ಕರ್ನಾಟಕ ಚುನಾವಣೆ; ಶಸ್ತ್ರಾಸ್ತ್ರಗಳ ಠೇವಣಿಗೆ ನಿಯಮಗಳು
ಬೆಂಗಳೂರು, ಏಪ್ರಿಲ್ 03; ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನಸಭೆ ಚುನಾವಣೆ 2023ರ ವೇಳಾಪಟ್ಟಿ ಪ್ರಕಟಿಸುತ್ತಿದ್ದಂತೆಯೇ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ರಾಜ್ಯದಲ್ಲಿ ಮೇ 10ರ ಬುಧವಾರ ಮತದಾನ ನಡೆಯಲಿದ್ದು, ಮೇ 13ರ ಶನಿವಾರ ಫಲಿತಾಂಶ ಪ್ರಕಟವಾಗಲಿದೆ. ಮಾದರಿ ನೀತಿ ಸಂಹಿತೆ ನಿಯಮಗಳ ಅನ್ವಯ ಶಸ್ತ್ರ ಪರವಾನಗಿದಾರರು ಶಸ್ತ್ರಾಸ್ತ್ರಗಳನ್ನು ಠೇವಣಿ ಇಡಬೇಕಿದೆ. ಈ ಕುರಿತು ನಿಯಮ ಏನು ಹೇಳುತ್ತದೆ? ಎಂಬ ವಿವರಗಳು ಇಲ್ಲಿವೆ.
ಚುನಾವಣೆ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಶಸ್ತ್ರ ಪರವಾನಗಿ ಹೊಂದಿರುವ ಶಸ್ತ್ರ ಪರವಾನಗಿದಾರರು ತಮ್ಮ ಬಳಿ ಇರುವ ಶಸ್ತ್ರಾಸ್ತ್ರಗಳನ್ನು ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೂ ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡಬೇಕು. ಎಲ್ಲಾ ಜಿಲ್ಲೆಗಳ ಜಿಲ್ಲಾ ಚುನಾವಣಾಧಿಕಾರಿಗಳು ಈ ಕುರಿತು ಪ್ರಕಟಣೆ ಮೂಲಕ ಜನರಿಗೆ ಮಾಹಿತಿ ನೀಡಿದ್ದಾರೆ. ಕರ್ನಾಟಕದಲ್ಲಿ ಮಾರ್ಚ್ 29ರಿಂದಲೇ ಮಾದರಿ ನೀತಿ ಸಂಹಿತೆಯು ಜಾರಿಗೆ ಬಂದಿದೆ.

ಚುನಾವಣೆ ಘೋಷಣೆಯಾದ ಬಳಿಕ ಸಾರ್ವಜನಿಕ ಹಿತದೃಷ್ಟಿಯಿಂದ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಶಸ್ತ್ರ ಪರವಾನಗಿ ಹೊಂದಿರುವ ಶಸ್ತ್ರ ಪರವಾನಗಿದಾರರು ತಮ್ಮ ಬಳಿ ಇರುವ ಶಸ್ತ್ರಾಸ್ತ್ರಗಳನ್ನು ಮುಂಜಾಗ್ರತಾ ಕ್ರಮವಾಗಿ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಠೇವಣಿ ಇಡುವ ಅಗತ್ಯವಿದೆ. ಚುನಾವಣಾ ಆಯೋಗದ ನಿರ್ದೇಶನದಂತೆ ಹಾಗೂ ಶಸ್ತ್ರಾಸ್ತ್ರಗಳ ಅಧಿನಿಯಮ 1959ರ ಕಲಂ 24 ರನ್ವಯ ಜಿಲ್ಲಾ ಚುನಾವಣಾಧಿಕಾರಿಗಳು ಈ ಕುರಿತು ಆದೇಶ ಹೊರಡಿಸಿದ್ದಾರೆ.
ಯಾರಿಗೆ ವಿನಾಯಿತಿ ಇದೆ?; ಚುನಾವಣಾ ಸಂಧರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಸಾರ್ವಜನಿಕ ಹಿತದೃಷ್ಟಿಯಿಂದ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಶಸ್ತ್ರಾಸ್ತ್ರಗಳನ್ನು ಠೇವಣಿ ಇಡಬೇಕಿದೆ. ಅಧಿಕೃತ ಪರವಾನಗಿ ಹೊಂದಿರುವ ಆಯುಧಗಳು, ಮದ್ದು-ಗುಂಡುಗಳು, ಬೆಂಕಿ ಉಗುಳುವ (fire arms), ಶಸ್ತ್ರಾಸ್ತ್ರಗಳು ಹಾಗೂ ಮಾರಕಾಸ್ತ್ರಗಳನ್ನು ಹೊಂದಿರುವ ಶಸ್ತ್ರ ಪರವಾನಗಿದಾರರು ತಮ್ಮ ಬಳಿ ಇರುವ ಶಸ್ತ್ರಾಸ್ತ್ರಗಳನ್ನು, ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೂ ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡಬೇಕು.

