ಬಿಜೆಪಿ ವಿರುದ್ಧ ಕಿಡಿ: ಕೆಂಪೇಗೌಡ ರಥಯಾತ್ರೆ ತಡೆದ ಶರತ್ ಬಚ್ಚೇಗೌಡ
ಬೆಂಗಳೂರು, ಅಕ್ಟೋಬರ್ 27: ನಾಡಪ್ರಭು ಕೆಂಪೇಗೌಡ ಅವರ ಪ್ರಗತಿ ಪ್ರತಿಮೆ ರಥಯಾತ್ರೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಶಾಸಕ ಶರತ್ ಬಚ್ಚೇಗೌಡ ತಡೆದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನವೆಂಬರ್ 11 ರಂದು ಉದ್ಘಾಟನೆಗೊಳ್ಳುವ ಕೆಂಪೇಗೌಡ ಪ್ರತಿಮೆ ಹಾಗೂ ಕೆಂಪೇಗೌಡ ಥೀಮ್ ಪಾರ್ಕ್ಗೆ ಎಲ್ಲಾ ಜಿಲ್ಲೆಗಳಿಂದ ಪವಿತ್ರ ಮಣ್ಣು ಸಂಗ್ರಹಿಸಲಾಗುತ್ತಿದೆ. ಈ ರಥಯಾತ್ರೆಯನ್ನು ಹೊಸಕೋಟೆಯಲ್ಲಿ ಅಸಮಧಾನ ವ್ಯಕ್ತಪಡಿಸಿ ಶಾಸಕ ಶರತ್ ಬಚ್ಚೇಗೌಡ ತಡೆದಿದ್ದಾರೆ.
ನಾಡಪ್ರಭು ಕೆಂಪೇಗೌಡ ಅವರ ಪ್ರಗತಿ ಪ್ರತಿಮೆ ರಥಯಾತ್ರೆಯ ವಾಹನದಲ್ಲಿ ಒಕ್ಕಲಿಗ ಸಮುದಾಯದ ಸ್ವಾಮೀಜಿಗಳ ಭಾವಚಿತ್ರ ಅಳವಡಿಸಿಲ್ಲ.ರಥಯಾತ್ರೆಯಲ್ಲಿ ಒಕ್ಕಲಿಗ ಸಮುದಾಯಕ್ಕೆ ಅವಮಾನ ಮಾಡಲಾಗಿದೆ. ಅಲ್ಲದೇ ಸ್ಥಳೀಯ ಶಾಸಕ, ಸಂಸದ, ಒಕ್ಕಲಿಗ ಸಂಘಟನೆಗಳನ್ನುವಿಶ್ವಾಸಕ್ಕೆ ತೆಗೆದುಕೊಳ್ಳದೆ ರಥಯಾತ್ರೆ ಮಾಡುತ್ತಿದ್ದಾರೆ ಎಂದು ಶರತ್ ಬಚ್ಚೇಗೌಡ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಕೆಂಪೇಗೌಡ ಅವರ ಪ್ರಗತಿ ಪ್ರತಿಮೆ ರಥಯಾತ್ರೆಯ ವಾಹನದಲ್ಲಿ ಕೇವಲ ಬಿಜೆಪಿ ನಾಯಕರ ಫೋಟೋ ಮಾತ್ರ ಇದೆ. ಒಕ್ಕಲಿಗ ಸಮುದಾಯದ ಸ್ವಾಮೀಜಿಗಳ ಭಾವಚಿತ್ರ ಇಲ್ಲ. ಈ ಮೂಲಕ ರಾಜ್ಯ ಸರ್ಕಾರದ ದುಡ್ಡಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಪ್ರಗತಿ ಎಂದರೆ ಎಲ್ಲರನ್ನು ವಿಶ್ವಾಸಕ್ಕೆ ಪಡೆಯುವುದು. ಆದರೆ ತಾಲೂಕಿನ ಎಲ್ಲಾ ವಿಎ, ಪಿಡಿಒ ಸೇರಿದಂತೆ ಸರಕಾರಿ ಅಧಿಕಾರಿಗಳನ್ನು ಬಳಸಿಕೊಂಡು ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಹೊಸಕೋಟೆ ತಾಲೂಕು ಕಚೇರಿ ಮುಂಭಾಗದಲ್ಲಿ ರಥವನ್ನು ತಡೆಯಲಾಗಿದೆ. ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ರಥಯಾತ್ರೆಯಲ್ಲಿ ಕೇವಲ ಸಚಿವರಾದ ಸುಧಾಕರ್, ಎಂಟಿಬಿ ನಾಗರಾಜ್ , ಅಶ್ವತ್ಥ್ ನಾರಾಯಣ್ ಭಾವಚಿತ್ರ ಹಾಕಲಾಗಿದ್ದು, ಒಕ್ಕಲಿಗ ಸಮುದಾಯದ ಸ್ವಾಮೀಜಿಗಳ ಭಾವಚಿತ್ರ ಹಾಕುವವರೆಗೂ ರಥಯಾತ್ರೆ ಮುಂದೆ ಹೋಗಲು ಬಿಡೋದಿಲ್ಲ ಎಂದು ಶರತ್ ಬಚ್ಚೇಗೌಡ ಪಟ್ಟು ಹಿಡಿದಿದ್ದಾರೆ.
ಇನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನವೆಂಬರ್ 11 ರಂದು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅನಾವರಣಗೊಳಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಆರಂಭಗೊಂಡಿದ್ದ ನಾಡಪ್ರಭು ಕೆಂಪೇಗೌಡ ಪ್ರಗತಿ ಪ್ರತಿಮೆ ರಥಯಾತ್ರೆ ಸದ್ಯ ರಾಜ್ಯ ರಾಜಕೀಯ ಬಿಕ್ಕಟ್ಟಿನಿಂದ ಹೊಸಕೋಟೆ ತಾಲೂಕು ಕಚೇರಿ ಮುಂಭಾಗದಲ್ಲಿ ನಿಂತಿದೆ.












Click it and Unblock the Notifications