Zameer Ahmed Khan: ವಿದ್ಯಾರ್ಥಿಗಳಿಗೆ ಶಿಕ್ಷಣದ ಮಹತ್ವದ ತಿಳಿಸಿದ ಜಮೀರ್ ಅಹ್ಮದ್ ಖಾನ್
ಬೆಂಗಳೂರು, ಜುಲೈ 29: ಶಿಕ್ಷಣ ಜೀವನದ ಬಹುದೊಡ್ಡ ಆಸ್ತಿ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣದ ಪಾತ್ರ ದೊಡ್ಡದು ಎಂದು ತಿಳಿಸಿದರು.

ನಾನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವನಾದ ನಂತರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದೇನೆ. ಒಟ್ಟಾರೆ 3200 ಕೋಟಿ ರೂ. ಬಜೆಟ್ನಲ್ಲಿ 1488 ಕೋಟಿ ರೂ. ಶಿಕ್ಷಣಕ್ಕೆ ಮೀಸಲಿಟ್ಟಿದ್ದೇವೆ ಎಂದು ಎಂದು ತಿಳಿಸಿದರು.
ವಿದ್ಯಾರ್ಥಿಗಳಿಗೆ ಶಿಕ್ಷಣದ ಕಡೆ ಹೆಚ್ಚು ಗಮನ ಹರಿಸಬೇಕು. ಎಸ್ ಎಸ್ ಎಲ್ ಸಿ, ಪಿಯುಸಿ, ಪದವಿ ಶಿಕ್ಷಣ ದ ಮೂರು ಹಂತ. ಈ ಹಂತಗಳನ್ನು ಉತ್ತಮ ಅಂಕದೊಂದಿಗೆ ದಾಟಿದರೆ ನಿಮಗೆ ಉತ್ತಮ ಭವಿಷ್ಯ ಸಿಗಲಿದೆ ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ವ್ಯಾಪ್ತಿಯ ಶಾಲೆ ಮತ್ತು ಕಾಲೇಜು ಗಳಲ್ಲಿ ಗುಣಮಟ್ಟ ಶಿಕ್ಷಣ ನೀಡಬೇಕು. ಈ ನಿಟ್ಟಿನಲ್ಲಿ ಬೋಧಕ ವರ್ಗ ಗಮನ ಹರಿಸಬೇಕು. ಹಾಸ್ಟೆಲ್ಗಳಲ್ಲಿ ಮಕ್ಕಳನ್ನು ನಿಮ್ಮ ಮಕ್ಕಳಂತೆ ನೋಡಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ತೊಂದರೆ ಕೊಡುವವವರನ್ನು ಸಹಿಸುವುದಿಲ್ಲ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಪಡೆದ 54 ವಿದ್ಯಾರ್ಥಿಗಳ ಪೈಕಿ ಎಸ್ ಎಸ್ ಎಲ್ ಸಿ, ಪಿಯುಸಿ ಪರೀಕ್ಷೆಯಲ್ಲಿ ಶೇ. 96ಕ್ಕಿಂತ ಹೆಚ್ಚು ಅಂಕ ಪಡೆದ 36 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ದ್ವಿಚಕ್ರ ವಾಹನ ನೀಡುವುದಾಗಿ ಸಚಿವ ಜಮೀರ್ ಅಹಮದ್ ಖಾನ್ ಘೋಷಿಸಿದರು. ಅಲ್ಪಸಂಖ್ಯಾತ ನಿರ್ದೇಶನಾಲಯ ಕಾಲೇಜುಗಳಲ್ಲಿ ದ್ವಿತೀಯ ಶೇ.98 ಅಂಕ ಪಡೆಯುವ ವಿದ್ಯಾರ್ಥಿಗಳನ್ನು ದತ್ತು ಪಡೆದು ಉನ್ನತ ವ್ಯಾಸಂಗದ ಸಂಪೂರ್ಣ ವೆಚ್ಚ ಭರಿಸುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಕೆಎಂಡಿಸಿಯ 2024-25 ನೇ ಸಾಲಿನ ಮೂರು ಹೊಸ ಯೋಜನೆಗಳಿಗೆ ಸಚಿವರು ಚಾಲನೆ ನೀಡಿ ಕೈಪಿಡಿ ಬಿಡುಗಡೆ ಮಾಡಿದರು. ಅರಿವು ಶಿಕ್ಷಣ ಯೋಜನೆಯಡಿಯಲ್ಲಿ ಪರೀಕ್ಷಾ ಪ್ರಾಧಿಕಾರದ ಜೊತೆ ಒಪ್ಪಂದಕ್ಕೆ ಸಹಿ ಹಾಕಿ 12 ಕೋಟಿ ರೂಪಾಯಿ ಚೆಕ್ ಹಸ್ತಾಂತರ ಮಾಡಿದರು.
ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಿಸಾರ್ ಅಹಮದ್, ವಖ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ, ಉರ್ದು ಅಕಾಡೆಮಿ ಅಧ್ಯಕ್ಷ ಮೊಹಮದ್ ಅಲಿ ಖಾಜಿ,ಕೆ ಎಂ ಡಿಸಿ ಅಧ್ಯಕ್ಷ ಬಿಕೆ ಅಲ್ತಾಫ್ ಖಾನ್, ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ನಿರ್ದೇಶಕ ಜಿಲಾನಿ ಮೊಕಾಶಿ, ಸಚಿವರ ವಿಶೇಷ ಅಧಿಕಾರಿ ಸರ್ಫರಾಜ್ ಖಾನ್ ಉಪಸ್ಥಿತರಿದ್ದರು.












Click it and Unblock the Notifications