ಮೇ 29ರಿಂದ ಶಾಲೆಗಳು ಆರಂಭ, ಮಳೆಗಾಲದ ಹಿನ್ನಲೆಯಲ್ಲಿ ಸೂಚನೆಗಳು
ಬೆಂಗಳೂರು, ಮೇ 25; ರಾಜ್ಯದಲ್ಲಿ ಹಿಂಗಾರು ಮಳೆ ಆರಂಭವಾಗಿದೆ. ಜೂನ್ 10ರ ಬಳಿಕ ನೈಋತ್ಯ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆ ಇದೆ. ಈ ಹಿನ್ನಲೆಯಲ್ಲಿ ಶಾಲೆಗಳಲ್ಲಿ ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿದೆ.
ಇಲಾಖೆಯ ಆಯುಕ್ತರು ರಾಜ್ಯದ ಬಹುತೇಕ ಭಾಗಗಳಲ್ಲಿ ತೀವ್ರ ಮಳೆಯಾಗುತ್ತಿರುವುದರಿಂದ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಎಂಬ ವಿಷಯದ ಮೇಲೆ ಸುತ್ತೋಲೆ ಹೊರಡಿಸಿದ್ದಾರೆ. ದಿನಾಂಕ 30/3/2023, ದಿನಾಂಕ 19/11/2021 ಮತ್ತು ದಿನಾಂಕ 11/7/2022ರ ಸುತ್ತೋಲೆಯನ್ನು ಉಲ್ಲೇಖಿಸಿದ್ದಾರೆ.

ಸುತ್ತೋಲೆಯಲ್ಲಿ ದಿನಾಂಕ 29/05/2023 ರಿಂದ 2023-24ನೇ ಶೈಕ್ಷಣಿಕ ವರ್ಷದ ಶಾಲೆಗಳು ಪ್ರಾರಂಭವಾಗಲಿದೆ. ಪ್ರಸ್ತುತ, ರಾಜ್ಯದ ಬಹುತೇಕ ಕಡೆಗಳಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರವಾಗಿ ಮಳೆಯುಂಟಾಗುತ್ತಿದ್ದು, ಶಾಲೆಗಳನ್ನು ಪ್ರಾರಂಭಿಸಿ ನಡೆಸುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈ ಕೆಳಕಂಡ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶೈಕ್ಷಣಿಕ ಉಸ್ತುವಾರಿ ಅಧಿಕಾರಿ/ ಸಿಬ್ಬಂದಿಗಳಿಗೆ ಈ ಮೂಲಕ ಮತ್ತೊಮ್ಮೆ ಸೂಚಿಸಿದೆ ಎಂದು ಹೇಳಿದ್ದಾರೆ.
ಮುನ್ನೆಚ್ಚರಿಕೆಗಳು; ತೀವ್ರ ಮಳೆಯಿಂದಾಗಿ ಶಿಥಿಲಾವಸ್ಥೆಯಲ್ಲಿರುವ ಕೆಲವು ಶಾಲಾ ಕಟ್ಟಡಗಳು ಯಾವುದೇ ಸಂದರ್ಭದಲ್ಲಿ ಹಾನಿಗೊಳಗಾಗುವ/ ಬಿದ್ದು ಹೋಗುವ ಸಂಭವವಿರುತ್ತದೆ. ಅಂತಹ ಶಾಲಾ ಕಟ್ಟಡಗಳನ್ನು/ ತರಗತಿಯ ಕೊಠಡಿ/ ಶೌಚಾಲಯಗಳನ್ನು ಬಳಸದೇ, ಸಮೀಪದ ಸುಸ್ಥಿತಿಯಲ್ಲಿರುವ ಕಟ್ಟಡ/ ಕೊಠಡಿಗಳನ್ನು/ ಶೌಚಾಲಯಗಳನ್ನು ಗುರುತಿಸಿ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವುದು.

