ಶಾಸಕರಿಗೆ ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಕಡ್ಡಾಯ! ನಿಯಮ ಜಾರಿ ಆಗತ್ತಾ?
ಬೆಂಗಳೂರು, ಜು.16: ರಾಜ್ಯದ ಶಾಸಕರು ಹಾಗೂ ಮಾಜಿ ಶಾಸಕರು ಇನ್ನು ಮುಂದೆ ತುರ್ತು ಸಂದರ್ಭಗಳನ್ನು ಹೊರತುಪಡಿಸಿ ಉಳಿದೆಲ್ಲ ಬಗೆಯ ಆರೋಗ್ಯ ಚಿಕಿತ್ಸೆಗಳನ್ನು ಆದ್ಯತೆಯ ಮೇರೆಗೆ ಸರ್ಕಾರಿ ಆಸ್ಪತ್ರೆಗಳಲ್ಲೇ ಪಡೆಯಬೇಕು ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಈಗಾಗಲೇ ಎಸ್.ಮೂರ್ತಿ, ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ ಮೂಲಕ ಎಲ್ಲ ಶಾಸಕರು ಹಾಗೂ ಮಾಜಿ ಶಾಸಕರಿಗೆ ಮಾಹಿತಿ ರವಾನಿಸಿದ್ದಾರೆ. ಕರ್ನಾಟಕ ಖಾಸಗಿ ವೈದ್ಯಕೀಯ ತಿದ್ದುಪಡಿ ಅಧಿನಿಯಮ 2017ರ ನಿಯಮಗಳ ಅನುಸಾರ ಈಗಾಗಲೇ ರಾಜ್ಯದಲ್ಲಿ ಕಳೆದ ಮಾರ್ಚ್ 1ರಿಂದ ಆರೋಗ್ಯ ಕರ್ನಾಟಕ ಯೋಜನೆ ಜಾರಿಗೆ ಬಂದಿದೆ.
ಇದರ ಅನುಸಾರ ಮುಖ್ಯಮಂತ್ರಿಗಳನ್ನೂ ಒಳಗೊಂಡಂತೆ ರಾಜ್ಯದ ಎಲ್ಲ ಶಾಸಕರು, ಮಾಜಿ ಶಾಸಕರು, ಸಾರ್ವಜನಿಕ ಸೇವಕರು ತುರ್ತು ಸಂದರ್ಭಗಳು ಅಂದರೆ, ಅಪಘಾತ, ಹೃದಯಾಘಾತ ಹಾಗೂ ಇತರ ತುರ್ತು ಚಿಕಿತ್ಸೆಗಳನ್ನು ಹೊರತುಪಡಿಸಿ, ಇತರೆ ಚಿಕಿತ್ಸೆಗಳಿಗೆ ಮೊದಲ ಆದ್ಯತೆಯ ಮೇರೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬೇಕು.

ಒಂದು ವೇಳೆ ಅಗತ್ಯ ಚಿಕಿತ್ಸೆಯು ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿಲ್ಲವೆಂದು ಸಂಬಂಧಪಟ್ಟ ಸರ್ಕಾರಿ ಆಸ್ಪತ್ರೆಯ ವೈದ್ಯರು ಸಲಹೆ ನೀಡಿದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ.
ಸರ್ಕಾರಿ ಆಸ್ಪತ್ರೆಗೆ ಹೋಗದೇ ನೇರವಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಲ್ಲಿ, ಅಂತಹ ವೈದ್ಯಕೀಯ ವೆಚ್ಚವನ್ನು ನಿಯಮಗಳಿಗೆ ಅನುಸಾರವಾಗಿ ಮರುಪಾವತಿ ಮಾಡಲು ಸಾಧ್ಯವಿಲ್ಲ ಎಂದು ಪ್ರಕಟಣೆ ತಿಳಿಸಿದೆ.












Click it and Unblock the Notifications