ನಾಮನಿರ್ದೇಶಿತ ಸದಸ್ಯರಿಗಿಲ್ಲ ಮತದಾನದ ಹಕ್ಕು: ಸಂಕಷ್ಟಕ್ಕೆ ಸಿಲುಕಿದ ಎಂಎಲ್ಸಿ ಪ್ರಾಣೇಶ್
ಬೆಂಗಳೂರು. ನ.4: ಕಳೆದ ಡಿಸೆಂಬರ್ ತಿಂಗಳಿನಲ್ಲಿ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಕೇವಲ ಆರು ಮತಗಳಿಂದ ವಿಜಯಿಯಾಗಿದ್ದ ಚಿಕ್ಕಮಗಳೂರಿನ ಕೆ.ಎಂ.ಪ್ರಾಣೇಶ್ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಹೈಕೋರ್ಟ್ ಮಹತ್ವದ ತೀರ್ಪಿನಲ್ಲಿ, ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ನಾಮ ನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲವೆಂದು ಸಾರಿದೆ.
ಹಾಗಾಗಿ ಚಿಕ್ಕಮಗಳೂರು ಕ್ಷೇತ್ರದಿಂದ ವಿಧಾನಪರಿಷತ್ಗೆ ಆಯ್ಕೆಯಾಗಿದ್ದ ಬಿಜೆಪಿಯ ಎಂ.ಕೆ.ಪ್ರಾಣೇಶ್ ತೊಂದರೆಗೆ ಸಿಲುಕಿದ್ದಾರೆ. ಆದರೆ ಅದೇ ಎಂ.ಕೆ.ಪ್ರಾಣೇಶ್ ಆಯ್ಕೆ ಅಸಿಂಧು ಕೋರಿ ಸಲ್ಲಿಸಿರುವ ಅರ್ಜಿ ಹೈಕೋರ್ಟ್ನ ಮತ್ತೊಂದು ನ್ಯಾಯಪೀಠದ ಮುಂದೆ ವಿಚಾರಣೆ ಬಾಕಿ ಇದೆ. ಹಾಗಾಗಿ ಸದ್ಯಕ್ಕೆ ಅವರು ಬಚಾವಾಗಿದ್ದಾರೆ.
ಎಂಎಲ್ಸಿ ಚುನಾವಣೆಯಲ್ಲಿ ಸೋಲುಂಡಿದ್ದ ಕಾಂಗ್ರೆಸ್ ಪಕ್ಷದ ಗಾಯತ್ರಿ ಶಾಂತೇಗೌಡ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ. ಹೇಮಂತ್ ಚಂದನ್ ಗೌಡರ್ರವರಿದ್ದ ಏಕಸದಸ್ಯ ಪೀಠ ಧಾರವಾಡದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ತೀರ್ಪು ಪ್ರಕಟಿಸಿದೆ.
ಬೆಂಗಳೂರು ಪೀಠದಲ್ಲಿ ವಾದ-ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಪೀಠ, ಸಂವಿಧಾನದ ಕಲಂ 243(6) ಮತ್ತು ಕೆಎಂಸಿ ಕಾಯಿದೆ ಪ್ರಕಾರ ನಾಮನಿರ್ದೇಶಿತ ಸದಸ್ಯರಿಗೆ ಮುನಿಸಿಪಾಲಿಟಿ ಸಭೆಗಳಲ್ಲೂ ಸಹ ಮತದಾನ ಮಾಡುವ ಹಕ್ಕಿಲ್ಲ, ಅವರು ಸಲಹೆ-ಸೂಚನೆಗಳನ್ನು ನೀಡಬಹುದಷ್ಟೇ ಹಾಗಾಗಿ ವಿಧಾನಪರಿಷತ್ ಚುನಾವಣೆಯಲ್ಲೂ ಸಹ ಮತದಾನದ ಹಕ್ಕು ಇರುವುದಿಲ್ಲಎಂದು ಆದೇಶಿಸಿದೆ.

12 ಸದಸ್ಯರಿಗೆ ಮತದಾನದ ಹಕ್ಕು: ಚಿಕ್ಕಮಗಳೂರು ಕ್ಷೇತ್ರದ ಮತದಾರರ ಪಟ್ಟಿಯಲ್ಲಿ 4 ಪಟ್ಟಣ ಪಂಚಾಯ್ತಿಗಳ 12 ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ನೀಡಿರುವುದು ಕಾನೂನುಬಾಹಿರ ಕ್ರಮ. ಸಂವಿಧಾನದ ನಿಯಮಗಳ ಪ್ರಕಾರ ನಾಮನಿರ್ದೇಶಿತ ಸದಸ್ಯರಿಗೆ ಸ್ಥಳೀಯ ಸಂಸ್ಥೆಗಳ ಸಭೆಗಳಲ್ಲಿ ಭಾಗವಹಿಸಬಹುದೇ ಹೊರತು, ಅವರಿಗೆ ಮತದಾನದ ಹಕ್ಕಿರುವುದಿಲ್ಲ ಎಂದು ಅರ್ಜಿದಾರರು ಪರ ವಕೀಲರು ವಾದಿಸಿದ್ದರು.
