ಬ್ಲ್ಯಾಕ್ಫಂಗಸ್ ಸೋಂಕಿಗೆ ಅಗತ್ಯ ಪ್ರಮಾಣದಲ್ಲಿ ಔಷಧಿ ದೊರೆಯುತ್ತಿಲ್ಲ: ಸಚಿವ ಡಾ. ಕೆ ಸುಧಾಕರ್
ಚಿಕ್ಕಬಳ್ಳಾಪುರ, ಮೇ, 31: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಅಗತ್ಯವಿರುವ ಔಷಧಿಯ ಕೊರತೆ ಮುಂದುವರಿದಿದೆ ಎಂಬುದನ್ನು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಬಿಚ್ಚಿಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು 1,250 ಮಂದಿಗೆ ಬ್ಲ್ಯಾಕ್ ಫಂಗಸ್ ಸೋಂಕು ಕಾಣಿಸಿಕೊಂಡಿದೆ. ಚಿಕಿತ್ಸೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಆದರೆ ಅಗತ್ಯ ಪ್ರಮಾಣದಲ್ಲಿ ಔಷಧ ಸಿಗುತ್ತಿಲ್ಲ ಎಂದು ಸಚಿವರು ಹೇಳಿದ್ದಾರೆ. ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರ ಜತೆ ನಿರಂತರ ಸಂಪರ್ಕ ಇಟ್ಟುಕೊಂಡು ಸಾಧ್ಯವಾದಷ್ಟು ಔಷಧ ತರಿಸುವ ಕೆಲಸ ಮಾಡಲಾಗುತ್ತಿದೆ. ಪ್ರತಿ ದಿನ ಎಂಟರಿಂದ ಹತ್ತು ಸಾವಿರ ವಯಲ್ಸ್ಗಳ ಅಗತ್ಯವಿದೆ ಎಂದು ಮನವಿ ಮಾಡಲಾಗಿದೆ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯಾದ್ಯಂತ ಆಕ್ಸಿಜನ್ ಬಳಕೆ ಕಡಿಮೆಯಾಗಿದೆ ಎಂದೂ ಸಚಿವರು ತಿಳಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆವಲಗುರ್ಕಿ ಗ್ರಾಮ ಪಂಚಾಯಿತಿಯ ಸೂಲಕುಂಟೆ ಗ್ರಾಮದಲ್ಲಿರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ನಿವಾಸಿಗಳಿಗೆ ಸದ್ಗುರು ಜಗ್ಗಿವಾಸುದೇವ್ ಅವರ ಇಶಾ ಫೌಂಡೇಶನ್ವತಿಯಿಂದ ನೀಡಿರುವ ಆಹಾರ ಧಾನ್ಯಗಳ ಕಿಟ್ ವಿತರಿಸಿ ಸೋಮವಾರ ಅವರು ಮಾತನಾಡಿದರು.
ಮುಂದಿನ ಒಂದು ತಿಂಗಳ ಅವಧಿಗೆ ಕೋವಿಡ್ ಹಿನ್ನೆಯಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ತಜ್ಞರು ವರದಿ ನೀಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯುವ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಕೋವಿಡ್ ಎರಡನೇ ಅಲೆಗೆ ಸಂಬಂಧಿಸಿದಂತೆ ವೈಜ್ಞಾನಿಕ ಅಂಶಗಳ ತಳಹದಿಯ ಮೇಲೆ ಅಧ್ಯಯನ ನಡೆಸಿರುವ ಸಮಿತಿಯು ಮುಂದಿನ ಹದಿನೈದರಿಂದ ಒಂದು ತಿಂಗಳ ಅವಧಿಗೆ ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು ವರದಿಯಲ್ಲಿ ತಿಳಿಸಿದೆ. ಅದನ್ನು ಮುಖ್ಯಮಂತ್ರಿಯವರಿಗೆ ನೀಡಿದ್ದೇವೆ ಎಂದು ಸಚಿವ ಸುಧಾಕರ್ ತಿಳಿಸಿದರು.
ಲಾಕ್ಡೌನ್ನಿಂದ ಕೊರೊನಾ ನಿಯಂತ್ರಣ
ಇದೇ ಸಂದರ್ಭದಲ್ಲಿ ಸಚಿವರು ಲಾಕ್ಡೌನ್ನಿಂದ ಸೋಂಕಿನ ಪ್ರಮಾಣ ತಗ್ಗಿಸಲು ಸಾಧ್ಯವಾಗಿದೆ ಎಂದಿದ್ದಾರೆ. ಶೇಕಡಾ ನಲವತ್ತೈದರಿಂದ ಐವತ್ತರಿಷ್ಟಿದ್ದ ಸೋಂಕಿನ ಪ್ರಮಾಣ ಲಾಕ್ಡೌನ್ ಬಳಿಕ ಶೇಕಡಾ ಹದಿನೈದರಿಂದ ಹದಿನೇಳಕ್ಕೆ ಇಳಿದಿದೆ. ಮೈಸೂರು ಸಹಿತ ಕೆಲ ಜಿಲ್ಲೆಗಳಲ್ಲಿ ಮಾತ್ರ ಸೋಂಕಿನ ಪ್ರಮಾಣ ಇನ್ನೂ ಹೆಚ್ಚಿದೆ. ಇದು ಇನ್ನೂ ಕಡಿಮೆ ಆಗಬೇಕು. ಕಡಿಮೆ ಆಗಿದೆ ಎಂದಾಕ್ಷಣ ಎರಡನೇ ಅಲೆ ಮುಕ್ತಾಯವಾಗಿದೆ ಎಂದು ಭಾವಿಸುವಂತಿಲ್ಲ. ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ಜನರು ಅನುಸರಿಸಬೇಕು. ಎಚ್ಚರ ತಪ್ಪಿದರೆ ಎರಡನೇ ಅಲೆ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.
