ಸಿಎಂ, ಸಚಿವರಿಂದ ಉಮೇಶ್ ಕತ್ತಿ ಅಂತಿಮ ದರ್ಶನ, ಬೆಳಗಾವಿ ಜಿಲ್ಲೆಯಲ್ಲಿ ಶಾಲಾ-ಕಾಲೇಜು, ಸರ್ಕಾರಿ ರಜೆ
ಬೆಂಗಳೂರು, ಸೆ.7: ಆಹಾರ ಸಚಿವ ಉಮೇಶ್ ಕತ್ತಿ ಅವರು ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಿತ ಸಂಪುಟ ಸಹೋದ್ಯೋಗಿಗಳು ಮಧ್ಯರಾತ್ರಿ ಆಸ್ಪತ್ರೆಗೆ ದೌಡಾಯಿಸಿ ಅಂತಿಮ ದರ್ಶನ ಪಡೆದರು.
ಈ ಸಂದರ್ಭಲ್ಲಿ ಸಚಿವರಾದ ಸಿ.ಎನ್. ಅಶ್ವತ್ಥನಾರಾಯಣ, ಗೋವಿಂದ ಕಾರಜೋಳ, ಮುನಿರತ್ನ, ಡಾ.ಕೆ ಸುಧಾಕರ್, ಸಿಸಿ ಪಾಟೀಲ್, ಶಾಸಕರಾದ ಅರವಿಂದ್ ಬೆಲ್ಲದ, ಮಾಜಿ ಸಚಿವ ಲಕ್ಷ್ಮಣ ಸವದಿ ಹಾಜರಿದ್ದರು.
Recommended Video
ಸಚಿವ ಉಮೇಶ್ ಕತ್ತಿ ನಿಧನ; ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ
ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಉಮೇಶ್ ಕತ್ತಿ ಅವರು 8 ಬಾರಿ ಶಾಸಕರಾಗಿದ್ದರು. ಅವರ ಜನಪರ ಕಾಳಜಿಯನ್ನು ಮರೆಯಲು ಸಾಧ್ಯವಿಲ್ಲ. ಸದಾ ಜನಪರ ಕಾಳಜಿಯಿಂದಲೇ ಕಾರ್ಯನಿರ್ವಹಿಸುತ್ತಿದ್ದರು. ವೈಯಕ್ತಿಕವಾಗಿ ನನ್ನ ಕುಟುಂಬದೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು ಎಂದು ನೆನಪಿಸಿಕೊಂಡರು.
ಉಮೇಶ್ ಕತ್ತಿ ಅವರ ತಂದೆ ವಿಶ್ವನಾಥ ಕತ್ತಿ ಅವರೂ ಸಹ ಶಾಸಕರಾಗಿದ್ದರು. ವಿಶ್ವನಾಥ ಕತ್ತಿಯೂ ಸಹ ವಿಧಾನಸೌಧದಲ್ಲಿಯೇ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದರು ಎಂದು ಹೇಳಿದರು.
ರಜೆ ಘೋಷಣೆ:
ಸಚಿವ ಉಮೇಶ್ ಕತ್ತಿ ಅವರ ನಿಧನ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆ ವ್ಯಾಪ್ತಿಯ ಎಲ್ಲ ಶಾಲಾ-ಕಾಲೇಜುಗಳಿಗೆ ಮತ್ತು ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂತಿಮ ದರ್ಶನಕ್ಕೆ ಸರ್ಕಾರ ಸಕಲ ಸಹಕಾರ ನೀಡಲಿದೆ. ಕುಟುಂಬದ ಪರವಾಗಿ ನಾವಿದ್ದೇವೆ ಎಂದು ಸಿಎಂ ಇದೇ ಸಂದರ್ಭದಲ್ಲಿ ಹೇಳಿದರು.