ಮೋದಿ ಸರ್ಕಾರ ಗೇಮ್ ಚೇಂಜರ್ಸ್ ಅಲ್ಲ. ನೇಮ್ ಚೇಂಜರ್ಸ್ : ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಬೆಂಗಳೂರು, ಸೆಪ್ಟೆಂಬರ್ 06: ಇಂಡಿಯಾ ಹೆಸರನ್ನು ಭಾರತ್ ಎಂದು ಮರುನಾಮಕರಣ ಮಾಡುವ ಕುರಿತು ದೇಶಾದ್ಯಂತ ಭಾರೀ ಚರ್ಚೆ ನಡೆಯುತ್ತಿದೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನಡೆಗೆ ವಿಪಕ್ಷಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಹೌದು, ಈ ಕುರಿತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದು, ಗೇಮ್ ಚೇಂಜರ್ಸ್" ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕೇವಲ "ನೇಮ್ ಚೇಂಜರ್ಸ್" ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2014ರ ಮೊದಲು ಅಮೇರಿಕಾ, ಬ್ರಿಟನ್, ರಷ್ಯಾಗಳಂತಹ ಮುಂದುವರೆದ ದೇಶಗಳೊಂದಿಗೆ ಭಾರತದ ಸ್ಪರ್ಧೆ ಇತ್ತು. ಈಗ ಗುಜರಾತ್ ಮಾಡೆಲ್, ಯುಪಿ ಮಾಡೆಲ್ ಹೆಸರಲ್ಲಿ ಜಾತಿ ಜನಾಂಗಗಳ ನಡುವೆ ದ್ವೇಷ ಬಿತ್ತಿ "ಮಣಿಪುರ್ ಮಾಡೆಲ್" ಸೃಷ್ಟಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.
ಯಕಶ್ಚಿತ್ ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾಗಳೊಂದಿಗೆ ಭಾರತವನ್ನು ತುಲನೆ ಮಾಡಿಕೊಂಡು ಬೆನ್ನು ತಟ್ಟಿಕೊಳ್ಳುವ ಪರಿಸ್ಥಿತಿಗೆ ತಂದಿಟ್ಟಿರುವ ಬಿಜೆಪಿಯಿಂದ ಹೆಸರುಗಳ ಬದಲಾವಣೆಗಳನ್ನಲ್ಲದೆ ಬೇರೆ ಇನ್ನೇನು ನಿರೀಕ್ಷಿಸಲು ಸಾಧ್ಯ? ಸಮರ್ಥ ಆಡಳಿತಗಾರರು ಭಾರತದಲ್ಲಿ ಬದಲಾವಣೆ ತರುತ್ತಾರೆಯೇ ಹೊರತು ಭಾರತದ ಹೆಸರಿನ ಬದಲಾವಣೆಯನ್ನಲ್ಲ ಎಂದು ಹೇಳಿದ್ದಾರೆ.

ದೇಶಕ್ಕೆ ರಿಪಬ್ಲಿಕ್ ಆಫ್ ಭಾರತ್ ಎಂದು ಮರುನಾಮಕರಣ ಮಾಡುವ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದು, ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ 'INDIA' ಎಂಬ ಹೆಸರಿಟ್ಟ ಕಾರಣಕ್ಕೆ ಕೇಂದ್ರ ಸರ್ಕಾರ ದೇಶದ ಹೆಸರನ್ನು 'INDIA'ದ ಬದಲು 'ಭಾರತ' ಎಂದು ಬದಲಾಯಿಸಲು ಮುಂದಾಗಿದೆ.NDIA ಮೈತ್ರಿಕೂಟದ ಬಗ್ಗೆ BJPಯವರಿಗೆ ಇಷ್ಟೊಂದು ಭಯವೆ? ಎಂದು ಪ್ರಶ್ನಿಸಿದ್ದಾರೆ.
ದೇಶದ ಹೆಸರು ಮರುನಾಮಕರಣಕ್ಕೆ 'INDIA' ಮೈತ್ರಿಕೂಟದ ಮೇಲಿನ ಭಯವಲ್ಲದೆ ಮತ್ತೇನು ಕಾರಣ ಮೋದಿಯವರೆ? INDIA ಹೆಸರನ್ನು 'ಭಾರತ' ಎಂದು ಬದಲಿಸಿದರೆ ದೇಶ ಬದಲಾಗಲಿದೆಯೇ?
ಮೋದಿಯವರೇ ಬದಲಾಗಬೇಕಿರುವುದು ದೇಶದ ಹೆಸರಲ್ಲ, ಬದಲಿಗೆ ದೇಶದ ಪರಿಸ್ಥಿತಿ.
ಹೆಸರು ಬದಲಾಯಿಸುವ ಬದಲು ಜನರ ಜೀವನ ಮಟ್ಟ ಬದಲಾಯಿಸಿ. ದ್ವೇಷದ ಮೂಲಕ ಸಮಾಜದ ಶಾಂತಿ ಕೆಡಿಸುತ್ತಿರುವ ನಿಮ್ಮ ಭಕ್ತರ ಮನಸ್ಸು ಬದಲಾಯಿಸಿ. ಈ ದೇಶವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ಬದಲಾಯಿಸಿ ಎಂದು ಕೇಂದ್ರ ಬಿಜೆಪಿ ನಾಯಕರ ವಿರುದ್ದ ಕಿಡಿಕಾರಿದ್ದಾರೆ.
INDIA ಮತ್ತು ಭಾರತ ಎರಡೂ ಹೆಸರುಗಳು ನಮ್ಮ ಎದೆಯೊಳಗೆ ಅಜರಾಮರವಾಗಿವೆ. ಇಂಡಿಯಾ ಎಂದರೆ ಬೇರೆಯಲ್ಲ, ಭಾರತ ಎಂದರೆ ಬೇರೆಯಲ್ಲ. ಸದುದ್ದೇಶದಿಂದ INDIA ಬದಲು ಭಾರತ ಎಂದು ಮರುನಾಮಕರಣ ಮಾಡಿದರೆ ಆಕ್ಷೇಪಣೆಯಿಲ್ಲ.ಆದರೆ ವಿರೋಧ ಪಕ್ಷಗಳ ಒಕ್ಕೂಟ INDIA ಹೆಸರನ್ನು ಅಪ್ರಸ್ತುತಗೊಳಿಸಲು ದೇಶದ ಹೆಸರು ಬದಲಾಯಿಸಲು ಹೊರಟಿರುವುದು ಮೂರ್ಖತನ ಎಂದು ಕಿಡಿಕಾರಿದ್ದಾರೆ.












Click it and Unblock the Notifications