ಜೂನ್ 21ರವರೆಗೂ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆಯ ಮುನ್ಸೂಚನೆ
ಬೆಂಗಳೂರು, ಜೂನ್ 18: ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದೆ. ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ.
ಕೆಲವೆಡೆ ಗುಡುಗು ಸಹಿತ ಧಾರಾಕಾರ ಮಳೆಗೆ ಮರಗಳು ಧರೆಗುರುಳಿದ್ದರೆ, ಇನ್ನೂ ಹಲವೆಡೆ ರಸ್ತೆಗಳು, ಸೇತುವೆಗಳು ಬಿರುಕು ಬಿಟ್ಟಿವೆ. ಮಹಾರಾಷ್ಟ್ರ ಗಡಿಗೆ ಹತ್ತಿರವಿರುವ ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ನದಿಗಳ ನೀರಿನ ಮಟ್ಟ ಹೆಚ್ಚಾಗಿದೆ. ಕಳೆದ ನಾಲ್ಕು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಹೀಗಾಗಿ ಚಿಕ್ಕೋಡಿಯಲ್ಲಿ ನಾಲ್ಕು ಸೇತುವೆಗಳು ಜಲಾವೃತವಾಗಿವೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆಯ ಸಾಧ್ಯತೆ
ಜೂನ್ 21ರವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ನೀರಿನ ಮಟ್ಟ ಹೆಚ್ಚಳ
ಮಳೆಯ ಪ್ರಮಾಣ ಹೆಚ್ಚಾಗಿದ್ದರಿಂದ ಕೃಷ್ಣಾ, ವೇದಗಂಗಾ, ದೂದ್ಗಂಗಾ ಮತ್ತು ಹಿರಣ್ಯಕೇಶಿ ನದಿಗಳು ನೀರಿನ ಮಟ್ಟ ಏಕಾಏಕಿ ಹೆಚ್ಚಾಗಿದೆ. ಕರದಂಗಾ-ಬೋಜ್ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಜತ್ರತ್-ಭಿವಶಿ ಸೇತುವೆ, ಸಂಕೇಶ್ವರ್-ನಾಗ್ನೂರ್ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ನಿಪ್ಪಾಣಿ ತಾಲೂಕಿನಲ್ಲಿ ವೇದಗಂಗಾ ನದಿಗೆ ಕಟ್ಟಲಾಗಿರುವ ಅಕೋಲ್-ಸಿದ್ನಲ್ ಸೇತುವೆಗಳು ಭಾರೀ ಮಳೆಗೆ ಸಂಪೂರ್ಣ ಮುಳುಗಿವೆ. ಹೀಗಾಗಿ ಸಂಪರ್ಕ ವ್ಯವಸ್ಥೆ ಕಡಿತಗೊಂಡಿದ್ದು, ಜನರು ಪರದಾಡುವಂತಾಗಿದೆ.
ಎಲ್ಲೆಲ್ಲಿ ಮಳೆಯಾಗಿದೆ
ಕೊಟ್ಟಿಗೆಹಾರ, ಆಗುಂಬೆ, ನಿಪ್ಪಾಣಿ, ಸಿದ್ದಾಪುರ, ಶೃಂಗೇರಿ, ಕಳಸ, ಭಾಗಮಂಡಲ, ಮಂಚಿಕೆರೆ, ಕೊಲ್ಲೂರು, ಬೆಳಗಾವಿ, ಮಂಕಿ, ಸಂಕೇಶ್ವರ, ತಾಳಗುಪ್ಪ, ಮುಂಡಗೋಡು, ಬೆಳ್ತಂಗಡಿ, ಜಯಪುರ, ಬೆಳಗಾವಿ, ಧರ್ಮಸ್ಥಳ, ಕದ್ರ, ವಿರಾಜಪೇಟೆ, ಮೂಡುಬಿದಿರೆ, ಅಥಣಿ, ಸಿದ್ದಾಪುರ, ಕಿರವತ್ತಿ, ಹಾವೇರಿ, ಹುಂಚದಕಟ್ಟೆ, ತ್ಯಾಗರ್ತಿ, ಬಾಳೆಹೊನ್ನೂರು, ಮಂಗಳೂರು, ಪಣಂಬೂರು, ಕುಷ್ಟಗಿ, ಕೆರೂರು, ನರಗುಂದ, ಸಂಡೂರಿನಲ್ಲಿ ಮಳೆಯಾಗಿದೆ.
ಬೆಂಗಳೂರು ವಾತಾವರಣ ಹೇಗಿದೆ?
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
Recommended Video
ಶಿವಮೊಗ್ಗದಲ್ಲಿ ಮಳೆ
ಶಿವಮೊಗ್ಗದ ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕಿನಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಹೀಗಾಗಿ ಲಿಂಗನಮಕ್ಕಿ ಮತ್ತು ಭದ್ರಾ ಜಲಾಶಯಗಳ ನೀರಿನ ಮಟ್ಟವೂ ಹೆಚ್ಚಾಗಿದೆ. ಗುರುವಾರ ಬೆಳಗ್ಗೆಯಿಂದ ತುಂಗಾ ಜಲಾಶಯಕ್ಕೆ ಹರಿವಿನ ಪ್ರಮಾಣ ಹೆಚ್ಚಾಗಿ. ನಿನ್ನೆ ಬೆಳಗ್ಗೆ ಒಳಹರಿವಿನ ಮಟ್ಟ 20 ಸಾವಿರ ಕ್ಯೂಸೆಕ್ಸ್ಗೆ ಹೆಚ್ಚಾಗಿದ್ದರೆ, 11 ಗಂಟೆಯೊಳಗೆ 25 ಸಾವಿರ ದಾಟಿತ್ತು. ಬಳಿಕ ಮಧ್ಯಾಹ್ನ 1 ಗಂಟೆಯೊಳಗೆ 33,700 ಕ್ಯೂಸೆಕ್ಸ್ ಆಗಿತ್ತು.
ಉಡುಪಿಯಲ್ಲಿ ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾರವರಣವಿತ್ತು. ಕಳೆದ ಕೆಲ ಗಂಟೆಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಕುಂದಾಪುರದಲ್ಲಿ ಇಂದು ಸಂಜೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮುಂದಿನ ಮೂರು ದಿನ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಪ್ರದೇಶಗಳಲ್ಲಿ ಗಾಳಿಯು ಗಂಟೆಗೆ 40-50 ಕಿ.ಮೀ.ವೇಗದಲ್ಲಿ ಬೀಸಲಿದೆ.