ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಸಚಿವ ಜಮೀರ್ ಅಹ್ಮದ್ ದಿಢೀರ್ ಸಭೆ: ಯಾಕೆ ಗೊತ್ತಾ..?
ಬೆಂಗಳೂರು, ಆಗಸ್ಟ್ 20: ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಬಡವರಿಗೆ ಮನೆ ಹಂಚಿಕೆ ಯೋಜನೆಗಳ ಅನುಷ್ಠಾನ ಸಂಬಂಧ ಸಚಿವ ಜಮೀರ್ ಅಹ್ಮದ್ ಖಾನ್ ಇಂದು ಆಗಸ್ಟ್ 20 ಮಂಗಳವಾರ ರಾಜ್ಯ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ವಿಧಾನ ಸೌಧದ ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅತೀಕ್ ಅವರ ಕಚೇರಿಯಲ್ಲಿ ಈ ಸಭೆ ನಡೆಸಲಾಗಿದೆ.
ರಾಜೀವ್ ಗಾಂಧಿ ವಸತಿ ನಿಗಮದಿಂದ ಎಎಚ್ಪಿ ಯೋಜನೆಯಡಿ ಕೈಗೊಂಡಿರುವ 47, 887 ಮನೆ ನಿರ್ಮಾಣಕ್ಕೆ ಫಲಾನುಭವಿಗಳ ವಂತಿಗೆ ಹಾಗೂ ಮೂಲ ಸೌಕರ್ಯ ಮೊತ್ತ 2213 ಕೋಟಿ ರೂ. ಸರ್ಕಾರವೇ ಭರಿಸುವ ಸಂಬಂಧ ತಾತ್ವಿಕ ಒಪ್ಪಿಗೆ ದೊರೆತಿರುವ ಹಿನ್ನೆಲೆಯಲ್ಲಿ ಸಂಪುಟದ ಮುಂದೆ ತರಲು ಇಂದಿನ ಸಭೆಯಲ್ಲಿ ನಿರ್ಧಾರಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಅದೇ ರೀತಿ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಎಎಚ್ಪಿ ಯೋಜನೆಯಡಿಯಲ್ಲಿ ನಿರ್ಮಾಣ ಮಾಡುತ್ತಿರುವ 1.82 ಲಕ್ಷ ಮನೆಗಳ ಪೈಕಿ ಎರಡನೇ ಹಂತದಲ್ಲಿ ಮುಂದಿನ ತಿಂಗಳು 32, 946 ಮನೆ ಹಂಚಿಕೆ ಮಾಡಲು ತೀರ್ಮಾನಿಸಿದ್ದು, ಅದಕ್ಕೆ ಫಲಾನುಭವಿಗಳ ವಂತಿಗೆ ಹಾಗೂ ಮೂಲ ಸೌಕರ್ಯ ಮೊತ್ತ ಸೇರಿ 862 ಕೋಟಿ ರೂಪಾಯಿ ಬಿಡುಗಡೆಗೆ ಕ್ರಮ ಕೈಗೊಳ್ಳಲು ಕೋರಲಾಯಿತು.
ಮೊದಲ ಹಂತದಲ್ಲಿ ಹಂಚಿಕೆ ಮಾಡಿರುವ 36,784 ಮನೆಗಳಿಗೆ ಸಂಬಂಧಿಸಿದಂತೆ 500 ಕೋಟಿ ರೂಪಾಯಿಬಾಕಿ ಬಿಡುಗಡೆ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪ ಮಾಡಲಾಗಿದ್ದು, ಶೀಘ್ರವೇ ಎಲ್ಲಾ ಕೋರಿಕೆಗಳಿಗೆ ರಾಜ್ಯ ಸರ್ಕಾರದಿಂದ ಅನುಮತಿ ಸಿಗುವ ಸಾಧ್ಯತೆ ಇದೆ.
ಸಚಿವ ಜಮೀರ್ ಅಹ್ಮದ್ ಜೊತೆಗಿನ ಸಭೆಯಲ್ಲಿ ಗೃಹಮಂಡಳಿ ಅಧ್ಯಕ್ಷ ಶಿವಲಿಂಗೇ ಗೌಡ, ಆಯುಕ್ತ ಕವಿತಾ ಮನ್ನಿಕೇರಿ, ಚೀಫ್ ಇಂಜಿನಿಯರ್ ರವಿಕುಮಾರ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಎಂ.ಡಿ ನಜೀರ್, ನಿರ್ದೇಶಕ ಜಿಲಾನಿ ಮೊಕಾಶಿ, ಕೊಳಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ಅಶೋಕ್, ಚೀಫ್ ಇಂಜಿನಿಯರ್ ಬಾಲರಾಜು, ರಾಜೀವ್ ಗಾಂಧಿ ವಸತಿ ನಿಗಮ ಎಂ.ಡಿ ಸುಶೀಲಮ್ಮ ಉಪಸ್ಥಿತರಿದ್ದರು.












Click it and Unblock the Notifications