ಕಾಂಗ್ರೆಸ್ ಭೋಜನಕೂಟದಲ್ಲಿ ಬಿಜೆಪಿ ಪಕ್ಷಗಳ ಶಾಸಕರು ಭಾಗಿ : ಡಿ ಕೆ ಶಿವಕುಮಾರ್ ಹೇಳಿದ್ದೇನು?
ಬೆಳಗಾವಿ, ಡಿಸೆಂಬರ್ 15: ಕಾಂಗ್ರೆಸ್ ಶಾಸಕರಿಗೆ ಬುಧವಾರ ರಾತ್ರಿ ಏರ್ಪಡಿಸಿದ ಔತಣಕೂಟದಲ್ಲಿ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಟಿ ಸೋಮಶೇಖರ್ ಮತ್ತು ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಂ ಹೆಬ್ಬಾರ್ ಅವರು ಭಾಗಿಯಾಗಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾತನಾಡಿ, ಮದುವೆ, ಶುಭ ಸಮಾರಂಭ, ಭೋಜನ ಕೂಟದಲ್ಲಿ ನಾಯಕರು ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ಸೇರುತ್ತಾರೆ. ಅದರಲ್ಲಿ ತಪ್ಪೇನಿದೆ? ಬಿಜೆಪಿಯವರು ನನ್ನ ಜೊತೆ ಮಾತನಾಡುವುದು, ನಮ್ಮ ಪಕ್ಷದ ನಾಯಕರು ಅವರ ಜೊತೆ ಮಾತನಾಡುವುದು ಸಹಜವಾದುದ್ದು. ರಾಜಕೀಯವಾಗಿ ಏನೇ ಭಿನ್ನಾಭಿಪ್ರಾಯವಿದ್ದರೂ ಮನುಷ್ಯರ ನಡುವಣ ಬಾಂಧವ್ಯ ಮುಖ್ಯವಾದುದು ಎಂದು ತಿಳಿಸಿದರು.

ಸದನದ ಕಲಾಪ ಸಮಯದಲ್ಲೂ ಕೆಲವು ವಿಚಾರಗಳ ಚರ್ಚೆಗೆ ಸಭೆ ಕರೆದಾಗ ವಿರೋಧ ಪಕ್ಷಗಳ ನಾಯಕರನ್ನೂ ಆಹ್ವಾನಿಸುತ್ತೇವೆ. ರಾಜಕೀಯ ಮಾಡಲು ಬಯಸುವವರು ಸಭೆಗೆ ಬರುವುದಿಲ್ಲ. ನಾವು ಸಹಜವಾಗಿ ಭೋಜನ ಕೂಟಕ್ಕೆ ಎಲ್ಲಾ ಶಾಸಕರನ್ನು ಆಹ್ವಾನಿಸುತ್ತೇವೆ. ಕೆಲವರು ಬರುತ್ತಾರೆ, ಕೆಲವರು ನಿರಾಕರಿಸುತ್ತಾರೆ. ನಮಗೆ ಆತ್ಮೀಯರಾಗಿರುವವರನ್ನು ನಾವು ಕರೆಯುತ್ತೇವೆ. ಅದರಲ್ಲಿ ತಪ್ಪೇನಿದೆ ಎಂದರು.
ಬಿಜೆಪಿ ನಾಯಕರಿಗೆ ರಾಜಕಾರಣ ಮುಖ್ಯವೇ ಹೊರತು ರಾಜ್ಯದ ಅಭಿವೃದ್ಧಿಯಾಗಲಿ, ಜನರ ಸಮಸ್ಯೆಯಾಗಲಿ ಅಲ್ಲ. ಅವರಿಗೆ ಜನರ ಸಮಸ್ಯೆ ಬಗ್ಗೆ ಆಸಕ್ತಿ ಇಲ್ಲವೆಂದರೆ ನಾವೇನು ಮಾಡೋಕಾಗುತ್ತೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.
ಬಿಜೆಪಿ ಹಾಗೂ ಜನತಾದಳದವರಿಗೆ ಜನರ ಸಮಸ್ಯೆ ಬಗ್ಗೆ ಎಷ್ಟು ಕಾಳಜಿ ಇದೆ ಎಂಬುದು ಮುಖ್ಯ. ಆದರೆ ಬಿಜೆಪಿಯವರಿಗೆ ಈ ಬಗ್ಗೆ ಚರ್ಚೆ ಮಾಡಲು ಆಸಕ್ತಿ ಇಲ್ಲದಿದ್ದರೆ ನಾವೇನು ಮಾಡಲು ಸಾಧ್ಯ? ಬಿಜೆಪಿಗೆ ಕೇವಲ ರಾಜಕಾರಣ ಬೇಕು. ಅವರು ರಾಜಕಾರಣ ಮಾಡಿಕೊಂಡಿರಲಿ, ನಾವು ರಾಜ್ಯದ ಅಭಿವೃದ್ಧಿಯತ್ತ ಗಮನ ಹರಿಸುತ್ತೇವೆ ಎಂದು ಹೇಳಿದರು.
ಶಾಸಕ ಪ್ರಸಾದ್ ಅಬ್ಬಯ್ಯ ಅವರು ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವ ಬಗ್ಗೆ ಪ್ರಸ್ತಾಪ ಮಾಡಿದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಲು ಪ್ರತಿಕ್ರಿಯಿಸಲು ನಿರಾಕರಿಸಿದರು.












Click it and Unblock the Notifications