ಕರ್ನಾಟಕದಲ್ಲಿ ದಿಢೀರ್ ಪ್ರವಾಹಕ್ಕೆ ಮಹಾರಾಷ್ಟ್ರ ಕಾರಣ!
ಬೆಂಗಳೂರು, ಆಗಸ್ಟ್ 07: ರಾಜ್ಯ ಸರ್ಕಾರದ ಮನವಿಯ ಹೊರತಾಗಿಯೂ ಪ್ರತಿ ವರ್ಷ ಮಹಾರಾಷ್ಟ್ರ ಸರ್ಕಾರ ಯಾವುದೇ ಸೂಚನೆ ನೀಡದೆ ಏಕಾಏಕಿ ಕೃಷ್ಣಾ ಸೇರಿದಂತೆ ಮಹಾರಾಷ್ಟ್ರದಿಂದ ರಾಜ್ಯದಲ್ಲಿ ಹರಿಯುವ ನದಿಗಳಿಗೆ ನೀರು ಬಿಡುಗಡೆ ಮಾಡುತ್ತದೆ. ಇದರಿಂದಾಗಿ ರಾಜ್ಯದಲ್ಲಿ ಏಕಾಏಕಿ ಪ್ರವಾಹ ಪರಿಸ್ಥಿತಿ ಉಂಟಾಗುತ್ತದೆ. ಪ್ರತಿ ವರ್ಷದ ಈ ಸಮಸ್ಯೆಯನ್ನು ನೀಗಿಸಲು ರಾಜ್ಯ ಸರ್ಕಾರ ಮುಂದಾಗಿದೆ.
Recommended Video
ಜಲಾಶಯಗಳಲ್ಲಿನ ನೀರಿನ ಪ್ರಮಾಣ ಹಾಗೂ ನೀರು ಬಿಡುಗಡೆಗೆ ಸಂಬಂಧಿಸಿದಂತೆ ಮಾಹಾರಾಷ್ಟ್ರ ಸರ್ಕಾರದೊಂದಿಗೆ ಮಾಹಿತಿ ವಿನಿಮಯ ಮತ್ತಿತರ ಸಮನ್ವಯ ಸಾಧಿಸಲು ರಾಜ್ಯದ ನೋಡಲ್ ಅಧಿಕಾರಿ ನೇಮಕಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸೂಚನೆ ನೀಡಿದ್ದಾರೆ. ಬೆಳಗಾವಿಯಲ್ಲಿ ಪ್ರವಾಹ ನಿರ್ವಹಣೆ ಕುರಿತಂತೆ ಅಧಿಕಾರಿಗಳ ಸಭೆಯನ್ನು ನಡೆಸಿದ್ದು, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಹಲವು ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದ್ದಾರೆ.
ತುಂಬಿದ ಕದ್ರಾ ಜಲಾಶಯ; ಕಾಳಿ ನದಿಗೆ 58,000 ಕ್ಯೂಸೆಕ್ ನೀರು
ಮಹಾರಾಷ್ಟ್ರದ ಸಮಸ್ಯೆ
ಕೋಯ್ನಾ ಸೇರಿದಂತೆ ಮಹಾರಾಷ್ಟ್ರದ ಜಲಾಶಯಗಳಲ್ಲಿ ನೀರಿನ ಪ್ರಮಾಣ ಹೆಚ್ಚಳವಾದಾಗ ಮಹಾರಾಷ್ಟ್ರ ತಕ್ಷಣವೇ ನೀರು ಬಿಡುಗಡೆ ಮಾಡುತ್ತದೆ. ನೀರು ಬಿಡುಗಡೆ ಮಾಡುವಾಗ ಕರ್ನಾಟಕ ಸರ್ಕಾರಕ್ಕೆ ಮಾಹಿತಿಯನ್ನೂ ರವಾನಿಸುವುದಿಲ್ಲ. ಇದರಿಂದಾಗಿ ದಿಢೀರ್ ಪ್ರವಾಹ ಪರಿಸ್ಥಿತಿ ಉಂಟಾಗುತ್ತದೆ. ಆದ್ದರಿಂದ ನಿರಂತರ ನಿಗಾ ವಹಿಸಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿಶೇಷವಾಗಿ ಕೊಯ್ನಾ ಮತ್ತು ರಾಜ್ಯದ ಆಲಮಟ್ಟಿ ಜಲಾಶಯಗಳ ಬಗ್ಗೆ ಉಭಯ ರಾಜ್ಯಗಳ ಅಧಿಕಾರಿಗಳು ಸತತ ಮಾಹಿತಿ ವಿನಿಮಯ ಮತ್ತು ಸಮನ್ವಯತೆ ಸಾಧಿಸಬೇಕು. ಅದಕ್ಕಾಗಿ ಪ್ರತ್ಯೇಕ ನ್ಯೂಡಲ್ ಅಧಿಕಾರಿ ನೇಮಕ ಮಾಡಿ ಎಂದಿದ್ದಾರೆ.
ಕೆರೆ ತುಂಬಿಸಿ
ರಾಜ್ಯ ಹಾಗೂ ಜಿಲ್ಲೆಯ ಜಲಾಶಯಗಳಿಂದ ಮೊದಲು ಕೆರೆಗಳನ್ನು ತುಂಬಿಸಬೇಕು. ಇದಾದ ಬಳಿಕವೇ ಜಲಾಶಯಗಳಿಂದ ನದಿಗೆ ನೀರು ಬಿಡುಗಡೆ ಮಾಡಬೇಕು ಎಂದು ಸೂಚಿಸಲಾಗಿದೆ.
