ತಕರಾರು ಪ್ರಕರಣಗಳ ಇತ್ಯರ್ಥಕ್ಕೆ ಗಡುವು ನೀಡಿದ ಸಚಿವ ಕೃಷ್ಣ ಬೈರೇಗೌಡ!
ಮೈಸೂರು: 6 ತಿಂಗಳಿಂದ 5 ವರ್ಷ ತನಕ ಎಲ್ಲ ತಕರಾರು ಪ್ರಕರಣಗಳನ್ನೂ ತಹಶೀಲ್ದಾರ್, ಎಸಿ ಹಾಗೂ ಡಿಸಿ ನ್ಯಾಯಾಲಯಗಳು ಮೂರು ತಿಂಗಳ ಕಾಲಮಿತಿಯಲ್ಲಿ ಇತ್ಯರ್ಥಪಡಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ.
ಅಷ್ಟಕ್ಕೂ ಮೈಸೂರು ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ, ಜನರಿಗೆ ಉತ್ತಮ ಆಡಳಿತ ನೀಡುತ್ತೇವೆ ಎಂದು ನಮ್ಮ ಸರ್ಕಾರ ಭರವಸೆ ನೀಡಿದೆ. ಆದರೆ ಅಧಿಕಾರಿಗಳ ಸಹಕಾರ ಇಲ್ಲದೆ ನಾವು ಕೊಟ್ಟ ಭರವಸೆ ಈಡೇರಿಸಲು ಆಗಲ್ಲ. ಅಧಿಕಾರಿಗಳು ಉತ್ತಮವಾಗಿ ಆಡಳಿತಕ್ಕೆ ಅನುವಾಗುವ ಬದಲಾಗಿ, ಜನ ಸಾಮಾನ್ಯರ ಸಾವಿರಾರು ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸದೆ ಇರುವ ಕಾರಣ ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿಸಿದ್ದಾರೆ ಎಂದರು.

3 ತಿಂಗಳ ಒಳಗಾಗಿ ಇತ್ಯರ್ಥಗೊಳಿಸಬೇಕು
ಇನ್ನು ಮೈಸೂರು ಪ್ರಾದೇಶಿಕ ವಿಭಾಗದ ವ್ಯಾಪ್ತಿಯ ತಹಶೀಲ್ದಾರ್ ನ್ಯಾಯಾಲಯಗಳಲ್ಲಿ 6 ತಿಂಗಳಿಂದ 5 ವರ್ಷ ತನಕ ಒಟ್ಟು 4,362 ತಕರಾರು ಪ್ರಕರಣಗಳು ಈವರೆಗೆ ಇತ್ಯರ್ಥವಾಗದೆ ಬಾಕಿ ಉಳಿದಿವೆ. ಇದರಿಂದಾಗಿ ಸಂಬಂಧಪಟ್ಟವರು ನಿತ್ಯ ತಹಶೀಲ್ದಾರ್ ಕಚೇರಿಗೆ ಅಲೆಯುವ ಸ್ಥಿತಿ ಬಂದಿದೆ. ಹೀಗಾಗಿ ತಹಶೀಲ್ದಾರ್ ಕಚೇರಿಯಲ್ಲಿ ಬಾಕಿ ಉಳಿದ ಪ್ರಕರಣಗಳನ್ನು ಮುಂದಿನ 3 ತಿಂಗಳ ಒಳಗಾಗಿ ಇತ್ಯರ್ಥಗೊಳಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದರು.
14,444 ಪ್ರಕರಣಗಳು ಬಾಕಿ ಇವೆ!
ಮೈಸೂರು ಪ್ರಾದೇಶಿಕ ವಿಭಾಗದ ಉಪ ವಿಭಾಗಾಧಿಕಾರಿ (ಎಸಿ) ಹಾಗೂ ಜಿಲ್ಲಾಧಿಕಾರಿ (ಡಿಸಿ) ನ್ಯಾಯಾಲಯಗಳಲ್ಲೂ ಸಾಕಷ್ಟು ತಕರಾರು ಪ್ರಕರಣಗಳು ಬಾಕಿ ಉಳಿದಿವೆ. ಕೊಳ್ಳೆಗಾಲ 540, ಚಿಕ್ಕಮಗಳೂರು 473, ತರೀಕರೆ 952, ಮಂಗಳೂರು 3,627, ಪುತ್ತೂರು 243, ಹಾಸನ 678, ಸಕಲೇಶಪುರ 189, ಮಡಿಕೇರಿ 827, ಮಂಡ್ಯ 1,456, ಪಾಂಡವಪುರ 1,111, ಮೈಸೂರು 1,535, ಹುಣಸೂರು 751, ಕುಂದಾಪುರದಲ್ಲಿ 2,061 ಕೇಸ್ ಸೇರಿ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ಒಟ್ಟಾರೆಯಾಗಿ 14,444 ಪ್ರಕರಣಗಳು ಬಾಕಿ ಇವೆ ಎಂದರು.

ಸಚಿವರಿಂದ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ
ಜಿಲ್ಲಾಧಿಕಾರಿ ನ್ಯಾಯಾಲಯಗಳ ಪೈಕಿ ಚಿಕ್ಕಮಗಳೂರು 652, ಚಾಮರಾಜನಗರ 213, ದಕ್ಷಿಣ ಕನ್ನಡ 507, ಹಾಸನ 547, ಕೊಡಗು 140, ಮಂಡ್ಯ 320, ಮೈಸೂರು 1040, ಉಡುಪಿ 130 ಪ್ರಕರಣ ಸೇರಿದಂತೆ ಒಟ್ಟಾರೆಯಾಗಿ 3,513 ಪ್ರಕರಣಗಳು ಬಾಕಿ ಇವೆ. ಪರಿಶೀಲನೆ ವೇಳೆ ಎಸಿ-ಡಿಸಿ ನ್ಯಾಯಾಲಯಗಳಲ್ಲೂ ಬಾಕಿ ಇರುವ ಕೇಸ್ಗಳ ಬಗ್ಗೆ ಅಸಮಾಧಾನ ಹೊರಹಾಕಿದ ಸಚಿವರು, ಉನ್ನತ ಅಧಿಕಾರಿಗಳೇ ತಮ್ಮ ನ್ಯಾಯಾಲಯದ ಕೇಸ್ನ್ನು ಇತ್ಯರ್ಥಪಡಿಸದಿದ್ದರೆ, ತಹಶೀಲ್ದಾರರಿಂದ ನೀವು ಹೇಗೆ ಪರಿಣಾಮಕಾರಿ ಕೆಲಸ ನಿರೀಕ್ಷೆ ಮಾಡಲು ಸಾಧ್ಯ. ಹೀಗಾಗಿ ನೀವು ಇತರರಿಗೆ ತಪ್ಪು ಉದಾಹರಣೆಯಾಗಬೇಡಿ ಎಂದು ಸಚಿವರು ಸಲಹೆ ನೀಡಿದರು.
7000 ಪ್ರಕರಣಗಳಿಗೆ 4 ತಿಂಗಳ ಡೆಡ್ಲೈನ್!
ಉಪ ವಿಭಾಗಾಧಿಕಾರಿಗಳು ತಮ್ಮ ನ್ಯಾಯಾಲಯದಲ್ಲಿ ಬಾಕಿ ಪ್ರಕರಣಗಳ ಪೈಕಿ 6 ತಿಂಗಳಿಗಿಂತ ಹಳೆಯ ಎಲ್ಲ ಪ್ರಕರಣಗಳೂ ಸೇರಿ ಉಳಿದ 7000 ಪ್ರಕರಣಗಳನ್ನೂ ಮುಂದಿನ 4 ತಿಂಗಳಲ್ಲಿ ವಿಲೇವಾರಿ ಮಾಡಬೇಕು. ಜಿಲ್ಲಾಧಿಕಾರಿಗಳೂ ತಮ್ಮ ನ್ಯಾಯಾಲಯದಲ್ಲಿರುವ 6 ತಿಂಗಳಿಗಿಂತ ಹಳೆಯ ಎಲ್ಲ ಪ್ರಕರಣಗಳನ್ನೂ ಮುಂದಿನ 3 ತಿಂಗಳಲ್ಲಿ ವಿಲೇವಾರಿ ಮಾಡಬೇಕು. ಮುಂದಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಫಲಿತಾಂಶ ನೀಡಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಸೂಚಿಸಿದರು.
ಇದರ ಜೊತೆಗೆ ತಹಶೀಲ್ದಾರರು ವಾರದಲ್ಲಿ ಕನಿಷ್ಠ 2 ದಿನ ನ್ಯಾಯಾಲಯ ನಡೆಸಿ ಪ್ರಕರಣಗಳ ವಿಲೇವಾರಿಗೆ ವೇಗ ನೀಡಬೇಕು. ಉಪವಿಭಾಗಾಧಿಕಾರಿಗಳು ವಾರದಲ್ಲಿ 3 ದಿನ ನ್ಯಾಯಾಲಯ ನಡೆಸಿ ಬಾಕಿ ಕೇಸ್ಗಳನ್ನ ತ್ವರಿತ ವಿಲೇವಾರಿಗೊಳಿಸಿ ವಿಳಂಬ ಪರಿಹರಿಸಬೇಕೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಅಧಿಕ ಸಂಖ್ಯೆಯಲ್ಲಿ ಪ್ರಕರಣ ವಿಲೇವಾರಿ ನೆಪದಲ್ಲಿ ಗುಣಮಟ್ಟದ ಜೊತೆಗೆ ಹೊಂದಾಣಿಕೆ ಸಲ್ಲದು ಎಂದು ಸಚಿವರು ಅಧಿಕಾರಿಗಳಿಗೆ ಮುನ್ನೆಚ್ಚರಿಕೆ ನೀಡಿದರು.












Click it and Unblock the Notifications