ಜುಲೈ 15ರಿಂದ ಅಧಿವೇಶನ: ಬಿಜೆಪಿ-ಜೆಡಿಎಸ್ ಕೈಯಲ್ಲಿ ಹಲವು ಅಸ್ತ್ರಗಳು
ಬೆಂಗಳೂರು, ಜುಲೈ 14: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಜುಲೈ 15ರಿಂದ 26 ರವರೆಗೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ತಯಾರಾಗಿವೆ.
ಲೋಕಸಭೆ ಚುನಾವಣೆ 2024 ಮುಗಿದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಸದನದ ಹೊರಗೆ ಒಂದಾಗಿ ಹೋರಾಟ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಸದನದ ಒಳಗೂ ಸಹ ಸರ್ಕಾರದ ವಿರುದ್ಧ ಒಂದಾಗಲಿವೆ.

ಲೋಕಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ ಬಿಜೆಪಿಯ ಬಸವರಾಜ ಬೊಮ್ಮಾಯಿ (ಶಿಗ್ಗಾವಿ), ಜೆಡಿಎಸ್ನ ಎಚ್. ಡಿ. ಕುಮಾರಸ್ವಾಮಿ (ಚನ್ನಪಟ್ಟಣ), ಇ. ತುಕಾರಾಮ್ (ಸಂಡೂರು), ವಿಧಾನ ಪರಿಷತ್ ಸದಸ್ಯ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಶಾಸಕ ಮತ್ತು ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಆದ್ದರಿಂದ ಅವರಿಲ್ಲದೇ ಮೊದಲ ಅಧಿವೇಶನ ನಡೆಯುತ್ತಿದೆ.
ವಿಧಾನಸಭೆ ಪ್ರತಿಪಕ್ಷದ ಸಾಲಿನಿಂದ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಎಚ್. ಡಿ. ಕುಮಾರಸ್ವಾಮಿ ನಿರ್ಗಮಿಸಿದ್ದಾರೆ. ಆದ್ದರಿಂದ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ.
ಪ್ರತಿಪಕ್ಷದ ಕೈಯಲ್ಲಿ ಹಲವು ಅಸ್ತ್ರ: ಮುಂಗಾರು ಅಧಿವೇಶನ ಕಾವೇರುವ ಎಲ್ಲಾ ಸೂಚನೆ ಸಿಕ್ಕಿದೆ. ಕಾರಣ ಪ್ರತಿಪಕ್ಷಗಳ ಕೈಯಲ್ಲಿ ಸರ್ಕಾರದ ವಿರುದ್ಧ ಹೋರಾಟ ಮಾಡಲು ಅನೇಕ ಅಸ್ತ್ರಗಳಿವೆ. ಈಗಾಗಲೇ ಕಾಂಗ್ರೆಸ್ ಸರ್ಕಾರ ಮುಡಾ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ನಿಯಮಿತದ ಹಗರಣದಲ್ಲಿ ಮುಜುಗರ ಅನುಭವಿಸಿದೆ.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರತಿಪಕ್ಷಗಳು ಟಾರ್ಗೆಟ್ ಮಾಡುತ್ತಿವೆ. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ನಿಯಮಿತದ ಹಗರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಅವರು ಇಡಿಯಿಂದ ಬಂಧನಕ್ಕೆ ಒಳಗಾಗಿದ್ದು, ಕಾಂಗ್ರೆಸ್ಗೆ ಸಂಕಷ್ಟ ತಂದಿದೆ.
ರಾಜ್ಯದಲ್ಲಿ ಡೆಂಗ್ಯು ಅಬ್ಬರ, ಪೆಟ್ರೋಲ್ & ಡೀಸೆಲ್ ಬೆಲೆಗಳ ಏರಿಕೆ, ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಶಿಫಾರಸು ಜಾರಿಗೊಳಿಸಲು ಸರ್ಕಾರ ವಿಳಂಬ ಮಾಡುತ್ತಿರುವುದು ಮುಂತಾದ ವಿಚಾರಗಳು ಸದನದಲ್ಲಿ ಬಿಸಿ ಬಿಸಿ ಚರ್ಚೆಗ ಕಾರಣವಾಗುವ ನಿರೀಕ್ಷೆ ಇದೆ.
ಸೋಮವಾರ ಅಧಿವೇಶನ ಆರಂಭವಾಗಲಿದೆ. ಭಾನುವಾರ ಸಂಜೆ 4 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 'ಕಾವೇರಿ ನದಿ ನೀರಿನ' ಕುರಿತು ಸರ್ವಪಕ್ಷಗಳ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿದ್ದಾರೆ. ಸಭೆಗೆ ರಾಜ್ಯದ ಸರ್ವಪಕ್ಷಗಳ ಸದಸ್ಯರು, ಕೇಂದ್ರ ಸಚಿವರು, ಸಂಸತ್ ಸದಸ್ಯರು, ಕಾವೇರಿ ಜಲಾನಯನ ಪ್ರದೇಶದ ವಿಧಾನಸಭಾ ಮತ್ತು ವಿಧಾನ ಪರಿಷತ್ ಸದಸ್ಯರು ಹಾಜರಾಗಿ ಕಾವೇರಿ ನೀರು ಹಂಚಿಕೆಯಲ್ಲಿ ಉದ್ಭವವಾಗಿರುವ ಸಮಸ್ಯೆಯನ್ನು ಪರಿಹರಿಸಲು ಅಗತ್ಯ ಸಲಹೆ ನೀಡಬೇಕೆಂದು ಕೋರಿದ್ದಾರೆ.
ಲೋಕಸಭೆ ಚುನಾವಣೆ ಬಳಿಕ ಸದನದಲ್ಲಿ ಪ್ರತಿಪಕ್ಷ ಜೆಡಿಎಸ್ ಬಲ 19 ರಿಂದ 18ಕ್ಕೆ ಕುಸಿದಿದೆ. ಮಾಜಿ ಮುಖ್ಯಮಂತ್ರಿ, ಚನ್ನಪಟ್ಟಣದ ಶಾಸಕ ಎಚ್. ಡಿ. ಕುಮಾರಸ್ವಾಮಿ ಮಂಡ್ಯದಲ್ಲಿ ಗೆದ್ದು ಸಂಸದರಾಗಿದ್ದು, ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಎಚ್. ಡಿ. ಕುಮಾರಸ್ವಾಮಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿದ್ದರು. ಅವರು ಚನ್ನಪಟ್ಟಣದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಸದನದಲ್ಲಿ ಜೆಡಿಎಸ್ ಹೊಸ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಬೇಕಿದೆ. ಆದರೆ ನಾಯಕ ಯಾರು? ಎಂಬುದು ಇಲ್ಲಿಯ ತನಕ ಘೋಷಣೆಯಾಗಿಲ್ಲ.
ಅಪ್ಪ ಸಿಎಂ, ಮಗ ಸದಸ್ಯ: ವಿಧಾನ ಪರಿಷತ್ ಕಲಾಪ ಅಚ್ಚರಿಗೆ ಕಾರಣವಾಗಲಿದೆ. ಸಭಾ ನಾಯಕರಾಗಿ ಸಿದ್ದರಾಮಯ್ಯ ಕಲಾಪದಲ್ಲಿ ಭಾಗವಹಿಸಲಿದ್ದಾರೆ. ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದು, ಅವರು ಸದಸ್ಯರಾಗಿ ಕಲಾಪದಲ್ಲಿ ಪಾಲ್ಗೊಳ್ಳಲಿದ್ದಾರೆ.












Click it and Unblock the Notifications