ಕೆ.ಜೆ.ಜಾರ್ಜ್ ವಿರುದ್ಧ ಸಿಬಿಐ ಎಫ್ಐಆರ್ : ಯಾರು, ಏನು ಹೇಳಿದರು?
ಬೆಂಗಳೂರು, ಅಕ್ಟೋಬರ್ 27 : ಸಿಬಿಐ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಆರಂಭಿಸಿದೆ. ಪ್ರಕರಣದ ಬಗ್ಗೆ ಎಫ್ಐಆರ್ ದಾಖಲು ಮಾಡಲಾಗಿದ್ದು, ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಮೊದಲನೇ ಆರೋಪಿಯಾಗಿದ್ದಾರೆ.
ಸುಪ್ರೀಂಕೋರ್ಟ್ ಆದೇಶ ಅನ್ವಯ ಚೆನ್ನೈ ಸಿಬಿಐ ಕಚೇರಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ತನಿಖೆ ಆರಂಭಿಸಿದೆ. ಸಿಬಿಐ ಕಚೇರಿ ಎಸ್ಪಿ ಎ.ಶರವಣನ್ ಗುರುವಾರ ಎಫ್ಐಆರ್ ದಾಖಲು ಮಾಡಿದ್ದಾರೆ. ಐಪಿಎಸ್ ಅಧಿಕಾರಿಗಳಾದ ಪ್ರಣಬ್ ಮೊಹಂತಿ ಮತ್ತು ಎ.ಎಂ.ಪ್ರಸಾದ್ ಎರಡು ಮತ್ತು ಮೂರನೇ ಆರೋಪಿಗಳು.
ಕೆಜೆ ಜಾರ್ಜ್ ವಿರುದ್ಧ ಬಿಜೆಪಿ ಪ್ರತಿಭಟನೆ ಮುಂದೂಡಿಕೆ?
ಮಂಗಳೂರು ಐಜಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಡಿವೈಎಸ್ಪಿ ಎಂ.ಕೆ.ಗಣಪತಿ 2016ರ ಜುಲೈ 7ರಂದು ಮಡಿಕೇರಿಯ ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಕ್ಲೀನ್ ಚಿಟ್ ನೀಡಿತ್ತು.
ರಾಜಿನಾಮೆ ಕೊಡು ಅಂದ ಕೂಡಲೇ ಕೊಡಲು ಸಾಧ್ಯವಿಲ್ಲ: ಜಾರ್ಜ್
ಸಿಬಿಐ ತನಿಖೆ ಆರಂಭಿಸುತ್ತಿದ್ದಂತೆ ಪ್ರತಿಪಕ್ಷ ಬಿಜೆಪಿ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುತ್ತಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಪಡೆಯುವುದಿಲ್ಲ ಎಂದು ಹೇಳಿಕೆ ನೀಡುತ್ತಿದ್ದಾರೆ. ಯಾರು, ಏನು ಹೇಳಿದರು ಚಿತ್ರಗಳಲ್ಲಿ ಮಾಹಿತಿ...
'ಬಿಜೆಪಿ ಪ್ರತಿಭಟನೆಗೆ ಹೆದರುವುದಿಲ್ಲ’
'ಎಫ್ಐಆರ್ ಪರಿಶೀಲಿಸಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ರಾಜೀನಾಮೆಗಾಗಿ ಬಿಜೆಪಿ ಪ್ರತಿಭಟನೆ ನಡೆಸಿದರೆ ಹೆದರುವುದಿಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
‘ಎಫ್ಐಆರ್ ದಾಖಲಾದ ಮಾತ್ರಕ್ಕೆ ರಾಜೀನಾಮೆ ಅಗತ್ಯವಿಲ್ಲ'
'ಎಫ್ಐಆರ್ ದಾಖಲಾದ ತಕ್ಷಣ ರಾಜೀನಾಮೆ ನೀಡುವ ಅಗತ್ಯವಿಲ್ಲ. ಸಿಬಿಐ ತನಿಖೆ ಮುಗಿಯಲಿ ನೋಡೋಣ' ಎಂದು ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
'ಸಾಕ್ಷಿ ನಾಶಪಡಿಸುವ ಸಾಧ್ಯತೆ ಇದೆ’
'ಸಚಿವರಾಗಿ ಕೆ.ಜೆ.ಜಾರ್ಜ್ ಮುಂದುವರೆದರೆ ಸಾಕ್ಷಿಗಳನ್ನು ನಾಶ ಮಾಡುವ ಸಾಧ್ಯತೆ ಇದೆ. ಜಾರ್ಜ್ ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುತ್ತದೆ' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
'ಕೆಜೆ ಜಾರ್ಜ್ ರಾಜೀನಾಮೆ ನೀಡಬೇಕು'
'ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ಎಫ್ಐಆರ್ ದಾಖಲಿಸಿರುವ ಹಿನ್ನೆಲೆಯಲ್ಲಿ ಸಚಿವ ಕೆ.ಜೆ ಜಾರ್ಜ್ ಅವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಗಣಪತಿ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸ್ಥಳೀಯ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ನನ್ನ ಸಾವಿಗ ಅಂದಿನ ಗೃಹ ಸಚಿವರಾಗಿದ್ದ ಕೆ.ಜೆ.ಜಾರ್ಜ್ ನೇರ ಕಾರಣ ಎಂದು ಆರೋಪಿಸಿದ್ದರು' ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಒತ್ತಾಯಿಸಿದ್ದಾರೆ.
ಸಿಐಡಿ ಕ್ಲೀನ್ ಚಿಟ್ ನೀಡಿತ್ತು
ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಐಡಿ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಕ್ಲೀನ್ ಚಿಟ್ ನೀಡಿತ್ತು. ಆದರೆ, ಗಣಪತಿ ಅವರ ತಂದೆ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿ ಸಿಬಿಐ ತನಿಖೆಗೆ ಮನವಿ ಮಾಡಿದ್ದರು. ಸುಪ್ರೀಂಕೋರ್ಟ್ ಆದೇಶದಂತೆ ತನಿಖೆ ಆರಂಭವಾಗಿದೆ.