ಸಿದ್ದರಾಮಯ್ಯ ವಿರುದ್ಧ ಜಾತಿನಿಂದನೆ ಪ್ರಕರಣ ದಾಖಲಿಸಿದ ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು, ಜೂ.17: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಜಾತಿನಿಂದನೆ ಪ್ರಕರಣ ದಾಖಲಿಸಿರುವ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಸಿದ್ದರಾಮಯ್ಯ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯನವರು ಟ್ವೀಟ್ ಮಾಡುವ ಭರದಲ್ಲಿ ತಾವು ಸದಾ ಅಸ್ಪೃಷ್ಯರು ಎಂದು ತಿಳಿಸಿ ನನ್ನ ಜಾತಿಗೆ ಅಪಮಾನ ಮಾಡಿದ್ದಾರೆ. ಹೀಗಾಗಿ ಸಿದ್ದರಾಮಯ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಎಸ್.ಸಿ. ಮೋರ್ಚಾ ವತಿಯಿಂದ ಇಂದು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
"ಸಿದ್ದರಾಮಯ್ಯ ಬಗ್ಗೆ ನಮಗೆ ಬಹಳ ಗೌರವವಿದೆ. ಆದರೆ, ಅವರ ರಾಜಕೀಯ ಜಿದ್ದಾಜಿದ್ದಿ ವಿಚಾರದಲ್ಲಿ ನಮ್ಮ ಆಕ್ಷೇಪವಿದೆ. ನಮ್ಮನ್ನು ಗುಲಾಮರು, ಅಸ್ಪಷ್ಯರು ಎಂದು ಕರೆದು ನಿಂದಿಸಿದ್ದಾರೆ. ಇಂಥ ನಿಂದನೆಯ ಅಧಿಕಾರ ಅವರಿಗೆ ಇಲ್ಲ. ಎಸ್ಸಿ, ಎಸ್ಟಿ, ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಈ ದೂರು ನೀಡಿದ್ದೇವೆ. ಅವರು ಜಾತಿ ನಿಂದನೆ ಮಾಡಿದ್ದು, ಎಫ್ಐಆರ್ ಮಾಡಿ ಬಂಧಿಸಲು ಒತ್ತಾಯಿಸಿದ್ದೇನೆ. ಅವರನ್ನು ಬಂಧಿಸುವಲ್ಲಿ ವಿಳಂಬ ಮಾಡಿದರೆ ಧರಣಿ ಮಾಡುವುದಾಗಿ," ನಾರಾಯಣಸ್ವಾಮಿ ತಿಳಿಸಿದರು.
ಇದು ಸಿದ್ದರಾಮಯ್ಯರ ದಲಿತ ವಿರೋಧಿ ಧೋರಣೆಗೆ ಸಾಕ್ಷಿ ಎಂದ ಅವರು, ದಲಿತ ಮಹಿಳೆ ಮೋಟಮ್ಮನವರು ತಮ್ಮ ಆತ್ಮಕಥೆ ಪುಸ್ತಕದಲ್ಲಿ ಸಿದ್ದರಾಮಯ್ಯನವರು ನನ್ನ ಎಲ್ಲ ಬೆಳವಣಿಗೆಗೂ ಬಾಗಿಲು ಹಾಕಿದರು ಎಂದು ಹೇಳಿದ್ದಾರೆ ಎಂದು ವಿವರಿಸಿದರು. ಕಾಂಗ್ರೆಸ್ ಮನಸ್ಥಿತಿ ದಲಿತ ವಿರೋಧಿ ಎಂಬುದು ಸಿದ್ದರಾಮಯ್ಯರ ಮೂಲಕ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.
ಸರಕಾರ ಹಾಗೂ ಪೊಲೀಸರು ಇದರ ಬಗ್ಗೆ ತೀಕ್ಷ್ಣ ಕ್ರಮ ಕೈಗೊಳ್ಳಬೇಕು. ಸಿದ್ದರಾಮಯ್ಯರನ್ನು ತಕ್ಷಣ ಬಂಧಿಸಿ ನನಗೆ ನ್ಯಾಯ ಕೊಡಬೇಕು ಎಂದು ಅವರು ಮನವಿ ಮಾಡಿದರು. ಇದು ಅಂಗೈ ಹುಣ್ಣು ಇದ್ದಂತೆ. ಇದಕ್ಕೆ ಕನ್ನಡಿ ಬೇಕಾಗಿಲ್ಲ. ಆದ್ದರಿಂದ ತಕ್ಷಣ ಅವರನ್ನು ಬಂಧಿಸಬೇಕಿದೆ ಎಂದು ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಈ ಸಂದರ್ಭದಲ್ಲಿ, ಮೋರ್ಚಾದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಈ ಹಿಂದೆಯೂ ದೂರು ನೀಡಿದ್ದ ನಾರಾಯಣಸ್ವಾಮಿ:
'ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಸೇರಿದ್ದಾರೆ' ಎಂಬ ವಿವಾದಾತ್ಮಕ ಹೇಳಿಕೆಯನ್ನು ಸಿದ್ದರಾಮಯ್ಯ ನೀಡಿದ್ದಾರೆ. ಆದರೆ, ಈ ಬಗ್ಗೆ ಅವರು ಕ್ಷಮೆ ಕೋರದ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಪರಾಧ ತಡೆ ಕಾಯ್ದೆ ಅಡಿ ಕೇಸು ದಾಖಲಿಸುವಂತೆ ಕೋರಿ ಈ ಹಿಂದೊಮ್ಮೆ ಛಲವಾದಿ ನಾರಾಯಣಸ್ವಾಮಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದರು.