ಭುವನೇಶ್ವರಿ ಭಾವಚಿತ್ರಕ್ಕೆ ಅವಮಾನ: ಕಸಾಪದಿಂದ ದೂರು
ಬೆಂಗಳೂರು, ನವೆಂಬರ್ 01: ಬಾರ್ ಮತ್ತು ವೈನ್ ಸ್ಟೋರ್ಗಳಲ್ಲಿ ತಾಯಿ ಭುವನೇಶ್ವರಿಯ ದೇವಿಯ ಭಾವಚಿತ್ರಗಳನ್ನು ಅಬಕಾರಿ ಇಲಾಖೆ ಹಾಗೂ ಪರಿಷತ್ತಿನ ಹೆಸರಿನಲ್ಲಿ ಮಾರಾಟ ಮಾಡಿದವರ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್ತು ದೂರು ನೀಡಿದೆ.
ಈ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ್ ಜೋಶಿ ಅವರು, ಅಬಕಾರಿ ಇಲಾಖೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಲ್ಲಿ ಬಾರ್ ಮತ್ತು ವೈನ್ ಸ್ಟೋರ್ಗಳಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರ ಮಾರಾಟ ಮಾಡಲಾಗಿದೆ. ಇದು ಖಂಡಿನೀಯ ಎಂದ ಅವರು ತಪ್ಪಿತಸ್ಥರ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು ಎಂದು ಅವರು ತಿಳಿಸಿದರು.
ಖ್ಯಾತ ಚಿತ್ರ ಕಲಾವಿದ ಬಿ. ಕೆ. ಎಸ್. ಶರ್ಮಾ ಅವರು ಚಿತ್ರಿಸಿದ ತಾಯಿ ಭುವನೇಶ್ವರಿಯ ಭಾವಚಿತ್ರ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಒತ್ತಾಸೆಯಂತೆ ಮಾರಾಟ ಮಳಿಗೆಯಲ್ಲಿ ಮಾರಾಟಕ್ಕಿದೆ. ಅಂತರ್ಜಾಲ ತಾಣಗಳಲ್ಲಿ ಎಲ್ಲರ ಕೈಗೆಟಕುವ ರೀತಿಯಲ್ಲಿ ಲಭ್ಯವಿದೆ. ಇದನ್ನು ಸಹ ಕೆಲವರು ಡೌನ್ಲೋಡ್ ಮಾಡಿ ಕೆಲವು ಕಡೆಗಳಲ್ಲಿ ಹಂಚಿರುವ ಮಾಹಿತಿ ಪರಿಷತ್ತಿನ ಗಮನಕ್ಕೆ ಬಂದಿದೆ.

ಅಲ್ಲದೇ ಕೆಲವು ಸಮಾಜಘಾತುಕರು ಕನ್ನಡದ ಹೆಸರಿನಲ್ಲಿ ತಾಯಿ ಭುವನೇಶ್ವರಿಯ ಭಾವಚಿತ್ರಗಳನ್ನು ಬಾರ್ಗಳಿಗೆ ಮಾರಾಟ ಮಾಡಿದ್ದಾರೆ. ಇನ್ನೂ ಕೆಲವು ಕಡೆಗಳಲ್ಲಿ ಅಬಕಾರಿ ಇಲಾಖೆಯವರೇ ಮಾರಿದ್ದಾರೆ ಎನ್ನುವ ಮಾಹಿತಿಗಳು ಮಾಧ್ಯಮಗಳಿಂದ ತಿಳಿದು ಬಂದಿದೆ ಎಂದರು.
ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಕೆ; ಈ ವಿಚಾರ ಸಂಬಂಧ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಹಾಗೂ ಅಬಕಾರಿ ಇಲಾಖೆ ಆಯುಕ್ತರಿಗೆ ಕನ್ನಡ ಸಾಹಿತ್ಯ ಪರಿಷತ್ತು ದೂರು ನೀಡಿದೆ. ತಕ್ಷಣ ಕನ್ನಡ ತಾಯಿ ಭುವನೇಶ್ವರಿಯ ಭಾವಚಿತ್ರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರನ್ನು ದುರುಪಯೋಗ ಮಾಡಿಕೊಳ್ಳುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕನ್ನಡಿಗರ ಭಾವನೆಗಳ ಜೊತೆ ಆಟವಾಡುತ್ತಿರುವುದು ಖಂಡನೀಯ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ ಅಥವಾ ಭುವನೇಶ್ವರಿ ತಾಯಿಗೆ ಅವಮಾನ ಮಾಡುವದನ್ನು ಕನ್ನಡಿಗರು ಸಹಿಸುವುದಿಲ್ಲ. ಅದೇ ರೀತಿ ಕನ್ನಡ ಸಾಹಿತ್ಯ ಪರಿಷತ್ತು ಇಂಥ ಅಸಂಬದ್ಧ ವ್ಯಕ್ತಿಗಳು ಯಾರೇ ಆದರೂ ಅವರ ವಿರುದ್ಧ ಹೋರಾಟ ನಡೆಸಲಿದೆ ಎಂದು ಮಹೇಶ್ ಜೋಶಿ ಎಚ್ಚರಿಸಿದರು.












Click it and Unblock the Notifications