CM Delhi Visit: ಕಾಂಗ್ರೆಸ್ ಹೈಕಮಾಂಡ್ ಮುಂದೆ ವಾದ ಮಂಡಿಸಲು ಸಿಎಂ ಅತ್ಯಾಪ್ತ ಸಚಿವರ ಸಿದ್ಧತೆ!
ಬೆಂಗಳೂರು ಆಗಸ್ಟ್ 21: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದರೂ ಹೈಕೋರ್ಟ್ನಿಂದ ತಾತ್ಕಾಲಿಕ ರಿಲೀಫ್ ಪಡೆದಿರುವ ಸಿಎಂ ಸಿದ್ದರಾಮಯ್ಯ ಶುಕ್ರವಾರ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ಸಿದ್ಧತೆ ನಡೆಸಿದ್ದಾರೆ. ಈ ವೇಳೆ ಸಿಎಂ ಪರ ಕಾಂಗ್ರೆಸ್ ಹೈಕಮಾಂಡ್ ಬಳಿ ಅತ್ಯಾಪ್ತ ಸಚಿವರು ವಾದ ಮಂಡಿಸಲಿದ್ದಾರೆ.
ಮುಂದಿನ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಪರ ಹೈಕಮಾಂಡ್ ನಿಲ್ಲಬೇಕು ಎಂದು ಸಚಿವರು ಮನವಿ ಮಾಡಲಿದ್ದಾರೆ. ರಾಜ್ಯಪಾಲರ ಅಧಿಕಾರವನ್ನು ಕೇಂದ್ರ ಬಿಜೆಪಿ ಬಳಸಿಕೊಂಡು ಸಿಎಂ ಸಿದ್ದರಾಮಯ್ಯ ವಿರುದ್ಧ ಹುನ್ನಾರ ನಡೆಸಿದ್ದು ಇದರ ವಿರುದ್ಧ ಧ್ವನಿ ಎತ್ತಲು ಹಾಗೂ ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ಸಿಎಂ ಸ್ಥಾನ ಕೈತಪ್ಪದಂತೆ ನೋಡಿಕೊಳ್ಳಲು ಹೈಕಮಾಂಡ್ ಮೊರೆ ಹೋಗಲಿದ್ದಾರೆ ಕೈ ನಾಯಕರು.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಇದರಿಂದ ತನಿಖೆಗೆ ಸಹಕರಿಸಿ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಒತ್ತಾಯ ಹೇರಿವೆ. ಇದಕ್ಕೆ ಪ್ರತಿಯಾಗಿ ಆಡಳಿತ ಪಕ್ಷ ಕಾಂಗ್ರೆಸ್, ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಕೆಲ ಹಗರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ದಾಖಲಾತಿಗಳಿದ್ದರೂ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಯಾಕೆ ಅನುಮತಿ ನೀಡಿಲ್ಲ ಎಂದು ಚಕಾರ ಎತ್ತಿವೆ. ರಾಜ್ಯಪಾಲರ ಆಡಳಿತವನ್ನು ಬಿಜೆಪಿ ದುರುಪಯೋಗ ಪಡಿಸಿಕೊಂಡಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ. ಹೀಗೆ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷ ಹಾಗೂ ಕಾಂಗ್ರೆಸ್ ನಡುವೆ ಆರೋಪ ಪ್ರತ್ಯಾರೋಪಗಳು ಚುರುಕುಕೊಂಡಿವೆ.
ಇದರಿಂದಾಗಿ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಪರ ಸ್ಟ್ರಾಂಗ್ ಆಗಿ ನಿಲ್ಲಬೇಕು. ಒಂದು ವೇಳೆ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭವಿಸಿದರೆ, ಹೈಕಮಾಂಡ ಸಿದ್ದರಾಮಯ್ಯ ಪರ ನಿಲ್ಲಬೇಕು ಎಂದು ಸಿಎಂ ಆಪ್ತರು ವಾದ ಮಂಡಿಸಲಿದ್ದಾರೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಮಾಡಬಾರದು ಎಂದು ಸಚಿವರು ಹೈಕಮಾಂಡ ಮುಂದೆ ವಾದಿಸಲಿದ್ದಾರೆ.

ಸದ್ಯ ಬೂದಿ ಮುಚ್ಚಿದ ಕೆಂಡದಂತ್ತಿದ್ದ ವಿಚಾರ ನಾಳೆ ಸಿದ್ದರಾಮಯ್ಯ ಅಧಿಕಾರ ಸ್ಥಾನ ಕಳೆದುಕೊಳ್ಳುವ ತನಕವೂ ಹೋಗಬಹುದು. ಹೀಗಾದರೆ ಎಲ್ಲವೂ ಅಲ್ಲೋಲ ಕಲ್ಲೋಲವಾಗುತ್ತದೆ. ಇದರಿಂದಾಗಿ ಸಚಿವರು ಸಿಎಂ ಪರ ವಾದ ಮಂಡಿಸುವುದು ಅನಿವಾರ್ಯವಾಗಿದೆ. ಪಕ್ಷದ ಭದ್ರತೆಗೆ, ಮುಂದಿನ ಕಾರ್ಯಗಳಿಗೆ ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಅವರೇ ಇರುವುದು ಕಾಂಗ್ರೆಸ್ಗೆ ತುಂಬಾ ಅವಶ್ಯಕವಾಗಿದೆ.
ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ಕೈ ಬಿಟ್ಟರೆ ರಾಜ್ಯದಲ್ಲಿ ಕಾಂಗ್ರೆಸ್ಗೆ ಬಹುದೊಡ್ಡ ಹೊಡೆತ ಬೀಳಲಿದೆ ಎಂದು ಸಚಿವರು ಹೈಕಮಾಂಡ್ಗೆ ಮನವರಿಕೆ ಮಾಡಲಿದ್ದಾರೆ. ಸಿದ್ದರಾಮಯ್ಯ ಭದ್ರವಾಗಿ ಅಧಿಕಾರದಲ್ಲಿ ಇದ್ದರೆ ಕ್ಯಾಬಿನೆಟ್ಗೂ ಉಳಿಗಾಲ. ಅದರಲ್ಲೂ ಅಹಿಂದ ಸಚಿವರು ವಿಶೇಷವಾಗಿ ಸಿಎಂ ಪರ ಹೈಕಮಾಂಡ್ ಮುಂದೆ ಪ್ರಸ್ತಾಪ ಮಾಡಲಿದ್ದಾರೆ ಎನ್ನಲಾಗುತ್ತಿದೆ.
ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ಬಿಜೆಪಿ ದಲಿತ ಅಸ್ತ್ರವನ್ನು ಪ್ರಯೋಗ ಮಾಡಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕಾಂಗ್ರೆಸ್ ನಾಯಕರು ಗುರಿಯಾಗಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಇದೇ ಅಸ್ತ್ರ ಪ್ರಯೋಗ ಮಾಡಿ ಬಿಜೆಪಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದೆ. ಥಾವರ್ ಚಂದ್ ಗೆಹ್ಲೋಟ್ ದಲಿತ ಎಂಬ ಕಾರಣಕ್ಕೆ ಕಾಂಗ್ರೆಸ್ ಹೀನಾಯವಾಗಿ ಟೀಕೆ ಮಾಡುತ್ತಿದೆ ಎಂದು ಬಿಜೆಪಿ ಆರೋಪ ಮಾಡಿದೆ.












Click it and Unblock the Notifications