Urdu Imposition: ಅಂಗನವಾಡಿ ಶಿಕ್ಷಕರಿಗೆ ಉರ್ದು ಕಡ್ಡಾಯ: ಸಿದ್ದರಾಮಯ್ಯಗೆ ತೇಜಸ್ವಿ ಸೂರ್ಯ ಪತ್ರ
ಬೆಂಗಳೂರು, ಸೆಪ್ಟಂಬರ್ 24: ಕರ್ನಾಟಕ ರಾಜ್ಯದ ಅಂಗನವಾಡಿಗಳಲ್ಲಿ ಶಿಕ್ಷಕರ ಹುದ್ದೆಗಳಿಗೆ ನೇಮಕಗೊಳ್ಳುವವರು ಕಡ್ಡಾಯವಾಗಿ ಉರ್ದು ಭಾಷೆ ಕಲಿಯಬೇಕು ಎಂಬ ಆದೇಶಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ರಾಜ್ಯ ಸರ್ಕಾರವೇ ಹೊರಡಿಸಿದೆ ಎನ್ನಲಾದ ಆದೇಶ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದರ ಬೆನ್ನಲ್ಲೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.
ಉರ್ದು ಭಾಷೆ ಹೇರಿಕೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಸಾಮಾಜಿಕ ಜಾಲತಾಣ (ಎಕ್ಸ್)ದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ರಾಜ್ಯದ ಅಂಗನವಾಡಿಗಳಲ್ಲಿ ಮತ್ತು ಕನ್ನಡಿಗರ ಮೇಲೆ ಉರ್ದು ಭಾಷೆ ಹೇರಿಕೆ, ಉರ್ದು ಕಡ್ಡಾಯ ಆದೇಶವನ್ನು ಕೂಡಲೇ ಹಿಂಪಡೆಯಬೇಕು. ಈ ನೆಲದ ಕನ್ನಡ ಭಾಷೆ, ಸಂಸ್ಕೃತಿ ಮುಂದುವರೆಸಲು ಆದ್ಯತೆ ನೀಡಬೇಕು ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ತುಷ್ಟೀಕರಣವೇ 'ಕೈ' ಆಡಳಿತದ ಪರಮ ಧ್ಯೇಯ
ಕನ್ನಡಿಗರ ಮೇಲೆ ಉದ್ದೇಶಪೂರ್ವಕ ಉರ್ದು ಹೇರಿಕೆಯ ರಾಜ್ಯ ಸರ್ಕಾರದ ಕ್ರಮವು, ಟಿಪ್ಪು ಮತ್ತು ಹೈದರಾಲಿ ಮಾದರಿಯ ಕನ್ನಡ ದಮನನೀತಿಯ ಮುಂದುವರಿದ ಭಾಗವಾಗಿದೆ. ಟಿಪ್ಪುವನ್ನು ಪರಮ ಆದರ್ಶವನ್ನಾಗಿ ಅಂಗೀಕರಿಸಿರುವ, ಕಳೆದ 1 ವರ್ಷದಿಂದ ಒಂದು ಸಮುದಾಯದ ಅತಿಯಾದ ತುಷ್ಟೀಕರಣ ನೀತಿಯನ್ನು ಅನುಸರಿಸುತ್ತಿದೆ. ತುಷ್ಟೀಕರಣವನ್ನೇ ಆಡಳಿತದ ಪರಮ ಧ್ಯೇಯವನ್ನಾಗಿ ಮಾಡಿಕೊಂಡಿದೆ ಎಂದು ದೂರಿದರು.

ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರಗಳು ಕನ್ನಡದ ಅಸ್ಮಿತೆಗೆ, ಕನ್ನಡಿಗರಿಗೆ ಮಾಡುತ್ತಿರುವ ಅತೀ ದೊಡ್ಡ ಅಪಮಾನವಾಗಿದೆ. ಅಂಗನವಾಡಿ ಹುದ್ದೆಗಳಿಗೆ ಕನ್ನಡದ ಬದಲು, ಉರ್ದು ಹೇರಿಕೆಯನ್ನು ಕಡ್ಡಾಯಗೊಳಿಸುವ ಮೂಲಕ ಕನ್ನಡಕ್ಕೆ ಅಪಮಾನ ಮಾಡುವ ಕಾರ್ಯಕ್ಕೆ 'ಕೈ' ಹಾಕಿರುವುದು ಅಸಹ್ಯದ ಪರಮಾವಧಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡಿಗರ ಅಸ್ಮಿತೆಗೆ ಉದ್ದೇಶಪೂರ್ವಕ ಅಪಮಾನ
ರಾಜಕೀಯ, ತುಷ್ಟೀಕರಣದ ಕಾರಣಗಳಿಗಾಗಿ ಕನ್ನಡದ ಸಾರ್ವಭೌಮತ್ವಕ್ಕೆ, ಅಸ್ಮಿತೆಗೆ ಉದ್ದೇಶಪೂರ್ವಕ ಅಪಮಾನವನ್ನು ಕನ್ನಡಿಗರು ಸಹಿಸಲು ಸಾಧ್ಯವಿಲ್ಲ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಇಂತಹ ಪ್ರಮಾದಗಳಿಗೆ ರಾಜ್ಯ ಸರ್ಕಾರ ಅವಕಾಶ ನೀಡದೇ, ಸಂಬಂಧಪಟ್ಟವರನ್ನು ಕೂಡಲೇ ಅಮಾನತ್ತುಗೊಳಿಸಿ, ಕನ್ನಡದ ಅಸ್ಮಿತೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಂಯ್ಯ ಅವರನ್ನು ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.












Click it and Unblock the Notifications