ಇನ್ನೂ ಎರಡು ದಿನ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ
ಬೆಂಗಳೂರು, ಆಗಸ್ಟ್ 01; ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಕಡಿಮೆಯಾಗಿದೆ. ಆದರೆ ಸಾಧಾರಣ ಮಳೆ ಮುಂದುವರೆದಿದೆ. ಮುಂದಿನ 3-4 ದಿನಗಳ ಬಳಿಕ ಮಳೆ ಕಡಿಮೆಯಾಗಲಿದೆ ಎಂದು ಕರ್ನಾಟಕ ರಾಜ್ಯ ಪ್ರಾಕೃತಿಕ ವಿಕೋಪ ಉಸ್ತುವಾರಿ ಕೇಂದ್ರವು ಮುನ್ಸೂಚನೆ ನೀಡಿದೆ.
Recommended Video
ಕಳೆದ 15 ದಿನಗಳಿಂದ ಸುರಿದ ಭಾರೀ ಮಳೆ ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಅನಾಹುತಗಳನ್ನು ಮಾಡಿತು. ಮಳೆ ಕಡಿಮೆಯಾದರೆ ಸಾಕು ಎಂದು ಜನರು ಕೈ ಮುಗಿಯುತ್ತಿದ್ದರು.
ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾನುವಾರ ಮತ್ತು ಸೋಮವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಆಗಾಗ ಮೋಡ ಕವಿದ ವಾತಾವರಣವಿತ್ತು. ಕೆಲವು ಬಾರಿ ತುಂತುರು ಮಳೆಯಾಗಿದೆ. ಭಾನುವಾರ ಸಹ ಗಾಳಿ ಬೀಸುತ್ತಿದ್ದು, ಮೋಡ ಕವಿದ ವಾತಾವರಣ ಮುಂದುವರೆದಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ದಾವಣಗೆರೆ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಕೋಲಾರ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರವಾಗಿ ಮಳೆಯಾಗಲಿದೆ.
"ಮುಂದಿನ 3-4 ದಿನಗಳಲ್ಲಿ ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಮಳೆಯ ತೀವ್ರತೆ ಕಡಿಮೆಯಾಗಲಿದೆ. ಶೀಘ್ರವೇ ಮುಂಗಾರು ದುರ್ಬಲವಾಗುವ ನಿರೀಕ್ಷೆ ಇದ್ದು, ಮಳೆಯ ಅಬ್ಬರ ಕಡಿಮೆಯಾಗಲಿದೆ" ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ. ಎಸ್. ಪಾಟೀಲ್ ಹೇಳಿದ್ದಾರೆ.
ಮಹಾರಾಷ್ಟ್ರ-ಕರ್ನಾಟಕ ಗಡಿ ಪ್ರದೇಶಗಳಲ್ಲಿ ಮಳೆ ಕಡಿಮೆಯಾಗಿದೆ. 3.04 ಲಕ್ಷ ಕ್ಯುಸೆಕ್ ನೀರು ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಬಂದು ಸೇರುತ್ತಿದೆ. ಗಡಿ ಭಾಗದಲ್ಲಿ ಕೃಷ್ಣಾ ನದಿಯ ಪ್ರವಾಹ ಇಳಿಮುಖವಾಗುತ್ತಿದೆ. ಚಿಕ್ಕೋಡಿ, ರಾಯಬಾಗ, ಅಥಣಿ ತಾಲೂಕಿನಲ್ಲಿ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಹಾಗೆಯೇ ಇದೆ. ಮಲಪ್ರಭಾ, ಘಟಪ್ರಭಾ ಮತ್ತು ಮಾರ್ಕಂಡೇಯ ನದಿಗಳಲ್ಲಿ ಪ್ರವಾಹ ಇಳಿಮುಖವಾಗುತ್ತಿದೆ.
ಮಲೆನಾಡು ಭಾಗದಲ್ಲಿ ಹೊಸನಗರ, ಸೊರಬ, ಶಿಕಾರಿಪುರ, ಸಾಗರ ತಾಲೂಕಿನ ಕೆಲವು ಕಡೆ ಸಾಧಾರಣ ಮಳೆಯಾಗಿದೆ. 186 ಅಡಿ ಗರಿಷ್ಟ ಮಟ್ಟದ ಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ 181 ಅಡಿಗೆ ತಲುಪಿದೆ. ಕೊಡಗು ಜಿಲ್ಲೆಯ ಮಡಿಕೇರಿ, ನಾಪೊಕ್ಲು, ತಲಕಾವೇರಿ, ಭಾಗಮಂಡಲ, ಕಬ್ಬಕ್ಕೆ, ಕುಂಜಿಲದಲ್ಲಿ ಮಳೆ ಮುಂದುವರೆದಿದೆ.
ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಹೊರಬಿಡುವ ನೀರಿನ ಪ್ರಮಾಣ ಯಥಾಸ್ಥಿತಿ ಮುಂದುವರೆದಿದೆ. ಇದರಿಂದಾಗಿ ಯಾದಗಿರಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಆತಂಕ ನಿರ್ಮಾಣವಾಗಿದೆ. ಶನಿವಾರದ ವರದಿಯಂತೆ ಜಲಾಶಯಕ್ಕೆ 4,17,607 ಕ್ಯುಸೆಕ್ ಒಳಹರಿವು ಇದೆ. 4,21,633 ಕ್ಯುಸೆಕ್ ಹೊರಹರಿವು ದಾಖಲಾಗಿದೆ.
ಶಹಾಪುರ, ಸುರಪುರ, ವಡಗೇರಾ ತಾಲೂಕಿನ ಸಾವಿರಾರು ಎಕರೆ ಪ್ರದೇಶಗಳು ಜಲಾವೃತವಾಗಿವೆ. ಸುರಪುರ ತಾಲೂಕಿನಲ್ಲಿ ಪ್ರವಾಹದಲ್ಲಿ ಸಿಲುಕಿದ್ದ 15 ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದೆ. ತುಂಗಭದ್ರಾ ನದಿಯ ನೀರಿನಿಂದಾಗಿ ರಾಯಚೂರು ಜಿಲ್ಲೆಯಲ್ಲಿಯೂ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದಿಂದ 44,701 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ.
ಕಾವೇರಿ ಕೊಳ್ಳದ ಜಲಾಶಯಗಳು; ಕಾವೇರಿ ಕೊಳ್ಳದ ಜಲಾಶಯಗಳಾದ ಹಾರಂಗಿ (4061) ಕ್ಯುಸೆಕ್, ಹೇಮಾವತಿ 8052 ಕ್ಯುಸೆಕ್, ಕೆಆರ್ಎಸ್ 14,841 ಕ್ಯುಸೆಕ್, ಕಬಿನಿ 6569 ಕ್ಯುಸೆಕ್ ಒಳಹರಿವು ದಾಖಲಾಗಿದೆ.
ಲಿಂಗನಮಕ್ಕಿ ಜಲಾಶಯಕ್ಕೆ 17,910, ಸೂಪಾ ಜಲಾಶಯಕ್ಕೆ 12,577 ಕ್ಯುಸೆಕ್, ಭದ್ರಾ ಜಲಾಶಯಕ್ಕೆ 7,225 ಕ್ಯುಸೆಕ್, ತುಂಗಭದ್ರಾ ಜಲಾಶಯಕ್ಕೆ 42,475 ಕ್ಯುಸೆಕ್, ಆಲಮಟ್ಟಿ ಜಲಾಶಯಕ್ಕೆ 4,08,596 ಕ್ಯುಸೆಕ್ ಒಳಹರಿವು ಇದೆ.












Click it and Unblock the Notifications