ನೇಕಾರರಿಗೆ ಉಚಿತ ವಿದ್ಯುತ್; ಗುಡ್ ನ್ಯೂಸ್ ಕೊಟ್ಟ ಸಚಿವ ಶಿವಾನಂದ ಪಾಟೀಲ
ಬೆಳಗಾವಿ, ಡಿಸೆಂಬರ್ 13: ವಿದ್ಯುತ್ ಮಗ್ಗಗಳಿಗೆ ಹತ್ತು ಅಶ್ವಶಕ್ತಿವರೆಗೆ ನವೆಂಬರ್ 2023ರಿಂದ ಜಾರಿ ಮಾಡಿರುವ ಉಚಿತ ವಿದ್ಯುತ್ ಪೂರೈಕೆ ಯೋಜನೆಯನ್ನು 2023ರ ಏಪ್ರಿಲ್ನಿಂದ ಅನ್ವಯಗೊಳಿಸುವಂತೆ ನೇಕಾರರ ಬೇಡಿಕೆಯನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಹತ್ತು ಅಶ್ವಶಕ್ತಿವರೆಗಿನ ವಿದ್ಯುತ್ ಮಗ್ಗಗಳಿಗೆ ಉಚಿತ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಈ ಆದೇಶ ನವೆಂಬರ್ -2023 ರಿಂದ ಜಾರಿಗೆ ಬಂದಿದ್ದು, ಅಂದಿನಿಂದ ಅನ್ವಯವಾಗುತ್ತಿದೆ. ನೇಕಾರರ ಬೇಡಿಕೆಯಂತೆ ಹತ್ತರಿಂದ ಇಪ್ಪತ್ತು ಅಶ್ವಶಕ್ತಿವರೆಗೆ ಪ್ರತಿ ಯೂನಿಟ್ಗೆ ರೂ 1.25 ರಿಯಾಯಿತಿ ದರದಲ್ಲಿ ವಿದ್ಯುತ್ ಸೌಲಭ್ಯ ನೀಡಲಾಗುತ್ತಿದೆ. ಈ ಯೋಜನೆಗಳಿಂದಾಗಿ ಸರ್ಕಾರಕ್ಕೆ ವಾರ್ಷಿಕ 120 ರಿಂದ 130 ಕೋಟಿ ರೂ. ವೆಚ್ಚವಾಗುತ್ತಿದೆ ಎಂದು ಸಚಿವ ಶಿವಾನಂದ ಪಾಟೀಲ ವಿವರಿಸಿದರು.

ಅನೇಕ ನೇಕಾರರು ಉಚಿತ ವಿದ್ಯುತ್ ಯೋಜನೆ ಜಾರಿಗೆ ಬರುವವರೆಗೆ ವಿದ್ಯುತ್ ಬಿಲ್ ಪಾವತಿ ಮಾಡಿದ್ದಾರೆ. ಕೆಲವರು ಮಾತ್ರ ಬಾಕಿ ಉಳಿಸಿಕೊಂಡಿದ್ದಾರೆ. ಯಾವುದೇ ಯೋಜನೆ ಸರ್ಕಾರದ ಆದೇಶ ಹೊರಬಿದ್ದ ನಂತರವೇ ಅನ್ವಯವಾಗಲಿದೆ. ಆದರೂ ಆದೇಶ ಹೊರ ಬೀಳುವ ಮುಂಚಿನ ಅವಧಿಗೂ ಅನ್ವಯ ಮಾಡಬೇಕು ಎಂಬ ಶಾಸಕರ ಬೇಡಿಕೆಗಳಿಗೆ ಸರ್ಕಾರ ಸಕಾರಾತ್ಮವಾಗಿ ಸ್ಪಂದಿಸುತ್ತಿದೆ. ಈ ಬೇಡಿಕೆಗೆ ಆರ್ಥಿಕ ಇಲಾಖೆ ಅನುಮತಿ ಅಗತ್ಯವಿದೆ. ಹೀಗಾಗಿ ಬೇಡಿಕೆ ಪರಿಗಣಿಸಲು ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದ ಸಚಿವ ಶಿವಾನಂದ ಪಾಟೀಲ, ವಿಷಯದ ಕುರಿತು ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿವರಣೆ ನೀಡಿದರು.
