Breaking News: ಮತಾಂತರ ನಿಷೇಧ ಕಾಯ್ದೆ ವಿಧಾನ ಪರಿಷತ್ತಿನಲ್ಲಿ ಮಂಡನೆ
ಬೆಂಗಳೂರು, ಸೆಪ್ಟೆಂಬರ್ 15: ಬಹುಚರ್ಚಿತ ಮತಾಂತರ ನಿಷೇಧ ಕಾಯ್ದೆಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನಪರಿಷತ್ತಿನಲ್ಲಿಂದು ಮಂಡನೆಯನ್ನು ಮಾಡಿದ್ದಾರೆ.
ಮೇ 12, 2022 ರಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಸಮ್ಮತಿಸಲು ಅನುಮೋದನೆ ನೀಡಿತ್ತು. ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಮೂಲಕ ಅಂಗೀಕಾರವಾಗಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ರಾಜ್ಯಪಾಲರ ಅನುಮೋದನೆಗೆ ಕಳುಹಿಸಲಾಗಿತ್ತು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತಾಂತರ ನಿಷೇಧ ಕಾಯ್ದೆಗೆ ಅನುಮೋದನೆಯನ್ನು ನೀಡಿದ್ದರು. ಆದರೂ ಸದನದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಮಂಡಿಸಿ ಅಂಗೀಕಾರ ಪಡೆಯಲು ಸರ್ಕಾರ ತೀರ್ಮಾನಿಸಿತ್ತು. ಅದರಂತೆ ವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷಗಳ ತೀವ್ರ ಪ್ರತಿಭಟನೆಯ ನಡುವೆಯು ಮತಾಂತರ ನಿಷೇಧ ಕಾಯ್ದೆಯನ್ನು ಮಂಡನೆ ಮಾಡಲಾಗಿದೆ.

ಬಿಜೆಪಿಗೆ ವಿಧಾನಪರಿಷತ್ತಿನಲ್ಲಿ ಬಹುಮತವನ್ನು ಹೊಂದಿರುವುದರಿಂದ ಮತಾಂತರ ನಿಷೇಧ ಕಾಯ್ದೆಯನ್ನು ಸದನದಲ್ಲಿ ಮಂಡಿಸಲು ಬಿಜೆಪಿ ಸರ್ಕಾರ ಸನ್ನದ್ದವಾಗಿತ್ತು. ಇದೀಗ ಮೇಲ್ಮನೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡಿಸಿದ್ದು ಚರ್ಚೆಯಾಗುತ್ತಿದೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಧಾರ್ಮಿಕ ಸ್ವಾತಂತ್ರ್ಯ ರಕ್ಷಣೆ ಹೆಸರಿನಲ್ಲಿ ವಿಧೇಯಕವನ್ನು ಮಂಡಿಸಲಾಗಿತ್ತು. ಪ್ರತಿಪಕ್ಷ ಕಾಂಗ್ರೆಸ್ ತೀವ್ರ ವಿರೋಧದ ನಡುವೆಯೂ ಕೆಳಮನೆಯಲ್ಲಿ ಬಿಲ್ ಪಾಸಾಗಿತ್ತು. ಮೇಲ್ಮನೆಯಲ್ಲೂ ಮಂಡನೆಗೆ ಪ್ರಯತ್ನ ನಡೆಸಲಾಯ್ತು, ಆದರೆ ಬಹುಮತದ ಕೊರೆತೆಯಿಂದಾಗಿ ಸರ್ಕಾರ ಮಂಡನೆಯನ್ನೇ ಮಾಡಲಿಲ್ಲ. ಆನಂತರ ಬೆಂಗಳೂರಿನಲ್ಲಿ ನಡೆದ ಜಂಟಿ ಅಧಿವೇಶನದಲ್ಲಿ ಮಂಡನೆ ಮಾಡಿದರು ಚರ್ಚೆಗೆ ಕೈಗೆತ್ತಿಕೊಳ್ಳಲಿಲ್ಲ.

ಲಖನ್ ಜಾರಕಿಹೊಳಿ ಸೇರಿ ನಾಲ್ವರು ಸದಸ್ಯರು ಗೈರಾಗಿದ್ದರಿಂದ ಮತ್ತೆ ನೆನೆಗುದಿಗೆ ಬಿದ್ದಿತ್ತು. ಕಾಯ್ದೆ ಜಾರಿಗೆ ಆರ್ಎಸ್ಎಸ್ನಿಂದ ನಿರಂತರ ಒತ್ತಡ ಬಂದಿದ್ದರಿಂದ ಸಂಪುಟ ಸಭೆಯಲ್ಲಿ ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಮತಾಂತರ ನಿಷೇದ ಕಾಯ್ದೆ ಜಾರಿ ಅನುಮೋದನೆಯನ್ನು ನೀಡಿತ್ತು. ಸರ್ಕಾರ ವಿಧಾನ ಪರಿಷತ್ತಿನಲ್ಲಿ ಅಂಗೀಕಾರವಾಗಬೇಕಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ತರತುರಿಯಲ್ಲಿ ಸುಗ್ರಿವಾಜ್ಞೆಯ ಮೂಲಕ ಅಂಗೀಕರಿಸಿ ರಾಜ್ಯಪಾಲರ ಅನುಮೋದನೆಗೆ ಕಳುಹಿಸಿಕೊಡಲಾಗಿತ್ತು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತಾಂತರ ನಿಷೇಧಕ್ಕೆ ಅನುಮೋದನೆಯನ್ನು ನೀಡಿದ್ದರು. ಆದರೂ ಈ ವಿಚಾರದಲ್ಲಿ ಬಿಜೆಪಿ ಸರ್ಕಾರಕ್ಕೆ ಮುಜುಗರ ಉಂಟಾಗಿತ್ತು. ಮೇಲ್ಮನೆಯಲ್ಲಿ ಬಹುಮತ ಪಡೆದ ಬಳಿಕ ಬಿಜೆಪಿ ಸರ್ಕಾರ ಸಚಿವ ಆರಗ ಜ್ಞಾನೇಂದ್ರ ವಿಧಾನಪರಿಷತ್ತಿನಲ್ಲಿ ಬಿಲ್ ಮಂಡಿಸಲಾಗಿದೆ. ಬಿಲ್ ಪಾಸ್ ಆಗುವುದು ಬಹುತೇಕ ಖಚಿತವಾಗಿದೆ.












Click it and Unblock the Notifications