ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಪರೋಕ್ಷ ಟಾಂಗ್ ಕೊಟ್ಟ ಅತ್ಯಾಪ್ತ ಸಚಿವ?
ಬೆಂಗಳೂರು, ಸೆ. 06: ಬಸವರಾಜ ಬೊಮ್ಮಾಯಿ ಅವರು ನಾಯಕತ್ವ ವಹಿಸಿಕೊಂಡ ಒಂದೇ ತಿಂಗಳಲ್ಲಿ ಮೂರು ಪ್ರಮುಖ ಗೆಲುವುಗಳೊಂದಿಗೆ ಸಿಕ್ಸರ್ ಹೊಡೆದಿದ್ದಾರೆ ಎಂದು ಬೃಹತ್ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಆ ಮೂಲಕ ತಮಗೆ ಮುಖ್ಯಮಂತ್ರಿ ಪಟ್ಟ ತಪ್ಪಿಸಿದ್ದವರ ಮೇಲೆ ಪರೋಕ್ಷ ವಾಗ್ದಾಳಿ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳದಿದ್ದರೂ ನಾವು ಎರಡನೇ ಹಂತದ ನಾಯಕರು ಪ್ರಚಾರ ಮಾಡಿ ಗೆದ್ದಿದ್ದೇವೆ. ಇದರಿಂದ ನಮ್ಮ ಶಕ್ತಿ ಎಷ್ಟಿದೆ ಎಂಬುದನ್ನು ನೋಡಿ ಎಂದು ಹೇಳಿಕೆ ಕೊಡುವ ಮೂಲಕ ಹಿಂದಿನಂತೆ ಬಿಜೆಪಿ ಈಗ ಯಾರೊಬ್ಬರನ್ನು ನಂಬಿಕೊಂಡಿಲ್ಲ ಎಂಬುದನ್ನು ಪರೋಕ್ಷವಾಗಿ ಸ್ಪಷ್ಟವಾಗಿದೆ ಹೇಳಿದ್ದಾರೆ.
ಇತ್ತೀಚೆಗೆ ದಾವಣಗೆರೆಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಂದಿನ ವಿಧಾನಸಭಾ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸುತ್ತೇವೆ ಎಂದು ಹೇಳಿಕೆ ಕೊಟ್ಟಿದ್ದರು. ಆ ಹೇಳಿಕೆ ರಾಜ್ಯ ಬಿಜೆಪಿಯಲ್ಲಿ ತೀವ್ರ ಸಂಚಲವನ್ನುಂಟು ಮಾಡಿದೆ. ಅದೇ ಹಿನ್ನೆಲೆಯಲ್ಲಿ ಸಚಿವ ನಿರಾಣಿ ಅವರು ಹೇಳಿಕೆ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ.
ಇತಿಹಾಸದಲ್ಲಿ ಮೊದಲ ಬಾರಿ ಗೆದ್ದಿದ್ದೇವೆ!
ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ಸಂಖ್ಯಾ ಬಲದೊಂದಿಗೆ ಇತಿಹಾಸದಲ್ಲೇ ಮೊದಲ ಬಾರಿಗೆ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಬೆಂಗಳೂರಿನಲ್ಲಿ ಹೇಳಿದ್ದಾರೆ. ಮತದಾರರು ನಮಗೆ ಸಂಪೂರ್ಣವಾಗಿ ಬಹಮತ ನೀಡಿಲ್ಲ. ಶಾಸಕರು, ವಿಧಾನಪರಿಷತ್ ಸದಸ್ಯರು ಜೊತೆಗೆ ಪಕ್ಷೇತರರು ಕೂಡ ನಮಗೆ ಬೆಂಬಲ ನೀಡಲು ಮುಂದೆ ಬಂದಿದ್ದಾರೆ. ಹೀಗಾಗಿ ಈ ಬಾರಿ ಪಾಲಿಕೆಯಲ್ಲಿ ನಾವೇ ಅಧಿಕಾರ ಹಿಡಿಯುತ್ತವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಕೊರೊನಾ ಕಾಲದಲ್ಲಿ ಮಾಡಿದ ಕೆಲಸಕ್ಕೆ ಸ್ಪಂದನೆ!