ಅಲ್ಲದೆ, ಕಾನೂನು ಬಾಹಿರವಾಗಿ ಅವರಿಗೆ ಮತದಾನದ ಹಕ್ಕು ನೀಡಿರುವುದರಿಂದ ಆ ಮತಗಳ ಆಧಾರದ ಮೇಲೆ ಎಂ.ಕೆ.ಪ್ರಾಣೇಶ್ ಗೆಲುವು ಸಾಧಿಸಿದ್ದು ಅವರ ಅಯ್ಕೆ ಸಂವಿಧಾನ ವಿರೋಧಿಯಾಗಿದೆ ಎಂದು ಹೇಳಿದ್ದರು.
ಮೂಡಿಗೆರೆ, ಎನ್.ಆರ್.ಪುರ. ಶೃಂಗೇರಿ ಮತ್ತು ಕೊಪ್ಪ ಟೌನ್ ಪಂಚಾಯ್ತಿಗಳ 12 ನಾಮನಿರ್ದೇಶಿತ ಸದಸ್ಯರಿಗೆ ಕಾನೂನು ಬಾಹಿರವಾಗಿ ಮತದಾನದ ಹಕ್ಕು ನೀಡಿರುವುದರಿಂದ ಪ್ರತಿಸ್ಪರ್ಧಿ ಗೆಲುವು ಸಾಧಿಸಿದ್ದಾರೆ. ಆದರೆ ಮೂಲತಃ ಸಂವಿಧಾನದ ನಿಯಮಗಳಲ್ಲಿ ನಾಮನಿರ್ದೇಶಿತ ಸದಸ್ಯರಿಗೆ ಎಂಎಲ್ಸಿ ಚುನಾವಣೆಯಲ್ಲಿ ಮತದಾನದ ಹಕ್ಕಿಲ್ಲ. ಪ್ರತಿವಾದಿಯ ಆಯ್ಕೆ ಅಕ್ರಮ ಹಾಗೂ ಕಾನೂನು ಬಾಹಿರ ಹಾಗಾಗಿ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲವೆಂದು ಸಾರಬೇಕೆಂದು ಕೋರಿದ್ದರು.
ಪ್ರತಿವಾದಿ ಎಂ.ಕೆ.ಪ್ರಾಣೇಶ್ ಪರ ವಕೀಲರು, ನಾಮನಿರ್ದೇಶಿತರ ಸದಸ್ಯರಿಗೆ ಸ್ಥಳೀಯ ಸಂಸ್ಥೆಗಳ ಸಭೆಗಳಲ್ಲಿ ಮತದಾನದ ಹಕ್ಕಿಲ್ಲ ಎಂದಾಕ್ಷಣ ವಿಧಾನಪರಿಷತ್ ಚುನಾವಣೆಯಲ್ಲೂ ಮತದಾನದ ಹಕ್ಕಿಲ್ಲವೆಂದು ಹೇಳಲಾಗದು. ಸ್ಥಳೀಯ ಸಂಸ್ಥೆಗಳ ಸಭೆ ಬೇರೆ ಮತ್ತು ವಿಧಾನಪರಿಷತ್ ಚುನಾವಣೆಯೇ ಬೇರೆ. ನಾಮನಿರ್ದೇಶಿತರಿಗೆ ಎಂಎಲ್ಸಿ ಚುನಾವಣೆಯಲ್ಲಿ ಮತದಾನದ ಹಕ್ಕಿಲ್ಲವೆಂದು ಎಲ್ಲೂ ನಿರ್ಬಂಧ ಹೇರಿಲ್ಲ ಎಂದು ಹೇಳಿದ್ದರು.
ಪ್ರಕರಣದ ಹಿನ್ನೆಲೆ: ಕೇಂದ್ರ ಚುನಾವಣಾ ಆಯೋಗ 2021ರ ನ.9ರಂದು ಚಿಕ್ಕಮಗಳೂರು ಸೇರಿದಂತೆ ರಾಜ್ಯದ 20 ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ 25 ಸದಸ್ಯ ಸ್ಥಾನಗಳಿಗೆ ಚುನಾವಣೆಯನ್ನು ಘೋಷಣೆ ಮಾಡಿತ್ತು. ಆ ಚುನಾವಣೆಯಲ್ಲಿ ಎಂ.ಕೆ.ಪ್ರಾಣೇಶ್ 1182 ಮತಗಳನ್ನು ಮತ್ತು ಗಾಯಿತ್ರಿ ಅವರು 1176 ಮತಗಳನ್ನು ಪಡೆದಿದ್ದರು. ಎಂ.ಕೆ.ಪ್ರಾಣೇಶ್ 6 ಮತಗಳ ಅಲ್ಪ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಅದನ್ನು ಪ್ರಶ್ನಿಸಿ ಗಾಯತ್ರಿ ಶಾಂತೇಗೌಡ ಹೈಕೋರ್ಟ್ ಮೊರೆ ಹೋಗಿದ್ದರು.












Click it and Unblock the Notifications