ನಾನು ಯಾಕೆ ಸಿಎಂ ಆಗಬಾರದು; ಮತ್ತೆ ದಲಿತ ಸಿಎಂ ಧ್ವನಿ ಎತ್ತಿದ ಪರಮೇಶ್ವರ್
ಬೆಂಗಳೂರು, ಜೂನ್ 14: ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದ ವೇಳೆ ಕಾಂಗ್ರೆಸ್ ಪಾಳಯದಲ್ಲಿ ದಲಿತ ಮುಖ್ಯಮಂತ್ರಿ ವಿಚಾರ ಬಾರೀ ಚರ್ಚೆಗೆ ಕಾರಣವಾಗಿದ್ದು, ನಂತರ ಹೈಕಮಾಂಡ್ ತಿರ್ಮಾನಂತೆ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿದೆ.
ಇನ್ನೂ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ ಸೇರಿದಂತೆ ಸಚಿವ ಸಂಪುಟ ರಚನೆಯಾಗಿ 20 ದಿನ ಕಳೆದಿದ್ದು, ಇದೀಗ ಮತ್ತೆ ದಲಿತ ಸಿಎಂ ಧ್ವನಿ ಹೆಚ್ಚಾಗಿದ್ದು, ಗೃಹ ಸಚಿವ ಡಾ.ಜಿ ಪರಮೇಶ್ವರ್ ಮತ್ತೆ ದಲಿತ ಮುಖ್ಯಮಂತ್ರಿ ಬಗ್ಗೆ ಧ್ವನಿ ಎತ್ತಿ ರಾಜ್ಯ ರಾಜಕಾರಣದಲ್ಲಿ ಚರ್ಚೆ ಹುಟ್ಟುಹಾಕಿದ್ದಾರೆ.

ಹೌದು, ಬೆಂಗಳೂರಿನ ವಸಂತ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ದಲಿತ ಸಮುದಾಯದ ಸಚಿವರಿಗೆ ಅಭಿನಂದನಾ ಸಮಾವೇಶದಲ್ಲಿ ಮಾತನಾಡಿದ ಪರಮೇಶ್ವರ್, ನಾನು ಯಾಕೆ ಸಿಎಂ ಆಗಬಾರದು. ಮುನಿಯಪ್ಪ ಯಾಕಾಗಬಾರದು? ಮಹದೇವಪ್ಪ ಯಾಕಾಗಬಾರದು? ನಮಗೆ ಸಿಎಂ ಆಗುವ ಅವಕಾಶಗಳನ್ನು ತಪ್ಪಿಸಿದ್ದಾರೆ ಎಂದು ಹೇಳುವ ಅಸಮಾಧಾನವನ್ನ ವ್ಯಕ್ತಪಡಿಸಿದ್ದಾರೆ.
ಇನ್ನೂ ನಮ್ಮಲ್ಲಿ ಕೀಳರಿಮೆ ಇರಬಾರದು. ನಮ್ಮಲ್ಲಿ ಒಗ್ಗಟ್ಟು ಇದ್ದರೆ ಮಾತ್ರ ಉಳಿದುಕೊಳ್ಳುತ್ತೇವೆ. ಅದನ್ನು ಬಿಟ್ಟು ಎಡಗೈ, ಬಲಗೈ ಸಮುದಾಯ ಅಂತಿದ್ದರೆ ಸಾಧಿಸಲಾಗಲ್ಲ. ನಮ್ಮಲ್ಲಿ ಒಗ್ಗಟ್ಟು ಮೂಡಿದರೆ ಮಾತ್ರ ಏನಾದರೂ ಸಾಧಿಸಲು ಸಾಧ್ಯ ಎಂದು ಸಚಿವ ಪರಮೇಶ್ವರ್ ಗುಡುಗಿದ್ದಾರೆ.
2013ರಲ್ಲಿ ನನ್ನ ನೇತೃತ್ವದಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಆದರೆ, ಪರಮೇಶ್ವರ್ ನೇತೃತ್ವದಲ್ಲಿ ಅಧಿಕಾರಕ್ಕೆ ಬಂತು ಅಂತ ಯಾರೂ ಹೇಳಲಿಲ್ಲ. ನನ್ನ ನೇತೃತ್ವದಲ್ಲಿ ಅಧಿಕಾರ ಬಂತು ಎಂದು ನಾನು ಹೇಳಿಕೊಳ್ಳಲಿಲ್ಲ. ಆದರೆ, 2018ರಲ್ಲಿ ದಲಿತರನ್ನು ಕಡೆಗಣಿಸಿದ್ದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಸೋಲಾಯಿತು. ಯಾವ ಸಮುದಾಯ ಕಡೆಗಣಿಸಿದ್ರೋ ಅವರಿಂದ ಪಾಠ ಕಲಿಬೇಕಾಯ್ತು ಎಂದು ಪರೋಕ್ಷವಾಗಿ ತಮನ್ನು ಸಿಎಂ ಮಾಡದೇ ಕಡೆಗಣಿಸಿದಕ್ಕೆ 2018ರಲ್ಲಿ ಕಾಂಗ್ರೆಸ್ ಸೋಲಾಯ್ತು ಎಂದು ಸ್ವಪಕ್ಷದವರ ವಿರುದ್ದ ಅಸಮಾಧಾನ ಹೊರಹಾಕಿದರು.
