ಚುನಾವಣಾ ನೀತಿ ಸಂಹಿತೆ ಜಾರಿ; ಸಿಎಂಗೆ ಸಿಗುವ ಸೌಲಭ್ಯಗಳು
ಬೆಂಗಳೂರು, ಮಾರ್ಚ್ 29; ಕರ್ನಾಟಕದ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಚುನಾವಣಾ ಮಾದರಿ ನೀತಿ ಸಂಹಿತೆ ತಕ್ಷಣದಿಂದಲೇ ಜಾರಿಗೆ ಬಂದಿದೆ. ಮೇ 10ರ ಬುಧವಾರ ರಾಜ್ಯದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 13ರ ಶನಿವಾರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಬುಧವಾರ ಚುನಾವಣಾ ದಿನಾಂಕ ಘೋಷಣೆ ಮಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಕ್ಷಣದಿಂದಲೇ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಹೇಳಿದರು. ಆದ್ದರಿಂದ ಮುಖ್ಯಮಂತ್ರಿಗಳು, ಸಚಿವರು, ಶಾಸಕರು ಸರ್ಕಾರಿ ಸವಲತ್ತು, ಸರ್ಕಾರಿ ವಾಹನ ಬಳಕೆ ಮಾಡಲು ಹಲವು ನಿರ್ಬಂಧಗಳು ಜಾರಿಗೆ ಬರಲಿವೆ.

ರಾಜ್ಯದಲ್ಲಿ ಚುನಾವಣಾ ಅಕ್ರಮ ತಡೆಯಲು ಅಬಕಾರಿ, ವಾಣಿಜ್ಯ ತೆರಿಗೆ ಇಲಾಖೆ, ಪೊಲೀಸ್, ಅರಣ್ಯ ಇಲಾಖೆ ಜಂಟಿಯಾಗಿ ಕಾರ್ಯ ನಿರ್ವಹಣೆ ಮಾಡಲಿವೆ. ಒಟ್ಟು 2,400 ವಿಚಕ್ಷಣ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಅಕ್ರಮಗಳ ಮೇಲೆ ನಿಗಾವಹಿಸಲು 2016 ಸಂಚಾರಿ ತಂಡ ನಿಯೋಜಿಸಲಾಗಿದ್ದು ಎಲ್ಲಾ ವಿಮಾನ ನಿಲ್ದಾಣ, ಬಂದರು, ಹೆದ್ದಾರಿಗಳಲ್ಲಿ ಕಣ್ಗಾವಲು ಇಡಲಾಗುತ್ತದೆ.
ಬುಧವಾರದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ. ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಕರ್ನಾಟಕದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 13ರಂದು ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 20ರ ತನಕ ನಾಮಪತ್ರಗಳನ್ನು ಸಲ್ಲಿಸಬಹುದು. ಏಪ್ರಿಲ್ 21 ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ರ ಶನಿವಾರ ಮತ ಎಣಿಕೆ ನಡೆಯಲಿದೆ.
ಮುಖ್ಯಮಂತ್ರಿಗಳಿಗೆ ಸಿಗುವ ಸವಲತ್ತು; ಚುನಾವಣಾ ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಕೊಪ್ಪಳ ಜಿಲ್ಲಾ ಪ್ರವಾಸ ರದ್ದು ಮಾಡಿಕೊಂಡು ಗೃಹ ಕಚೇರಿ ಕೃಷ್ಣಾದಲ್ಲಿಯೇ ಇದ್ದಾರೆ. ವಿವಿಧ ಸಚಿವರು ಅವರನ್ನು ಭೇಟಿ ಮಾಡಲು ಆಗಮಿಸುತ್ತಿದ್ದು, ಚುನಾವನಾ ದಿನಾಂಕದ ಕುರಿತು ಚರ್ಚೆ ನಡೆಸುತ್ತಿದ್ದಾರೆ.

