'ಕೋಟಿ ಕಂಠ ಗಾಯನ'ದಲ್ಲಿ 1.25 ಕೋಟಿ ಜನರು ಭಾಗಿಯಾಗುವ ನಿರೀಕ್ಷೆ: ಸುನೀಲ್ ಕುಮಾರ್
ಬೆಂಗಳೂರು, ಅಕ್ಟೋಬರ್ 27: : ಕನ್ನಡ ರಾಜ್ಯೋತ್ಸವ ನಿಮಿತ್ತ ನಡೆಯುವ 'ಕೋಟಿ ಕಂಠ ಗಾಯನ' ಕಾರ್ಯಕ್ರಮಕ್ಕೆ ಅದ್ಭುತ ಪ್ರತಿಕ್ರಿಯೆ ಲಭಿಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋಟಿ ಕಂಠ ಗಾಯನ' ಕಾರ್ಯಕ್ರಮಕ್ಕೆ ನಾಳೆ ವೇಳೆಗೆ ಇನ್ನಷ್ಟು ಜನರು ನೋಂದಣಿ ಮಾಡುವ ನಿರೀಕ್ಷೆ ಇದ್ದು, 1.25 ಕೋಟಿ ಜನರು ಭಾಗವಹಿಸುವ ನಿರೀಕ್ಷೆ ಇದೆ . 10 ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ ಸಾವಿರಾರು ಸಂಘ ಸಂಸ್ಥೆಗಳು ಹೆಸರು ನೋಂದಾಯಿಸಿವೆ. 45 ದೇಶಗಳಲ್ಲಿ, 26 ರಾಜ್ಯಗಳಿಂದ ಜನರು ನೋಂದಣಿ ಮಾಡಿದ್ದಾರೆ. ಇದು ಅತ್ಯಂತ ಯಶಸ್ವಿ ಕಾರ್ಯಕ್ರಮವಾಗಿ ಹೊರ ಹೊಮ್ಮಲಿದೆ ಎನ್ನುವ ಭರವಸೆ ವ್ಯಕ್ತಪಡಿಸಿದರು.
ಇನ್ನು ನೆಲ- ಜಲ- ಆಕಾಶದಲ್ಲಿ ಕಾರ್ಯಕ್ರಮ ನಡೆಯಲಿದೆ. ವಿಧಾನಸೌಧದ ಮೆಟ್ಟಿಲು, ಮೈಸೂರು ಅರಮನೆ, ಪೌರಕಾರ್ಮಿಕರ ನಡುವೆ, ಜೋಗ ಜಲಪಾತ, ಚಿತ್ರದುರ್ಗದ ಕೋಟೆ, ರಾಯಚೂರಿನ ಥರ್ಮಲ್ ಪ್ಲಾಂಟ್- ಹೀಗೆ ಎಲ್ಲಾ ಕಡೆಗಳಲ್ಲಿ ಕೋಟಿ ಕಂಠ ಗಾಯನ ನಡೆಯಲಿದೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ 50 ಸಾವಿರ ಜನರು ಭಾಗವಹಿಸಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹ ಪಾಲ್ಗೊಳ್ಳಲಿದ್ದಾರೆ ಎಂದರು.
ಸಿ.ಟಿ ರವಿ ಅಕ್ರಮ ಆಸ್ತಿಗಳ ಬಗ್ಗೆ ಸಿಡಿ ಸಮೇತ ದಾಖಲೆ ಬಿಡುಗಡೆ ಮಾಡುತ್ತೇನೆ: ಎಂ ಲಕ್ಷ್ಮಣ್
ಇನ್ನು ಸಿನಿಮಾವೊಂದರಲ್ಲಿ(ಹೆಡ್ ಬುಷ್) ಕಲೆಗೆ ಅವಮಾನ ಮಾಡಿದ ಕುರಿತು ಪ್ರಶ್ನೆಗೆ ಉತ್ತರಿಸಿದ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ನಾನಿನ್ನೂ ಆ ಸಿನಿಮಾ ನೋಡಿಲ್ಲ. ಆದರೆ, ಮನರಂಜನೆಗಾಗಿ ಜಾನಪದ- ಸಾಂಸ್ಕೃತಿಕ ಕಲೆಗಳನ್ನು ಅವಮಾನ ಮಾಡಬಾರದು. ಅಂಥಹ ಅವಮಾನ ಆಗಿದ್ದರೆ, ಸಿನಿಮಾ ನಿರ್ಮಾಪಕರು ಆತ್ಮವಿಮರ್ಶೆ ಮಾಡಿಕೊಳ್ಳಲಿ ಎಂದರು. ಇಂದಿನ ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ.ಮೋಹನ್, ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ.ನರೇಂದ್ರಬಾಬು ಹಾಗೂ ಬಿಜೆಪಿ ಇತರ ಕಾರ್ಯಕರ್ತರು ಉಪಸ್ಥಿತರಿದ್ದರು.