ರಾಜಕೀಯ ಲಾಭಕ್ಕೆ ಕಾಂಗ್ರೆಸ್ ನಿಂದ ಸ್ಪೀಕರ್ ಹುದ್ದೆ ದುರುಪಯೋಗ: ಬಸವರಾಜ ಬೊಮ್ಮಾಯಿ ಆರೋಪ
ಬೆಂಗಳೂರು,ಜುಲೈ 20: ರಾಜಕೀಯ ಪಕ್ಷದ ಕಾರ್ಯಕ್ರಮಕ್ಕೆ ಬೇರೆ ರಾಜ್ಯಗಳ ನಾಯಕರ ಸ್ವಾಗತಕ್ಕೆ ಐಎಎಸ್ ಅಧಿಕಾರಿಳಗನ್ನು ಕಳುಹಿಸಿದನ್ನು ಪ್ರಶ್ನಿಸಿದ್ದಕ್ಕೆ ನಮ್ಮ ಪಕ್ಷದ ಹತ್ತು ಜನ ಸದಸ್ಯರನ್ನು ಅಮಾನತು ಮಾಡಿದ್ದಾರೆ. ಇಂತ ಕೆಟ್ಟ ನಿರ್ಧಾರ ಇತಿಹಾಸದಲ್ಲಿ ಆಗಿಲ್ಲ. ರಾಜಕೀಯ ಲಾಭಕ್ಕೆ ಕಾಂಗ್ರೆಸ್ ಸ್ಪೀಕರ್ ಹುದ್ದೆ ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿದರು.
ಬಿಜೆಪಿಯ ಹತ್ತು ಶಾಸಕರನ್ನು ಅಮಾನತು ಮಾಡಿರುವ ಸ್ಪೀಕರ್ ನಡೆ ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ, ಜೆಡಿಎಸ್ ಸದಸ್ಯರ ಜೊತೆ ಸೇರಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜೈನ ಮುನಿಗಳ ಹತ್ಯೆಯಿಂದ ಹಿಡಿದು ರಾಜ್ಯದಲ್ಲಿ ನಿರಂತರ ಕೊಲೆ ನಡೆಯುತ್ತಿವೆ ಎಂದರು.

ಬರಗಾಲ ಬಿದ್ದಿದೆ. ಮೂರುವರೆ ಸಾವಿರ ಹಳ್ಳಿಗಳಲ್ಲಿ ಕುಡಿಯುವ ನೀರಿಲ್ಲ. ಇದರ ಬಗ್ಗೆ ಸದನದಲ್ಲಿ ಚೆರ್ಚೆಗೆ ಅವಕಾಶ ಕೊಡಲಿಲ್ಲ. ಸದ್ಯ ಸ್ಪೀಕರ್ ಹುದ್ದೆ ದುರುಪಯೋಗ ಆಗುತ್ತಿದೆ. ಸ್ಪೀಕರ್ ಅವರು ನಮ್ಮನ್ನು ಕರೆದು ಮಾತನಾಡಿಸಿ ಸಮಸ್ಯೆ ಬಗೆ ಹರಿಸಬಹುದಿತ್ತು. ಈ ರೀತಿಯ ಪ್ರಕರಣಗಳು ಹಿಂದೆಯೂ ನಡೆದಿವೆ. ಈ ರೀತಿಯ ತೀರ್ಮಾನ ಯಾರೂ ಮಾಡಿರಲಿಲ್ಲ. ಸ್ಪೀಕರ್ ಆದವರು ರಾಜಕೀಯ ಪಕ್ಷಗಳ ಕಾರ್ಯಕ್ರಮಗಳಲ್ಲಿ ಹಾಜರಾಗಬಾರದು ಅಂತ ಪಾಲಿಸಿಕೊಂಡು ಬರಲಾಗಿದೆ.
