ಅನುದಾನ ದುರ್ಬಳಕೆ: ಮೂವರು ನಿವೃತ್ತ ಐಎಎಸ್ ಅಧಿಕಾರಿಗಳ ವಿರುದ್ಧದ ಕೇಸ್ ರದ್ದು
ಬೆಂಗಳೂರು, ಸೆಪ್ಟೆಂಬರ್ 14; ಮೂವರು ಐಎಎಸ್ ಅಧಿಕಾರಿಗಳಿಗೆ ನಿವೃತ್ತಿಯ ನಂತರವೂ ಕಾಡುತ್ತಿದ್ದ ಅನುದಾನ ದುರ್ಬಳಕೆ ಆರೋಪದಲ್ಲಿ ದೊಡ್ಡ ರಿಲೀಫ್ ಸಿಕ್ಕಿದೆ. ನಿವೃತ್ತ ಅಧಿಕಾರಿಗಳಾದ ಅಮಿತಾ ಪ್ರಸಾದ್, ಎನ್. ವಿ. ರಮಣರೆಡ್ಡಿ ಹಾಗೂ ಟಿ. ಎಂ. ವಿಜಯ್ ಭಾಸ್ಕರ್ ಅವರ ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.
ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆಯ ಅನುದಾನ ದುರ್ಬಳಕೆ ಆರೋಪದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾಗಿದ್ದ ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಮೂವರು ಕೋರಿದ್ದರು. ಮೂವರು ನಿವೃತ್ತ ಐಎಎಸ್ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪ್ರಕರಣ ರದ್ದುಪಡಿಸಿದೆ.

ಅರ್ಜಿದಾರರಾದ ಅಮಿತಾ ಪ್ರಸಾದ್, ರಮಣ ರೆಡ್ಡಿ, ವಿಜಯ್ ಭಾಸ್ಕರ್ ಅವರ ವಿರುದ್ಧ 23ನೇ ಹೆಚ್ಚುವರಿ ಸಿಟಿ ಸಿವಿಲ್ ಹಾಗೂ ಸೆಷನ್ಸ್ ನ್ಯಾಯಾಲಯದಲ್ಲಿ (ಭ್ರಷ್ಟಾಚಾರ ತಡೆ ಕಾಯ್ದೆ ವಿಶೇಷ ನ್ಯಾಯಾಲಯ) ನಡೆಯುತ್ತಿರುವ ವಿಚಾರಣೆಯ ಸಂಪೂರ್ಣ ಪ್ರಕ್ರಿಯೆ ರದ್ದುಗೊಳಿಸಲಾಗಿದೆ. ಆದರೆ, ಈ ಆದೇಶವು ಅರ್ಜಿದಾರರನ್ನು ಹೊರತುಪಡಿಸಿ ಪ್ರಕರಣದ ಇತರ ಆರೋಪಿಗಳ ವಿಚಾರಣೆಗೆ ಅನ್ವಯವಾಗುವುದಿಲ್ಲ ಎಂದು ನ್ಯಾಯಪೀಠ ಆದೇಶದಲ್ಲಿ ಹೇಳಿದೆ.
ಹೈಕೋರ್ಟ್ ಏನು ಹೇಳಿದೆ?; ಮೂವರು ಅಧಿಕಾರಿಗಳ ವಿರುದ್ಧ ತನಿಖೆಗೆ ಸಕ್ಷಮ ಪ್ರಾಧಿಕಾರದಿಂದ ಅಗತ್ಯ ಪೂರ್ವಾನುಮತಿ ಪಡೆದುಕೊಂಡಿಲ್ಲ. ಯೋಜನೆಯ ಅನುಷ್ಠಾನಕ್ಕೆ 2010ರ ಅ.1ರಂದು ಕೇಂದ್ರ ಸರ್ಕಾರದ ಕುಡಿಯವ ನೀರು ಸರಬರಾಜು ಮತ್ತು ನೈರ್ಮಲ್ಯ ಸಚಿವಾಲಯ, ರಾಜ್ಯ ನೀರು ಮತ್ತು ನೈರ್ಮಲ್ಯ ಮಿಷನ್ ಹಾಗೂ ಸಿಂಡಿಕೇಟ್ ಬ್ಯಾಾಕ್ ನಡುವೆ ತ್ರಿಪಕ್ಷೀಯ ಒಪ್ಪಂದ ಆಗಿತ್ತು. ಆದರೆ, ಮೂವರು ಅರ್ಜಿದಾರರ ಪೈಕಿ ಯಾರೊಬ್ಬರೂ ಆ ತ್ರಿಪಕ್ಷೀಯ ಒಪ್ಪಂದದ ಪಾಲುದಾರರು ಅಲ್ಲ ಎಂದು ನ್ಯಾಯಾಲಯ ಹೇಳಿದೆ.
