ಕರ್ನಾಟಕ; ದೇವಾಲಯಗಳಲ್ಲಿ ಮೊಬೈಲ್ ಬಳಕೆಗೆ ನಿಷೇಧ
ಬೆಂಗಳೂರು, ಜುಲೈ 17; ದೇವಾಲಯದಲ್ಲಿ ಮೊಬೈಲ್ ಬಳಕೆ ಮಾಡುವವರಿಗೆ, ಮೊಬೈಲ್ ಮೂಲಕ ರೀಲ್ಸ್ ಮಾಡುವವರಿಗೆ ಕರ್ನಾಟಕ ಸರ್ಕಾರ ಕಹಿಸುದ್ದಿ ನೀಡಿದೆ. ದೇವಾಲಯಗಳಲ್ಲಿ ಮೊಬೈಲ್ ಬಳಕೆಗೆ ನಿಷೇಧ ಹೇರಲಾಗಿದೆ.
ಸೋಮವಾರ ಈ ಕುರಿತು ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆ ಆದೇಶ ಹೊರಡಿಸಿದೆ. ಇಲಾಖೆ ವ್ಯಾಪ್ತಿಯ ದೇವಾಲಯಗಳ ಆವರಣದಲ್ಲಿ ಮೊಬೈಲ್ ಬಳಕೆ ಮಾಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ವ್ಯಾಪ್ತಿಯಲ್ಲಿ ಸುಮಾರು 30 ಸಾವಿರಕ್ಕೂ ಅಧಿಕ ದೇವಾಲಯಗಳಿವೆ. ದೇವಾಲಯಗಳನ್ನು ಆದಾಯಕ್ಕೆ ಅನುಗುಣವಾಗಿ ಎ, ಬಿ ಮತ್ತು ಸಿ ಎಂದು ವಿಂಗಡಣೆ ಮಾಡಲಾಗಿದೆ.
ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಅಧಿಸೂಚಿತ ಸಂಸ್ಥೆಗಳ ನಿರ್ವಹಣೆಯನ್ನು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ಹಾಗೂ ನಿಯಮಗಳು 2002 ರ ಅನ್ವಯ ನಿರ್ವಹಿಸಲಾಗುತ್ತಿದೆ.
ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಬಳಕೆ ಮಾಡಬೇಡಿ ಎಂದು ಈಗಾಗಲೇ ಫಲಕ ಹಾಕಲಾಗಿದೆ. ಆದರೂ ಜನರು ಮೊಬೈಲ್ ಬಳಕೆ ಮಾಡುತ್ತಾರೆ. ಅದು ರಿಂಗ್ ಆಗಿ ಗದ್ದಲಕ್ಕೆ ಕಾರಣವಾಗುತ್ತದೆ. ಆದ್ದರಿಂದ ಮೊಬೈಲ್ ಬಳಕೆಗೆ ನಿಷೇಧ ಹೇರಲಾಗಿದೆ.
ಆದೇಶದಲ್ಲಿ ಏನಿದೆ?; ಕಂದಾಯ ಇಲಾಖೆ (ಧಾರ್ಮಿಕ ದತ್ತಿ) ಅಧೀನ ಕಾರ್ಯದರ್ಶಿ ಕೆ. ಪಿ. ಹೇಮಂತರಾಜು ಸೋಮವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆ ಹೆಚ್ಚಾಗುತ್ತಿದೆ. ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಬಳಕೆಯ ಶಬ್ದಗಳಿಂದ ಸಿಬ್ಬಂದಿಗೂ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೂ ಧ್ಯಾನ, ಪೂಜಾದಿಗಳನ್ನು ನಡೆಸಲು ತೊಂದರೆಯಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ದೇವರ ದರ್ಶನದ ಸಮಯದಲ್ಲಿ ತಮ್ಮ ಮೊಬೈಲ್ ಫೋನ್ಗಳನ್ನು ಸ್ವಿಚ್ ಆಫ್ ಮಾಡಿ, ದೇವರ ದರ್ಶನ ಮಾಡುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ದೇವಾಲಯಗಳಲ್ಲಿ ಕಡ್ಡಾಯವಾಗಿ ಮೊಬೈಲ್ ಬಳಕೆಯನ್ನು ನಿಷೇಧ ಮಾಡಲಾಗುತ್ತಿದೆ ಎಂಬ ಸೂಚನಾ ಫಲಕಗಳನ್ನು ಅಳವಡಿಸಬೇಕು. ಈ ಮೂಲಕ ದೇವಾಲಯಗಳಿಗೆ ಬರುವ ಭಕ್ತಾದಿಗಳು ದೇವಾಲಯದ ಒಳಗೆ ನೆಮ್ಮದಿಯಿಂದ ದೇವರ ದರ್ಶನ ಮಾಡಿಕೊಂಡು ಹೋಗಲು ಅವಕಾಶ ನೀಡುವಂತೆ ಮಾಹಿತಿ ನೀಡಬೇಕು ಎಂದು ಆದೇಶದಲ್ಲಿ ನಿರ್ದೇಶನ ನೀಡಲಾಗಿದೆ.
ಇಷ್ಟು ದಿನ ರಾಜ್ಯದ ಕೆಲವು ದೇವಾಲಯಗಳು ದೇವಾಲಯದ ಒಳಗಡೆ ಮಾತ್ರ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಿತ್ತು. ಆದರೆ, ಈಗ ಧಾರ್ಮಿಕ ಮತ್ತು ದತ್ತಿ ಇಲಾಖೆಯೇ ಅಧಿಕೃತವಾಗಿ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಿದೆ.












Click it and Unblock the Notifications