ವಲಯ ಮುಖ್ಯ ಎಂಜಿನಿಯರ್ಗಳಿಗೆ ಸಚಿವ ಸುನೀಲ್ ಕುಮಾರ್ ಎಚ್ಚರಿಕೆ
ಬೆಂಗಳೂರು, ಫೆಬ್ರವರಿ 24; " ಕೃಷಿ ಪಂಪಸೆಟ್ ಪೀಡರ್ಗಳಿಗೆ ಹಗಲು ವೇಳೆ ನಿರಂತರ 7 ಗಂಟೆಗಳ ಕಾಲ ಮೂರು ಫೇಸ್ ಹಾಗೂ ಗೃಹ ಬಳಕೆ ವಿದ್ಯುತ್ ಪೂರೈಕೆ ಮಾಡುವಲ್ಲಿ ಆಗುವ ವ್ಯತ್ಯಯಗಳಿಗೆ ವಲಯ ಮುಖ್ಯ ಎಂಜಿನಿಯರ್ಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು" ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ಎಚ್ಚರಿಸಿದರು.
ಗುರುವಾರ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗದಂತೆ ಕ್ರಮವಹಿಸಲು ಸೂಚನೆ ನೀಡಿದರು.
ಬೇಸಿಗೆ ಕಾಲದಲ್ಲಿ ಮೂರು ತಿಂಗಳು ಕಾಲ ಗೃಹ ಬಳಕೆ, ವಾಣಿಜ್ಯ ಬಳಕೆ, ಕೈಗಾರಿಕೆ ಬಳಕೆ ಹಾಗೂ ಕೃಷಿ ಪಂಪಸೆಟ್ ವಿದ್ಯುತ್ ಪೂರೈಕೆಗೆ ಸಂಬಂಧಪಟ್ಟಂತೆ ಎಲ್ಲ ಎಸ್ಕಾಂ ಹಾಗೂ ಕೆಪಿಟಿಸಿಎಲ್ ಅಧಿಕಾರಿಗಳ ಜತೆಗೆ ಸಭೆ ನಡೆಸಿದ ಅವರು ಸಮಸ್ಯೆಗಳಿಗೆ ವಲಯ ಮುಖ್ಯ ಎಂಜಿನಿಯರ್ಗಳನ್ನು ಹೊಣೆ ಮಾಡಲಾಗುವುದು ಎಂದರು.

ಪರಿಸ್ಥಿತಿ ಎದುರಿಸಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದರು. ಎಲ್ಲ ಎಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ಆಗುವ ತಾಂತ್ರಿಕ ಹಾಗೂ ತಾಂತ್ರಿಕೇತರ ಸಮಸ್ಯೆಯಿಂದ ಆಗುವ ವಿದ್ಯುತ್ ಪೂರೈಕೆ ಸಮಸ್ಯೆ ಬಗ್ಗೆ ಪ್ರತಿ ದಿನ ಬೆಳಗ್ಗೆ 11 ಗಂಟೆಯೊಳಗಾಗಿ ಮಾಹಿತಿ ಸಂಗ್ರಹಿಸಿ ಅದಕ್ಕೆ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದರು.
ಸಾರ್ವಜನಿಕರಿಗೆ ವಿದ್ಯುತ್ ವ್ಯತ್ಯಯದಿಂದ ಆಗುವ ತೊಂದರೆಯನ್ನು ಕರ್ತವ್ಯ ಲೋಪ ಎಂದೇ ಪರಿಗಣಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ರಾಜ್ಯದಲ್ಲಿ ಸಾಮಾನ್ಯ ದಿನಗಳ ವಿದ್ಯುತ್ ಬಳಕೆ ಪ್ರಮಾಣ ಕಳೆದ ವರ್ಷಕ್ಕಿಂತ ಹೆಚ್ಚಿದೆ. ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ಕೊರತೆ ಇಲ್ಲ. ಆದರೆ ಸರಬರಾಜು ಸಂದರ್ಭದಲ್ಲಿ ವ್ಯತ್ಯಾಸ ವಾಗುತ್ತದೆ ಈ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ಕೊಟ್ಟರು.