ಬ್ಲ್ಯಾಕ್ ಫಂಗಸ್ ಕಾರಣ ಪತ್ತೆಗೆ ತಜ್ಞರ ಸಮಿತಿ ರಚನೆ
ಬ್ಲಾಕ್ಫಂಗಸ್ ಸೋಂಕಿಗೆ ಕಾರಣಗಳನ್ನು ಪತ್ತೆ ಹಚ್ಚಲು ತಜ್ಞರ ಸಮಿತಿ ರಚಿಸಲಾಗಿದೆ. ಈಗಾಗಲೇ ಅವರು ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ. ಸಕ್ಕರೆ ಕಾಯಿಲೆ ಇದ್ದು ನಿಯಂತ್ರಣದಲ್ಲಿ ಇಲ್ಲದವರಿಗೆ ಕೋವಿಡ್ ರಿಂದ ಗುಣಮುಖರಾದ ಬಳಿಕ, ಅತಿ ಹೆಚ್ಚು ಆಕ್ಸಿಜನ್ ಬಳಕೆ ಮಾಡಿದ್ದವರಿಗೆ, ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಸ್ಟಿರಾಯ್ಡ್ ಬಳಕೆ ಮಾಡಿದ್ದವರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ ಎಂದು ತಜ್ಞರು ಹೇಳಿದ್ದಾರೆ. ಅಂತಿಮ ವರದಿ ಇನ್ನೂ ಬರಬೇಕಿದೆ ಎಂದು ಸ್ಪಷ್ಟಪಡಿಸಿದರು.
ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ
ನಂದಿ ಪಂಚಾಯಿತಿ ವ್ಯಾಪ್ತಿಯ ಕೊಲಮೇನಹಳ್ಳಿಯಲ್ಲಿರುವ ಮೊರಾರ್ಜಿ ವಸತಿ ಶಾಲೆ ಕ್ಯಾಂಪಸ್ಗೆ ಭೇಟಿ ನೀಡಿದ ಸಚಿವ ಸುಧಾಕರ್ ಜಿಲ್ಲಾಡಳಿತ ಸಿದ್ಧಪಡಿಸಿದ ಕೋವಿಡ್ ಕೇರ್ ಸೆಂಟರ್ಅನ್ನು ಉದ್ಘಾಟಿಸಿದರು. ಬಳಿಕ ಅಧಿಕಾರಿಗಳ ಜತೆ ಮಾತನಾಡಿದ ಅವರು, ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಾಗುವ ಸೋಂಕಿತರಿಗೆ ಉತ್ತಮ ಗುಣಮಟ್ಟದ ಹಾರೈಕೆ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಉತ್ತಮ ಆಹಾರ, ಔಷಧೋಪಚಾರಗಳ ಜೊತೆಗೆ ಅವರಿಗೆ ಮಾನಸಿಕವಾಗಿ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ ಎಂದು ಸೂಚನೆ ನೀಡಿದರು. ಜಿಲ್ಲಾಧಿಕಾರಿ ಆರ್. ಲತಾ ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.
Recommended Video
ವೈದ್ಯರ ನಡೆ ಹಳ್ಳಿ ಕಡೆ
ಸಂಜೆ ಗೌರಿಬಿದನೂರು ತಾಲ್ಲೂಕು ಮಂಚೇನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ಸಚಿವ ಸುಧಾಕರ್ ಅವರು ಚಾಲನೆ ನೀಡಿದರು. ವೈದ್ಯರ ನಡಿಗೆ ಗ್ರಾಮಗಳ ಕಡೆಗೆ ನಿಜಕ್ಕೂ ಅತ್ಯುತ್ತಮ ಕಾರ್ಯಕ್ರಮ. ಜನರ ಬಳಿಗೆ ತೆರಳಿ ಸರ್ಕಾರದ ಸವಲತ್ತುಗಳನ್ನು ಒದಗಿಸುವುದು ಎಂದಿಗೂ ಉತ್ತಮ ಕೆಲಸ. ಇಂಥ ಆರೋಗ್ಯದ ತುರ್ತು ಪರಿಸ್ಥಿತಿಯಲ್ಲಿ ವೈದ್ಯರೇ ಗ್ರಾಮಗಳಿಗೆ ತೆರಳಿ ತಪಾಸಣೆ ಮಾಡುವುದು ನಿಜಕ್ಕೂ ಉತ್ತಮ ಕಾರ್ಯಕ್ರಮವಾಗಿದೆ ಎಂದೂ ಸಚಿವ ಸುಧಾಕರ್ ಹೇಳಿದರು.