ಬಿಜೆಪಿ ಬಿಡಲಿದ್ದಾರೆ ಬಿ.ಎಸ್.ಯಡಿಯೂರಪ್ಪ ಆಪ್ತ?
ಬೆಂಗಳೂರು, ಜೂನ್ 01 : ವಿಧಾನಪರಿಷತ್ ಚುನಾವಣೆ ವಿಚಾರದಲ್ಲಿ ಬಿಜೆಪಿಯಲ್ಲಿ ಭಿನ್ನಮತ ಉಂಟಾಗಿದೆ. ಪರಿಷತ್ ಸದಸ್ಯ ಬಿ.ಜೆ.ಪುಟ್ಟಸ್ವಾಮಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಸಮಾಧಾನಗೊಂಡಿದ್ದಾರೆ.
ವಿಧಾನಸಭೆಯಿಂದ ವಿಧಾನಪರಿಷತ್ತಿಗೆ 11 ಸದಸ್ಯರನ್ನು ಆಯ್ಕೆ ಮಾಡಲು ಜೂನ್ 11ರಂದು ಚುನಾವಣೆ ನಡೆಯಲಿದೆ. ವಿಧಾನಸಭೆಯಲ್ಲಿ ಬಿಜೆಪಿ 104 ಸದಸ್ಯ ಬಲವನ್ನು ಹೊಂದಿದ್ದು, 5 ಸದಸ್ಯರನ್ನು ಆಯ್ಕೆ ಮಾಡಿ ಕಳಿಸಬಹುದಾಗಿದೆ.
ಬಿಜೆಪಿ ರಘುನಾಥ ಮಲ್ಕಾಪುರೆ, ಎನ್.ರವಿಕುಮಾರ್, ತೇಜಸ್ವಿನಿ ಗೌಡ, ಕೆ.ಪಿ.ನಂಜುಂಡಿ, ಎಸ್.ರುದ್ರೇಗೌಡ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಎಲ್ಲಾ ಅಭ್ಯರ್ಥಿಗಳು ಮೇ 31ರಂದು ನಾಮಪತ್ರವನ್ನು ಸಲ್ಲಿಸಿದ್ದಾರೆ.

ಕೆ.ಪಿ.ನಂಜುಂಡಿ ಆಯ್ಕೆ ಮಾಡಿರುವುದಕ್ಕೆ ಬಿ.ಜೆ.ಪುಟ್ಟಸ್ವಾಮಿ ಅಸಮಾಧಾನಗೊಂಡಿದ್ದಾರೆ. ಯಡಿಯೂರಪ್ಪ ಅವರು ತಮ್ಮನ್ನು ಪುನಃ ಆಯ್ಕೆ ಮಾಡಿ ವಿಧಾನಪರಿಷತ್ ಪ್ರತಿಪಕ್ಷ ನಾಯಕರನ್ನಾಗಿ ಮಾಡುವೆ ಎಂದು ಭರವಸೆ ನೀಡಿದ್ದರು ಎಂದು ಹೇಳಿದ್ದಾರೆ.
ಯಡಿಯೂರಪ್ಪ ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳದೇ ಇರುವುದರಿಂದ ಬಿ.ಜೆ.ಪುಟ್ಟಸ್ವಾಮಿ ಅವರು ಪಕ್ಷ ಬಿಡಲು ಸಿದ್ಧತೆ ನಡೆಸಿದ್ದಾರೆ. ಶುಕ್ರವಾರ ಮಧ್ಯಾಹ್ನ ಅವರು ಪತ್ರಿಕಾಗೋಷ್ಠಿ ನಡೆಸಿ ತಮ್ಮ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆ ಇದೆ.
ಬಿ.ಜೆ.ಪುಟ್ಟಸ್ವಾಮಿ ಅವರು ಬಿ.ಎಸ್.ಯಡಿಯೂರಪ್ಪ ಅವರ ಪರಮಾಪ್ತರು. ಆದರೆ, ಯಡಿಯೂರಪ್ಪ ಅವರು ಕೊಟ್ಟ ಮಾತಿನಂತೆ ನಡೆದಿಲ್ಲ ಎಂದು ಪುಟ್ಟಸ್ವಾಮಿ ಅವರು ಅಸಮಾಧಾನಗೊಂಡಿದ್ದಾರೆ.












Click it and Unblock the Notifications