ರಾಜ್ಯದ ಅನೇಕ ಭಾಗಗಳಿಂದ ಜನಪ್ರತಿನಿಧಿಗಳು , ರೈತಮುಖಂಡರು, ರೈತರು ನೀರಾವರಿ ಪಂಪ್ ಸೆಟ್ಗಳಿಗೆ ಸರಕಾರದ ನಿಯಮಾವಳಿ ಪ್ರಕಾರ 7 ಗಂಟೆ ಮೂರು ಫೇಸ್ ವಿದ್ಯುತ್ ಪೂರೈಕೆಯಾಗುತ್ತಿಲ್ಲ ಎಂದು ದೂರು ನೀಡುತ್ತಿದ್ದಾರೆ. ಇದಕ್ಕೆ ಹೊಣೆ ಯಾರು? ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
12 ಗಂಟೆ ವಿದ್ಯುತ್; ಚಿಕ್ಕಮಗಳೂರು ಜಿಲ್ಲೆ ವ್ಯಾಪ್ತಿಯಲ್ಲಿ ಕಾಫಿ ಬೆಳೆಗಾರರಿಗೆ ಹಾಗೂ ಇತರೆ ರೈತ ವರ್ಗಕ್ಕೆ ಅನುಕೂಲವಾಗುವಂತೆ ಪ್ರತಿ ದಿನ 12 ಗಂಟೆಗಳ ಕಾಲ 3 ಫೇಸ್ ವಿದ್ಯುತ್ ಪೂರೈಕೆ ಮಾಡುವುದಕ್ಕೆ ಸಭೆಯಲ್ಲಿ ಸಚಿವರು ಸ್ಪಷ್ಟ ಸೂಚನೆ ನೀಡಿದರು.
ಕಾಫಿ ಬೆಳೆಗಾರರಿಗೆ ಮುಂದಿನ ಮೂರು ತಿಂಗಳ ಅವಧಿಯಲ್ಲಿ ನಿರಂತರ 12 ಗಂಟೆ ವಿದ್ಯುತ್ ಪೂರೈಕೆ ಅನಿವಾರ್ಯವಾಗಿದೆ ಎಂದು ರೈತರಿಂದ ಬೇಡಿಕೆ ವ್ಯಕ್ತವಾಗಿತ್ತು. ಇದಕ್ಕೆ ತಕ್ಷಣ ಸ್ಪಂದಿಸಿರುವ ಸಚಿವರು ಸೂಕ್ತ ಆದೇಶ ಹೊರಡಿಸಿ 12 ಗಂಟೆ ವಿದ್ಯುತ್ ಪೂರೈಕೆಗೆ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.
ಪರಿಹಾರ ಬಿಡುಗಡೆ; ವಿದ್ಯುತ್ ಅವಘಡದಿಂದ ಎರಡು ಕೈ ಕಳೆದುಕೊಂಡಿದ್ದ ವ್ಯಕ್ತಿಗೆ ಕೃತಕ ಕೈ ಅಳವಡಿಸುವುದಕ್ಕೆ 2.56 ಲಕ್ಷ ರೂ. ಪರಿಹಾರ ಧನ ಬಿಡುಗಡೆ ಮಾಡುವಂತೆ ಸಚಿವರು ಆದೇಶಿಸಿದ್ದಾರೆ. ಕಲಬುರಗಿ ಜಿಲ್ಲೆ ಬಸವನಬಾಗೇವಾಡಿಯ ಕೆ. ಎನ್. ಸದಾಶಿವ ಎಂಬವರು ವಿದ್ಯುತ್ ಅವಘಡದಲ್ಲಿ ಕೈ ಕಳೆದು ಕೊಂಡಿದ್ದರು. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಪರಿಹಾರ ಬಿಡುಗಡೆ ಮಾಡಲಾಗಿದೆ.












Click it and Unblock the Notifications