ಇನ್ನೂ ಮುನಿಯಪ್ಪ ನೇತೃತ್ವದಲ್ಲಿ ಜಗಜೀವನ್ ರಾಮ್ ಜಯಂತಿ ಮಾಡಲು ಹೇಳಿದ್ರು. ನನ್ನ ನೇತೃತ್ವದಲ್ಲಿ ಡಾ.ಅಂಬೇಡ್ಕರ್ ಜಯಂತಿ ಮಾಡಲು ಹೇಳಿದ್ರು. ಜಗಜೀವನರಾಮ್ ಎಡಗೈ ಅಂಬೇಡ್ಕರ್ ಬಲಗೈ ಅಂತ ನಮಗೆ ಮಾಡುವುದಕ್ಕೆ ಹೇಳ್ತಿದಾರೆ. ಇದರೊಂದಿಗೆ ಅಲ್ಲೂ ನಮ್ಮನ್ನು ಒಡೆದು ಆಳುವುದಕ್ಕೆ ನೋಡಿದರು. ನಾವು ಮಾಡುವುದು ಬೇಡ ಒಪ್ಪೋದು ಬೇಡ ಅಂತ ಮುನಿಯಪ್ಪಗೆ ನಾನೇ ಹೇಳಿದ್ದೆ ಎಂದು ತಿಳಿಸಿದರು.
ಚುನಾವಣೆಯ ಬಳಿಕ ನಮ್ಮ ಪಕ್ಷದ ಆಂತರಿಕ ವಲಯದಲ್ಲಿ ಗೆಲುವಿನ ಪರಮರ್ಷೆ ಮಾಡುವಾಗ ಈ ಬಾರಿ ದಲಿತರು ನಮ್ಮನ್ನು ಕೈ ಹಿಡಿದಿದ್ದಾರೆ ಎಂದು ಮಾತನಾಡುತ್ತಾರೆ. ಮುಸ್ಲಿಮರು 100% ನಮ್ಮ ಕೈ ಹಿಡಿದಿದ್ದಾರೆ ಎಂದು ಹೇಳುತ್ತಾರೆ. ನಮ್ಮ ಬಗ್ಗೆ ಈಗ ಎಲ್ಲರಿಗೆ ಗೊತ್ತಾಗಿದೆ. 51 ಮೀಸಲು ಕ್ಷೇತ್ರಗಳ ಪೈಕಿ 32ರಲ್ಲಿ ಗೆದ್ದಿದ್ದೇವೆ. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿಗೆ ನಾನೇ ಅಧ್ಯಕ್ಷನಾಗಿದ್ದೆ . ಮೊದಲ ಅಧಿವೇಶನದಲ್ಲಿ ನ್ಯಾ.ಸದಾಶಿವ ಆಯೋಗದ ವರದಿ ಮಂಡಿಸುತ್ತೇವೆ ಎಂದು ತಿಳಿಸಿದರು.
ಇನ್ನೂ ಈ ಬಾರಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿ ಅಧಿಕಾರಕ್ಕೇರಿದ್ದು, ಸಿಎಂ ಸ್ಥಾನದ ಮೇಲೆ ಕಣ್ಣೀಟ್ಟಿದ್ದು, ನಂತರ ಹೈಕಮಾಂಡ್ ನಾಯಕರ ಮಟ್ಟದಲ್ಲಿ ನಡೆದ ಮಾತುಕತೆಯ ಬಳಿಕ ಉಪಮುಖ್ಯಮಂತ್ರಿ ಸ್ಥಾನಕ್ಕೆ ಬಹಿರಂಗವಾಗಿಯೇ ತಮ್ಮ ಆಸೆಯನ್ನ ವ್ಯಕ್ತಪಡಿಸಿದ್ದ ಡಾ.ಜಿ ಪರಮೇಶ್ವರ್ ಅವರು ಇದೀಗ ಮುಖ್ಯಮಂತ್ರಿ ಸ್ಥಾನದ ಕುರಿತು ಮಾತನಾಡಿದ್ದು, ಇದೀಗ ಮತ್ತೆ ರಾಜ್ಯ ರಾಜಕಾರಣದಲ್ಲಿ ಚರ್ಚೆಯಾಗುತ್ತಿದೆ.












Click it and Unblock the Notifications