ನ್ಯಾಯಾಲಯ ತನ್ನ ಅದೇಶದಲ್ಲಿ ಅಮಿತಾ ಪ್ರಸಾದ್ 2011ರ ಮೇ 16ರಿಂದ 2012ರ ಜೂನ್8ರವರೆಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದರು. ರಮಣ ರೆಡ್ಡಿ 2012ರ ಸೆ.22ರಿಂದ 2013ರ ಮೇ 31 ಹಾಗೂ ವಿಜಯ್ ಭಾಸ್ಕರ್ ಅವರು 2013ರ ಮೇ 31ರಿಂದ 2015ರ ಏಪ್ರಿಿಲ್ 24ರವರೆಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆಗಿದ್ದರೆಂದು ಉಲ್ಲೇಖಿಸಿದೆ.
ವಿಜಯ್ ಭಾಸ್ಕರ್ ಅವರು ಹುದ್ದೆಯಿಂದ ನಿರ್ಗಮಿಸಿದ ಬಳಿಕ 2015ರ ಮೇ 4ರಂದು ಗ್ರಾಮೀಣ ನೀರು ಸರಬರಾಜು ಯೋಜನೆಯ ಆಯುಕ್ತರು ವರದಿ ಸಲ್ಲಿಸಿದ್ದು, ಅದರಲ್ಲಿ ಹಣ ದುರ್ಬಳಕೆ ಆಗಿದೆ ಎಂದಷ್ಟೇ ಹೇಳಿದ್ದಾರೆ. ಆದರೆ, ಯಾವ ಅಧಿಕಾರಿಯ ಹೆಸರನ್ನೂ ಹೇಳಿಲ್ಲ. ಈ ವರದಿಯ ಆಧಾರದಲ್ಲಿ ಲೆಕ್ಕಪರಿಶೋಧನೆ ನಡೆಸಲಾಗಿದ್ದು, 2015ರ ಅ.1ರಂದು ಸಲ್ಲಿಸಲಾದ ಆ ಲೆಕ್ಕಪರಿಶೋಧನಾ ವರದಿಯಲ್ಲಿ ಹಣ ದುರ್ಬಳಕೆಗೆ ಪಿ. ಬೋರೇಗೌಡ ಹಾಗೂ ರಾಮಕೃಷ್ಣ ಎಂಬುವರು ಹೊಣೆ ಎಂದು ಹೇಳಲಾಗಿತ್ತು. 2019ರ ಜ.9ರಂದು ಪೊಲೀಸರು 'ಬಿ' ರಿಪೋರ್ಟ್ ಸಹ ಹಾಕಿದ್ದಾರೆ. ಪೊಲೀಸರು ಹಾಕಿದ್ದ ಚಾರ್ಜ್ಶೀಟ್ನಲ್ಲೂ ಮೂವರು ಅರ್ಜಿದಾರರ ಹೆಸರು ಇಲ್ಲ ಎಂದು ನ್ಯಾಾಯಪೀಠ ಆದೇಶದಲ್ಲಿ ಪ್ರಸ್ತಾಪಿಸಿದೆ.
ಪ್ರಕರಣದ ಹಿನ್ನೆಲೆ: ಗ್ರಾಮೀಣ ಕುಡಿಯುವ ನೀರು ಯೋಜನೆಯ ಕೋಟ್ಯಾಂತರ ರೂ. ಅನುದಾನ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಣ ದುರ್ಬಳಕೆಯಿಂದ ರಾಜ್ಯಕ್ಕೆ 269 ಕೋಟಿ ರೂ. ನಷ್ಟವಾಗಿದೆ ಎಂದು ಹೇಳಲಾಗಿತ್ತು. ಇಲಾಖಾ ವಿಚಾರಣೆ, ಲೆಕ್ಕಪರಿಶೋಧನೆ, ಪೊಲೀಸ್ ಹಾಗೂ ಎಸಿಬಿ (ಲೋಕಾಯುಕ್ತ) ವಿಚಾರಣೆ ನಡೆದಿತ್ತು.
ಈ ಮಧ್ಯೆ ಕೋಲಾರ ಮೂಲಕ ಸಾಮಾಜಿಕ ಕಾರ್ಯಕರ್ತ ವಿ. ನಾರಾಯಣಸ್ವಾಮಿ ಖಾಸಗಿ ದೂರು ಸಲ್ಲಿಸಿದ್ದರು. ಇದನ್ನು ವಿಚಾರಣೆಗೆ ಅಂಗೀಕರಿಸಿ ವಿಚಾರಣಾ ನ್ಯಾಯಾಲಯ 2022ರ ಜ.13ರಂದು ಆದೇಶಿಸಿತ್ತು. ಅದನ್ನು ಪ್ರಶ್ನಿಸಿ ಮೂವರು ಅಧಿಕಾರಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.












Click it and Unblock the Notifications