ರಾಜ್ಯದಲ್ಲಿರುವ ಕೆರೆಗಳಿಗೆ ಜಲಾಶಯಗಳಿಂದ ನೀರು ತುಂಬಿಸುವ ಯೋಜನೆಯನ್ನು ಸರಿಯಾಗಿ ನಿರ್ವಹಣೆ ಮಾಡಬೇಕು. ಜೊತೆಗೆ ಕೆರೆಗಳಿಗೆ ನೀರು ತುಂಬಿಸಿದ ಬಳಿಕವಷ್ಟೇ ಜಲಾಶಯಗಳ ಗೇಟ್ ತೆರೆಯಬೇಕು ಎಂದು ರಮೇಶ್ ಜಾರಕಿಹೊಳಿ ರಾಜ್ಯದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೆಳಗಾವಿಯಲ್ಲಿ ಬಿರುಸು ಪಡೆದ ಮಳೆ; ಜಲಾಶಯಗಳ ನೀರಿನ ಮಟ್ಟ ಏರಿಕೆ
ಸಿಎಂ ಮುತುವರ್ಜಿ
ಪ್ರವಾಹ ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೆಚ್ಚಿನ ಮುತುವರ್ಜಿ ವಹಿಸಿದ್ದಾರೆ. ನಿನ್ನೆ ಮೂರ್ನಾಲ್ಕು ಬಾರಿ ನನ್ನೊಂದಿಗೆ ದೂರವಾಣಿಯಲ್ಲಿ ಚರ್ಚೆ ನಡೆಸಿದ್ದಾರೆ.
ಆದ್ದರಿಂದ ಎಲ್ಲ ಅಧಿಕಾರಿಗಳು ತುರ್ತು ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಎಲ್ಲ ರೀತಿಯ ಮುನ್ನೆಚ್ಚರಿಕೆ ವಹಿಸಬೇಕು. ಈ ವರ್ಷ ಕೊರೊನಾ ವೈರಸ್ ಹಾಗೂ ಪ್ರವಾಹ ಪರಿಸ್ಥಿತಿ ಎರಡೂ ಸವಾಲುಗಳನ್ನು ಸಮರ್ಪಕವಾಗಿ ನಿಭಾಯಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದಿದ್ದಾರೆ.
ತಕ್ಷಣ ಸೂಚನೆ ಕೊಡಿ
ಮಹಾರಾಷ್ಟ್ರ ರಾಜ್ಯದ ಜಲಾಶಯಗಳಿಂದ ನದಿಗೆ ನೀರು ಬಿಟ್ಟ ತಕ್ಷಣವೇ ನಮ್ಮ ರಾಜ್ಯದ ಜಲಾಶಯಗಳಿಂದಲೂ ನೀರು ಬಿಡುಗಡೆ ಮಾಡುವ ಬಗ್ಗೆ ಸೂಚನೆ ನೀಡಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ ಜಲಾಶಯಗಳ ಭರ್ತಿಗೆ ಇನ್ನೂ ಕಾಲಾವಕಾಶ ಇರುವುದರಿಂದ ಸದ್ಯಕ್ಕೆ ಯಾವುದೇ ತೊಂದರೆಯಿಲ್ಲ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದ್ದಾರೆ.
ಪ್ರವಾಹ ನಿರ್ವಹಣೆಗೆ ಎಲ್ಲ ತಾಲೂಕು ಮತ್ತು ಗ್ರಾಮಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ನದಿ ತೀರದ ಗ್ರಾಮಗಳಿಗೆ ಈಗಾಗಲೇ ಭೇಟಿ ನೀಡಿ ಪರಿಶೀಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಿರೇಮಠ ಸಭೆಯಲ್ಲಿ ತಿಳಿಸಿದರು.
ಆಲಮಟ್ಟಿ ಜಲಾಶಯ
ಮಹಾರಾಷ್ಟ್ರದ ಜಲಾಶಯಗಳಿಂದ ಬಿಡುಗಡೆ ಮಾಡುವ ನೀರಿನ ಪ್ರಮಾಣವನ್ನು ಆಧರಿಸಿ ಆಲಮಟ್ಟಿ ಆಣೆಕಟ್ಟೆಯಿಂದ ನೀರು ಬಿಡುಗಡೆ ಬಗ್ಗೆ ಈಗಾಗಲೇ ನಿರ್ಧರಿಸಲಾಗಿದೆ. ಕಳೆದ ಬಾರಿ ಎಲ್ಲೆಲ್ಲಿ ಪರಿಹಾರ ಕೇಂದ್ರ ಮತ್ತು ಜಾನುವಾರು ಕೇಂದ್ರ ಸ್ಥಾಪಿಸಲಾಗಿತ್ತು, ಅದೇ ಸ್ಥಳದಲ್ಲಿ ಈ ಬಾರಿ ಕೂಡ ಸಿದ್ಧತೆ ಮಾಡಿಕೊಳ್ಳಲಾಗಿದೆ. ನದಿ ತೀರದ ಜನರಿಗೆ ಆಗಾಗ ಎಚ್ಚರಿಕೆ ನೀಡಲಾಗುತ್ತಿದೆ. ಚಿಕ್ಕೋಡಿ ಭಾಗದಲ್ಲಿ ಕಳೆದ ವರ್ಷ ಆರಂಭಿಸಲಾಗಿದ್ದ ಪರಿಹಾರ ಕೇಂದ್ರ ಸಿದ್ಧವಾಗಿಟ್ಟುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ಸಚಿವರಿಗೆ ಮಾಹಿತಿ ಕೊಟ್ಟಿದ್ದಾರೆ.