ಅಂದಾಜು ರೂ.20 ಕೋಟಿಯಷ್ಟು ನೇಕಾರರ ವಿದ್ಯುತ್ ಬಾಕಿ ಮೊತ್ತವಿದೆ. ಇದನ್ನು ಮನ್ನಾ ಮಾಡುವುದರಿಂದ ಸರ್ಕಾರಕ್ಕೆ ಹೊರೆಯಾಗುವುದಿಲ್ಲ. ಕೂಡಲೇ ಸಚಿವರು ಈ ಕುರಿತು ತೀರ್ಮಾನಕೈಗೊಳ್ಳಬೇಕು. ಅಲ್ಲಿಯವರೆಗೂ ವಿದ್ಯುತ್ ಸರಬರಾಜು ಕಂಪನಿಗಳು ನೇಕಾರ ಕೈಮಗ್ಗಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸದಂತೆ ನಿರ್ದೇಶನ ನೀಡಬೇಕು ಎಂದು ಶಾಸಕರಾದ ಶಶಿಕಲಾ ಜೊಲ್ಲೆ, ಸಿದ್ದು ಸವದಿ, ಬಿ.ವೈ.ವಿಜಯೇಂದ್ರ, ಪ್ರಭು ಚವ್ಹಾಣ್ ಕೋರಿದರು.
ಎಸ್ಸಿಎಸ್ಪಿ, ಟಿಎಸ್ಪಿ ಹಣ ದುರ್ಬಳಕೆಯಾಗಿಲ್ಲ: ಮಹಾದೇವಪ್ಪ
ಗ್ಯಾರಂಟಿ ಯೋಜನೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಫಲಾನುಭವಿಗಳ ಜನಸಂಖ್ಯೆಗೆ ಅನುಗುಣವಾಗಿ ಎಸ್ಸಿಎಸ್ಪಿ ಹಾಗೂ ಟಿಎಸ್ಪಿ ಅನುದಾನವನ್ನು ಬಳಕೆ ಮಾಡಿದ್ದು, ಹಣ ದುರ್ಬಳಕೆಯಾಗಿಲ್ಲ ಎಂದು ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಅವರು ತಿಳಿಸಿದರು. ಎಸ್ಸಿಎಸ್ಪಿ ಹಾಗೂ ಟಿಎಸ್ಪಿ ಕಾಯ್ದೆಯ ಸೆಕ್ಷನ್ 7(ಸಿ) ರಡಿ ಸಾಮಾನ್ಯ ಸಾಮಾಜಿಕ ವಲಯದ ಕಾರ್ಯಕ್ರಮಗಳ ಫಲಾನುಭವಿಗಳ ಜನಸಂಖ್ಯೆಯ ಪ್ರಮಾಣಕ್ಕನುಗುಣವಾಗಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅಡಿಯಲ್ಲಿ ಅನುದಾನವನ್ನು ಹಂಚಿಕೆ ಮಾಡಿ ಉಪಯೋಗಿಸಲು ಅವಕಾಶವಿರುತ್ತದೆ. ಅದರಂತೆ, ಗ್ಯಾರಂಟಿ ಯೋಜನೆಗಳಿಗೆ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅಡಿಯಲ್ಲಿ ಅನುದಾನ ಹಂಚಿಕೆ ಮಾಡಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಫಲಾನುಭವಿಗಳಿಗೆ ಉಪಯೋಗಿಸಲಾಗುತ್ತಿದೆ.
ಅದರಂತೆ, ಪ್ರಾರಂಭದಿಂದಲೂ ಈ ಕಾಯ್ದೆಯ ಸೆಕ್ಷನ್ 7(ಸಿ) ಪ್ರಕಾರ ಶಿಕ್ಷಣ, ಆರೋಗ್ಯ, ಕೃಷಿ, ತೋಟಗಾರಿಕೆ, ನೀರಾವರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಯೋಜನಾ ಇಲಾಖೆ, ಇಂಧನ ಇತ್ಯಾದಿ ಇಲಾಖೆಗಳಲ್ಲಿ ಎಲ್ಲರಿಗೂ ಅನ್ವಯವಾಗುವ ಯೋಜನೆಗಳು ಜಾರಿಯಲ್ಲಿದ್ದು, ಈ ಯೋಜನೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳ ಸಮಗ್ರ ಅಭಿವೃದ್ಧಿಗಾಗಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅಡಿಯಲ್ಲಿ ಅನುದಾನವನ್ನು ಹಂಚಿಕೆ ಮಾಡಿ ಉಪಯೋಗಿಸಲಾಗುತ್ತಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.












Click it and Unblock the Notifications