ಮಕ್ಕಳು ಇಂತಹ ಕಟ್ಟಡ, ಕೊಠಡಿಗಳ ಮತ್ತು ಶೌಚಾಲಯಗಳ ಸಮೀಪದಲ್ಲಿ ಸುತ್ತಾಡದಂತೆ ಎಚ್ಚರಿಕೆ ಕ್ರಮ ವಹಿಸುವುದು. ಶಿಥಿಲಾವಸ್ಥೆಯಲ್ಲಿರುವ ಇಂತಹ ಕಟ್ಟಡಗಳ ತೀವ್ರತೆಯನ್ನು ಪರಿಗಣಿಸಿ ತೆರವುಗೊಳಿಸಲು ಅಥವಾ ನೆಲಸಮಗೊಳಿಸಲು ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳತಕ್ಕದ್ದು ಎಂದು ಸೂಚನೆ ನೀಡಲಾಗಿದೆ.
ಕೆಲವೆಡೆ ತೀವ್ರ ಮಳೆಯಿಂದಾಗಿ ಪ್ರವಾಹ ಅಥವಾ ನೆರೆ ಬಂದು ವಿದ್ಯಾರ್ಥಿಗಳು ಶಾಲೆಗಳಿಗೆ ಬಂದು ಹೋಗಲು ತೊಂದರೆಯುಂಟಾಗುವ ಅಥವಾ ಕೆಲವು ಸಂದರ್ಭಗಳಲ್ಲಿ ಮಳೆಯಿಂದಾಗಿ ಶಾಲೆಗಳ ಕೊಠಡಿಗಳಲ್ಲಿ/ ಆವರಣದೊಳಗೆ ನೀರು ಸಂಗ್ರಹವಾಗುವ ಸಂಭವವಿರುತ್ತದೆ.
ಇಂತಹ ಸಂದರ್ಭಗಳಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ/ ಪುರ ಸಭೆ/ ನಗರ ಸಭೆ/ ಮಹಾನಗರ ಪಾಲಿಕೆಗಳ (ಸ್ಥಳೀಯ ಸಂಸ್ಥೆಗಳ) ಸಹಕಾರದಿಂದ ಶಾಲಾ ಕಟ್ಟಡದಲ್ಲಿ ಸಂಗ್ರಹವಾಗಿರುವ ನೀರನ್ನು ತೆರವುಗೊಳಿಸುವುದು ಹಾಗೂ ಅಗತ್ಯಾನುಸಾರ/ ಸಂದರ್ಭಾನುಸಾರ ಮುಖ್ಯೋಪಾಧ್ಯಾಯರು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಜಿಲ್ಲಾ ಉಪನಿರ್ದೇಶರು (ಆಡಳಿತ) ಪೂರ್ವಾನುಮತಿ ಪಡೆದು ಶಾಲೆಗಳಿಗೆ ರಜೆಯನ್ನು ಘೋಷಿಸುವುದು. ಅಂತಹ ರಜಾ ದಿನಗಳಲ್ಲಿನ ಪಾಠ, ಪ್ರವಚನಗಳನ್ನು ಮುಂದಿನ ಸರ್ಕಾರಿ ರಜಾ ದಿನಗಳಲ್ಲಿ ಸರಿದೂಗಿಸುವಂತೆ ಸೂಚಿಸಲಾಗಿದೆ.
ಈ ಮೇಲ್ಕಂಡ ಎಲ್ಲಾ ಅಂಶಗಳನ್ನು ಹಾಗೂ ಹಿಂದಿನ ಸುತ್ತೋಲೆಯಲ್ಲಿ ಈ ಸಂಬಂಧ ಈಗಾಗಲೇ ತಿಳಿಸಿರುವ ಎಲ್ಲಾ ಅಂಶಗಳನ್ನು ಕಟ್ಟನಿಟ್ಟಾಗಿ ಪಾಲಿಸುವುದು ಹಾಗೂ ಸ್ಥಳೀಯ ಆರೋಗ್ಯ ಇಲಾಖೆ, ಸ್ಥಳೀಯ ಸಂಸ್ಥೆಗಳ ಮತ್ತು ತಾಲ್ಲೂಕು/ ಜಿಲ್ಲಾಡಳಿತಗಳ ಸಹಕಾರದೊಂದಿಗೆ/ ಮಾರ್ಗದರ್ಶನದೊಂದಿಗೆ ಅಗತ್ಯ ಕ್ರಮಗಳನ್ನು ಸಕಾಲದಲ್ಲಿ ಕೈಗೊಳ್ಳುವುದು ಎಂದು ಸುತ್ತೋಲೆ ಹೇಳಿದೆ.
ಮಳೆಯಿಂದ ಯಾವುದೇ ವಿದ್ಯಾರ್ಥಿ/ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ/ ಶಾಲೆಯ ಆವರಣದಲ್ಲಿ/ ಶಾಲೆಯ ಸುತ್ತ-ಮುತ್ತ ಯಾವುದೇ ರೀತಿಯ ತೊಂದರೆ ಅಥವಾ ಜೀವ ಹಾನಿ ಆಗದಂತೆ ಅಗತ್ಯ ಮುನ್ನೆಚ್ಚರಿಕಾ ಹಾಗೂ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಶಾಲೆಗಳನ್ನು ನಡೆಸಿಕೊಂಡು ಹೋಗುವಂತೆ ಸೂಚನೆ ನೀಡಲಾಗಿದೆ.












Click it and Unblock the Notifications