ನೀತಿ ಸಂಹಿತೆ ಜಾರಿಯಾದರೂ ಸಹ ಮುಖ್ಯಮಂತ್ರಿಗಳಿಗೆ ಕೆಲವು ಸವಲತ್ತುಗಳು ಸಿಗುತ್ತವೆ. ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ವಿಧಾನಸೌಧಕ್ಕೆ ಸಂಚಾರ ನಡೆಸಲು ಸರ್ಕಾರಿ ಕಾರು ಬಳಕೆ ಮಾಡಬಹುದು. ಆದರೆ ಜಿಲ್ಲಾ ಪ್ರವಾಸ, ಪಕ್ಷದ ಪರ ಪ್ರಚಾರಕ್ಕೆ ಹೋಗುವಾಗ ಸರ್ಕಾರಿ ಕಾರು ಬಳಕೆ ಮಾಡುವಂತಿಲ್ಲ. ಮುಖ್ಯಮಂತ್ರಿಗಳಿಗೆ ಸಿಗುವ ಭದ್ರತೆಯಲ್ಲಿ ವ್ಯತ್ಯಾಸ ಇರುವುದಿಲ್ಲ.
ಮುಖ್ಯಮಂತ್ರಿಗಳಿಗೆ ಆದೇಶ ಮಾಡುವ, ಪರಿಹಾರ ಘೋಷಣೆ ಮಾಡುವ, ಹೊಸ ಸರ್ಕಾರಿ ಯೋಜನೆ ಘೋಷಣೆ ಮಾಡುವ, ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಅಧಿಕಾರ ಇರುವುದಿಲ್ಲ. ಧ್ವಜಾರೋಹಣ ಸೇರಿದಂತೆ ಸರ್ಕಾರಿ ಕಾರ್ಯಕ್ರಮದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಪಾಲ್ಗೊಳ್ಳುತ್ತಾರೆ. ಆದರೆ ಪ್ರವಾಹ ಸೇರಿದಂತೆ ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗ ತುರ್ತು ಪರಿಹಾರ ಕಾರ್ಯ ಕೈಗೊಳ್ಳಲು, ಅನುದಾನ ನೀಡಲು ಮುಖ್ಯಮಂತ್ರಿಗಳಿಗೆ ಅವಕಾಶ ಇರುತ್ತದೆ.
ಆದರೆ ಶಾಸಕರು, ಸಚಿವರು ಸರ್ಕಾರಿ ವಾಹನ ಬಳಕೆ ಮಾಡುವಂತಿಲ್ಲ. ಚುನಾವಣಾ ಫಲಿತಾಂಶ ಪ್ರಕಟಗೊಂಡು ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯಾಗುವ ತನಕ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಬುಧವಾರ ಚುನಾವಣಾ ನೀತಿ ಸಂಹಿತೆ ಜಾರಿಯಾದ ತಕ್ಷಣ ವರುಣ ಕ್ಷೇತ್ರದ ಪ್ರವಾಸದಲ್ಲಿದ್ದ ಸಿದ್ದರಾಮಯ್ಯ ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲಿ ಪ್ರಯಾಣ ಮುಂದುವರೆಸಿದ್ದಾರೆ.
ಕೇಸು ದಾಖಲಾಗುತ್ತದೆ; ಚುನಾವಣೆ ಘೋಷಣೆಯಾದ ತಕ್ಷಣ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬರುತ್ತದೆ. ಅದನ್ನು ಶಾಸಕರು, ಸಚಿವರು, ರಾಜಕೀಯ ಪಕ್ಷಗಳು ಉಲ್ಲಂಘನೆ ಮಾಡಿದರೆ ಪ್ರಕರಣ ದಾಖಲು ಮಾಡಲಾಗುತ್ತದೆ. ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಏನು ಮಾಡಬಹುದು, ಏನು ಮಾಡಬಾರದು? ಎಂದು ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ತಮ್ಮ ಭಾಷಣಗಳು ಮಾತ್ರವಲ್ಲ ಸಂಚಾರದ ಸಂದರ್ಭದಲ್ಲಿಯೂ ನೀತಿ ಸಂಹಿತೆ ಪಾಲನೆ ಮಾಡಬೇಕಾಗುತ್ತದೆ. ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸುವ ಸಲುವಾಗಿಯೇ ಚುನಾವಣಾ ಆಯೋಗದ ಸೂಚನೆಯಂತೆ ವಿಚಕ್ಷಣಾ ತಂಡ ಕೆಲಸ ಮಾಡಲಿದೆ.












Click it and Unblock the Notifications