ಇವರು ಕಾಂಗ್ರೆಸ್ ಪಕ್ಷದ ಔತಣಕೂಟಕ್ಕೆ ಹಾಜರಾಗಿ ಊಟ ಮಾಡಿ ಬಂದಿದ್ದಾರೆ. ಅವರ ಮೇಲೆ ವಿಶ್ವಾಸ ಇಲ್ಲ ಅಂತ ನಾವು ಅವಿಶ್ವಾಸ ಮಂಡನೆಗೆ ಅವಕಾಶ ಕೇಳಿದ್ದೇವೆ. ಈ ಸರ್ಕಾರ ತನ್ಬ ತಪ್ಪುಗಳನ್ನು ಮುಚ್ಚಿಕೊಳ್ಳಲು ಈ ರೀತಿ ಮಾಡುತ್ತಿದೆ. ಜನರು ಅವರಿಗೆ ಅಧಿಕಾರ ನೀಡಿದ್ದರೆ ಜನರ ಪರವಾಗಿ ಧ್ವನಿ ಎತ್ತಲು ನಮಗೂ ಅವಕಾಶ ಕೊಟ್ಟಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿ ಟೆರೆರಿಸ್ಟ್ ಚಟುವಟಿಕೆಗಳು ನಡೆಯುತ್ತಿವೆ. ಅವರ ಬಳಿ ಸಿಕ್ಕಿರುವ ದಾಖಲೆ ನೋಡಿದರೆ ಅವರಿಗೆ ಅಂತಾರಾಷ್ಟ್ರೀಯ ಸಂಪರ್ಕ ಇದೆ. ಹೀಗಾಗಿ ಈ ಪ್ರಕರಣವನ್ನು ಎನ್ಐಎಗೆ ವಹಿಸಬೇಕು ಅಂತ ನಾವು ಆಗ್ರಹಿಸಿದ್ದೇವೆ. ಈ ಎಲ್ಲ ಮಾಹಿತಿಗಳನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ. ಅವರು ಕೇಂದ್ರ ಸರ್ಕಾರಕ್ಕೆ ವರದಿ ಕೊಡುವುದಾಗಿ ಹೇಳಿದ್ದಾರೆ ಎಂದರು.
ನಮ್ಮ ಸದಸ್ಯರನ್ನು ಅಮಾನತು ಮಾಡಿರುವುದರಿಂದ ನಾವು ಸದನವನ್ನು ಬಹಿಷ್ಕರಿಸುತ್ತೇವೆ. ಈ ಪ್ರಕರಣವನ್ನು ಜಿಲ್ಲಾ ಮಟ್ಟಕ್ಕೆ ತೆಗೆದುಕೊಂಡು ಹೋಗಿ ಹೋರಾಟ ಮಾಡುತ್ತೇವೆ ಎಂದು ಹೇಳಿದರು.
ಸುಳ್ಳು ಭರವಸೆಗಳ ಮೂಲಕ ಅಧಿಕಾರಕ್ಕೆ ಬಂದು ತನ್ನ ಆಶ್ವಾಸನೆಗಳನ್ನು ಈಡೇರಿಸಲು ಸಾಧ್ಯವಾಗದ ಕಾಂಗ್ರೆಸ್ ಇದೀಗ ಸರ್ವಾಧಿಕಾರಿ ವರ್ತನೆ ತೋರುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಜನರು ನಮ್ಮನ್ನೂ ಆಯ್ಕೆ ಮಾಡಿದ್ದಾರೆ. ನಮಗೂ ಕರ್ತವ್ಯ - ಜವಾಬ್ದಾರಿ ಇದೆ. ಸರಕಾರ ಮಾಡಲು ಅವರಿಗೆ ನಂಬರ್ ಕೊಟ್ಟರೆ ಜನರ ಪರವಾಗಿ, ಸಂಕಷ್ಟದಲ್ಲಿ ಇರುವವರ ಪರವಾಗಿ ಧ್ವನಿ ಎತ್ತಲು ನಮಗೂ ನಂಬರ್ ಕೊಟ್ಟಿದ್ದಾರೆ. ಸ್ಪೀಕರ್, ರಾಜಕೀಯ ಸಭೆಗೆ ತೆರಳಿ ಊಟ ಮಾಡಿ ಬರುತ್ತಾರೆ ಎಂದರೆ ಸದನದ ಗೌರವ ಎಲ್ಲಿಗೆ ಬಂತು ಎಂದು ಪ್ರಶ್ನಿಸಿದರು. ಸ್ಪೀಕರ್ ವಿರುದ್ಧ ನಾವು ಅವಿಶ್ವಾಸ ಗೊತ್ತುವಳಿ ಮಂಡಿಸುತ್ತೇವೆ ಎಂದು ತಿಳಿಸಿದರು.












Click it and Unblock the Notifications