ಈಗಾಗಲೇ ನಾಲ್ವರು ಪಕ್ಷೇತರ ಸದಸ್ಯರು ನಮಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಸಂಸದರು, ವಿಧಾನಪರಿಷತ್ ಸದಸ್ಯರು, ಶಾಸಕರ ಬೆಂಬಲದೊಂದಿಗೆ ಅಧಿಕಾರಕ್ಕೆ ಬರಲಿದ್ದೇವೆ. ಕೋವಿಡ್ ಸಂದರ್ಭದಲ್ಲಿ ಜಿಲ್ಲೆಯ ಜನತೆಗೆ ಹಗಲು-ರಾತ್ರಿ ಎನ್ನದೆ ನಾವು ಕೆಲಸ ಮಾಡಿದ್ದೆವು. ಸ್ಯಾನಿಟೈಸರ್ ಬಳಕೆ, ಮಾಸ್ಕ್ ವಿತರಣೆ, ಆಸ್ಪತ್ರೆಗಳಿಗೆ ಬೆಡ್ ಸೇರಿದಂತೆ ಹತ್ತು ಹಲವು ಸೌಕರ್ಯಗಳನ್ನು ಕಲ್ಪಿಸಿದ್ದೆವು. ಈಗ ನಮಗೆ ಮತ ಹಾಕಿರುವವರೂ ಸೇರಿದಂತೆ ಜಿಲ್ಲೆಯ ಜನರಿಗೆ ಅಭಾರಿಯಾಗಿದ್ದೇನೆ ಎಂದು ನಿರಾಣಿ ಹೇಳಿದ್ದಾರೆ.
ಚುನಾವಣೆಯನ್ನು ಸವಾಲಾಗಿ ತೆಗೆದುಕೊಂಡಿದ್ದೆ!
ಈ ಚುನಾವಣೆಯನ್ನು ನಾನು ಸವಾಲಾಗಿ ತೆಗೆದುಕೊಂಡಿದ್ದೆ. ಪಕ್ಷದ ವರಿಷ್ಠರು ನನ್ನ ಮೇಲೆ ವಿಶ್ವಾಸವಿಟ್ಟಿದ್ದರು. ಅದೇ ರೀತಿ ನಾನು ನಮ್ಮ ಪಕ್ಷದ ಪ್ರಧಾನಕಾರ್ಯದರ್ಶಿ ರವಿಕುಮಾರ್, ಶಾಸಕರು, ವಿಧಾನಪರಿಷತ್ ಸದಸ್ಯರು, ಲೋಕಸಭೆ ಸದಸ್ಯರು, ಮುಖಂಡರು ಸೇರಿದಂತೆ ಪ್ರತಿಯೊಬ್ಬರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪ್ರಚಾರ ನಡೆಸಿದೆವು. ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಆಗಬಹುದಾದ ಲಾಭಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೆವು. ಮತದಾರರು ಇದನ್ನು ಒಪ್ಪಿ ನಮಗೆ ಹೆಚ್ಚಿನ ಸ್ಥಾನಗಳನ್ನು ನೀಡಿದ್ದಾರೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಚುನಾವಣಾ ಉಸ್ತುವಾರಿ ನಿರಾಣಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಅಮಿತ್ ಶಾ ಹೇಳಿಕೆಗೆ ನಿರಾಣಿ ಪ್ರತಿಕ್ರಿಯೆ!
ಮಾಜಿ ಸಿಎಂ ಯಡಿಯೂರಪ್ಪ ನಮ್ಮ ಪಕ್ಷದ ನಾಯಕರು. ಅವರು ಪ್ರಚಾರ ಮಾಡದಿದ್ದರೂ ಪಕ್ಷಕ್ಕೆ ಯಾವಾಗಲೂ ಅವರ ಮಾರ್ಗದರ್ಶನ ಇದ್ದೇ ಇರುತ್ತದೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಜೊತೆಗೆ ಮುಂದಿನ ಚುನಾವಣೆ ಯಾರ ನಾಯಕತ್ವದಲ್ಲಿ ಎಂಬುದರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆ ನಡೆಯಲಿದೆ ಎಂಬ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ನಿರಾಣಿ ಅವರು, ಪಕ್ಷದ ವರಿಷ್ಠರು ಏನೇ ತೀರ್ಮನ ತೆಗೆದುಕೊಂಡರೂ ಅದಕ್ಕೆ ನಾವೆಲ್ಲ ಬದ್ಧರಾಗಿದ್ದೇವೆ. ನಾನು ಪಕ್ಷದ ಶಿಸ್ತಿನ ಶಿಫಾಯಿ ಆಗಿದ್ದು, ವರಿಷ್ಠರ ತೀರ್ಮಾನವೇ ಅಂತಿಮ ಎಂದಿದ್ದಾರೆ.
ಆದರೂ ಸದ್ಯ ಬಿಜೆಪಿಯಲ್ಲಿ ಅಮಿತ್ ಶಾ ಅವರ ಹೇಳಿಕೆಗೆ ಒಳಗೊಳಗೆ ವಿರೋಧ ವ್ಯಕ್ತವಾಗಿದೆ ಎಂಬ ಮಾಹಿತಿ ಬಂದಿದೆ. ಇದೆಲ್ಲವನ್ನೂ ಬಿಜೆಪಿ ಹೈಕಮಾಂಡ್ ಹೇಗೆ ಶಮನಮಾಡುತ್ತದೆ ಎಂಬುದು ಕೂಡ ಕುತೂಹಲ ಮೂಡಿಸಿದೆ.
Recommended Video