ಶಸ್ತ್ರಾಸ್ತ್ರಗಳನ್ನು ಠೇವಣಿ ಇಟ್ಟುಕೊಳ್ಳುವ ಕುರಿತು ಎಲ್ಲಾ ಪೊಲೀಸ್ ಠಾಣಾಧಿಕಾರಿಗಳಿಗೆ ಈ ಕೂಡಲೇ ಸೂಚನೆ ನೀಡಲು ಹಾಗೂ ತಮ್ಮ ವ್ಯಾಪ್ತಿಯಲ್ಲಿ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಎಲ್ಲಾ ಶಸ್ತ್ರ ಪರವಾನಗಿದಾರರಿಂದ ಆಯುಧಗಳನ್ನು ಪಡೆದು ಠಾಣೆಯಲ್ಲಿ ಠೇವಣಿ ಇರಿಸಿಕೊಂಡು ಸೂಕ್ತ ಸ್ವೀಕೃತಿ ನೀಡಿ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಶಸ್ತ್ರ ಪರವಾನಗಿದಾರರ ಪರವಾನಗಿ ಪುಸ್ತಕವನ್ನು ಪರಿಶೀಲಿಸಿ ಶಸ್ತ್ರ ಪರವಾನಗಿ ನವೀಕರಣ ಗೊಂಡಿರುವ ಬಗ್ಗೆ ಖಚಿತ ಪಡಿಸಿಕೊಂಡ ನಂತರವಷ್ಟೇ ಪರವಾನಗಿದಾರರಿಗೆ ಶಸ್ತ್ರಾಸ್ತ್ರಗಳನ್ನು ಹಿಂದಿರುಗಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಪೊಲೀಸ್ ಠಾಣೆಗಳಿಗೆ ಸೂಚಿಸಲಾಗಿದೆ.
ಬ್ಯಾಂಕ್, ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಅಧೀನದಲ್ಲಿನ ಸಂಸ್ಥೆಗಳಲ್ಲಿ ಭದ್ರತೆಗಾಗಿ ಪರವಾನಗಿ ಹೊಂದಿರುವ ಶಸ್ತ್ರಾಸ್ತ್ರಗಳಿಗೆ ಮಾತ್ರ ಈ ಮೇಲ್ಕಂಡ ಆದೇಶವು ಅನ್ವಯಿಸುವುದಿಲ್ಲ. ಉಳಿದಂತೆ ಭದ್ರತೆಗಾಗಿ ಪರವಾನಗಿ ಇಲ್ಲದ ಬ್ಯಾಂಕ್, ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಅಧೀನದಲ್ಲಿನ ಸಂಸ್ಥೆಗಳು ಕಡ್ಡಾಯವಾಗಿ ತಮ್ಮ ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡಬೇಕು.
ಧಾರ್ಮಿಕ ಸಂಸ್ಥೆಗಳು, ಸರ್ಕಾರಿ, ಅರೆ ಸರ್ಕಾರಿ ಮತ್ತು ಸರ್ಕಾರೇತರ ಖಾಸಗಿ ಸಂಸ್ಥೆಗಳಲ್ಲಿ ಭದ್ರತೆಗಾಗಿ ಆಯುಧಗಳನ್ನು ಹೊಂದಿರುವವರು ಹಾಗೂ ವೈಯುಕ್ತಿಕವಾಗಿ ಜೀವ ಬೆದರಿಕೆ ಹೊಂದಿರುವವರು ಆಯುಧಗಳನ್ನು ತಮ್ಮಲ್ಲಿಯೇ ಇಟ್ಟುಕೊಳ್ಳುವ ಅನಿವಾರ್ಯತೆಗಳು ಇದ್ದಲ್ಲಿ ಇಂತಹ ಶಸ್ತ್ರ ಪರವಾನಿಗೆದಾರರು ತಮ್ಮ ವ್ಯಾಪ್ತಿ ಪ್ರದೇಶದ ಪೊಲೀಸ್ ಠಾಣೆಗಳಲ್ಲಿ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಬೇಕು.
ಎಲ್ಲಾ ಪೊಲೀಸ್ ಠಾಣಾಧಿಕಾರಿಗಳು ತಮ್ಮ ಮೇಲಾಧಿಕಾರಿಗಳಿಂದ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಗೆ ಸ್ಪಷ್ಟ ಅಭಿಪ್ರಾಯದೊಂದಿಗೆ ಪ್ರಸ್ತಾವನೆಗಳನ್ನು ಸಲ್ಲಿಸುವುದು. ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಗಳನ್ನು ಜಿಲ್ಲಾ ಸ್ಕ್ರೀನಿಂಗ್ ಸಮಿತಿ ಸದಸ್ಯರಾದ ಜಿಲ್ಲಾ ಪೊಲೀಸ್ ಅಧೀಕ್ಷಕರು ಸದರಿ ಅರ್ಜಿಗಳನ್ನು ಸಮಿತಿ ಮುಂದೆ ಮಂಡಿಸಿ ಅರ್ಜಿಗಳ ಅರ್ಹತೆಯ ಮೇರೆಗೆ ಪರಿಶೀಲಿಸಿ ಸಮಿತಿ ನಿರ್ಣಯದಂತೆ ವಿನಾಯಿತಿ ನೀಡುವ ಬಗ್ಗೆ ಕ್ರಮಗಳನ್ನು ಕೈಗೊಳ್ಳಬೇಕು.
ಯಾವುದೇ ಪರವಾನಗಿದಾರರು ಚುನಾವಣಾ ಮಾದರಿ ನೀತಿ ಸಂಹಿತೆಯ ಸಂದರ್ಭದಲ್ಲಿ ಶಸ್ತ್ರಾಸ್ತ್ರಗಳನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗೆ ಠೇವಣಿ ಇರಿಸದೆ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಹಾಗೂ ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಂಡಿರುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಅನ್ವಯವಾಗಬಹುದಾದ ಎಲ್ಲಾ ಕಾಯ್ದೆಗಳನ್ವಯ ಕಾನೂನು ರೀತಿ ಕ್ರಮಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಜಿಲ್ಲಾ ಚುನಾವಣಾಧಿಕಾರಿಗಳು ಆದೇಶ ನೀಡಿದ್ದಾರೆ.












Click it and Unblock the Notifications