸಾವಿರದಿಂದ 10 ಸಾವಿರ ಬಸ್ಸುಗಳು ಬರಲಿವೆ. 25 ಸಾವಿರ ಕ್ರೂಸರ್ ವಾಹನಗಳು, 10 ಸಾವಿರ ಕಾರುಗಳು, 25 ಸಾವಿರ ಬೈಕ್ಗಳು ಬರಲಿವೆ; 2 ಹೆಲಿಪ್ಯಾಡ್ಗಳೂ ಇರಲಿವೆ ಎಂದು ಶ್ರೀರಾಮುಲು ತಿಳಿಸಿದರು.
15 ರಿಂದ 20 ಸಾವಿರ ಮಹಿಳೆಯರು ಪಾಲ್ಗೊಳ್ಳುತ್ತಾರೆ. ಶಾಸಕ ಸೋಮಶೇಖರ ರೆಡ್ಡಿಯವರು ಕಾಲ್ನಡಿಗೆಯಲ್ಲಿ ಬರಲಿದ್ದಾರೆ. 160 ಕಲಾತಂಡಗಳು ಭಾಗವಹಿಸಲಿವೆ, 130 ಎಕರೆ ಪ್ರದೇಶದಲ್ಲಿ ಸಮಾವೇಶ ನಡೆಯುತ್ತಿದೆ. ಸಮಾವೇಶದ ವೇದಿಕೆ ಮತ್ತು ಕಲಾವಿದರಿಂದ ಮನೋರಂಜನೆ ನೀಡುವ ವೇದಿಕೆ ರಚಿಸಲಾಗಿದೆ. 3.20 ಲಕ್ಷ ಚದರಡಿ ಪೆಂಡಾಲ್ ವ್ಯವಸ್ಥೆ ಮಾಡಿದ್ದೇವೆ. 1 ಲಕ್ಷ ಚದರ ಅಡಿಯಲ್ಲಿ ಅಡುಗೆ ಸಿದ್ಧಗೊಳ್ಳಲಿದೆ. ಬೆಳಿಗ್ಗೆ 10 ರಿಂದ ಸಂಜೆ 4ರವರೆಗೆ ಊಟದ ವ್ಯವಸ್ಥೆ ಮಾಡಲಿದ್ದೇವೆ. 300ಕ್ಕೂ ಹೆಚ್ಚು ಊಟದ ಕೌಂಟರ್ ಇರಲಿವೆ. 3 ಸಾವಿರ ಕಾರ್ಯಕರ್ತರು ಊಟದ ವ್ಯವಸ್ಥೆಗೆ ಸಹಕರಿಸಲಿದ್ದಾರೆ ಎಂದರು.

ಬಿಜೆಪಿ ಸರಕಾರಗಳ ಜನಪರ ಕಾರ್ಯಕ್ರಮಗಳನ್ನು ಎಸ್ಸಿ, ಎಸ್ಟಿ ಸಮುದಾಯ ಮತ್ತು ಜನರಿಗೆ ತಿಳಿಸಲಾಗುತ್ತದೆ. ಮೀಸಲಾತಿ ಹೆಚ್ಚಳವನ್ನು ಸಂಭ್ರಮಿಸುವ ಹಬ್ಬ- ಐತಿಹಾಸಿಕ ಸಮಾವೇಶ ಇದಾಗಲಿದೆ ಎಂದು ತಿಳಿಸಿದರು.
ಪೊಲೀಸ್ ಭದ್ರತಾ ವ್ಯವಸ್ಥೆ ಮಾಡಿದ್ದೇವೆ. ಸಣ್ಣಪುಟ್ಟ ವ್ಯತ್ಯಾಸವಾದರೆ ಸಹಕರಿಸಿ ಎಂದು ಜನರಲ್ಲಿ ಮನವಿ ಮಾಡಿದ ಸಚಿವ ಶ್ರೀರಾಮುಲು ಮನೆಮನೆಯೂ ಕೇಸರಿಮಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಓಲೆಕಾರ್, ನರಸಿಂಹ ನಾಯಕ, ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ವೀರೇಂದ್ರ ಸಿಂಹ, ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಮತ್ತು ಬಳ್ಳಾರಿ ಪ್ರಭಾರಿಗಳಾದ ಸಿದ್ದೇಶ್ ಯಾದವ್, ಬಳ್ಳಾರಿ ಜಿಲ್ಲಾಧ್ಯಕ್ಷ ಮುರಹರಿಗೌಡ, ಬಳ್ಳಾರಿ ಸಂಸದ ವೈ ದೇವೆಂದ್ರಪ್ಪ, ವಿಧಾನ ಪರಿಷತ್ ಸದಸ್ಯ ವೈ.ಎಂ. ಸತೀಶ್, ಬುಡ ಅಧ್ಯಕ್ಷ ಮಾರುತಿ ಪ್ರಸಾದ್, ಎಪಿಎಂಸಿ ಅಧ್ಯಕ್ಷ ಬಸಲಿಂಗಪ್ಪ, ಎಸ್.ಟಿ. ಮೋರ್ಚಾ ರಾಜ್ಯ ಕಾರ್ಯದರ್ಶಿ ಶಿವಕುಮಾರ್, ಎಸ್.ಟಿ. ಮೋರ್ಚಾ ಜಿಲ್ಲಾಧ್ಯಕ್ಷ ಓಬಳೇಶ ಹೆಚ್, ಎಸ್.ಟಿ. ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಕೆ.ಎಸ್. ದಿವಾಕರ್, ಹಿರಿಯರಾದ ಮಹಿಪಲ್ ಉಪಸ್ಥಿತರಿದ್ದರು.












Click it and Unblock the Notifications