Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ ಅರೆಸ್ಟ್ ಆಗ್ತಾರಾ?
ಬೆಂಗಳೂರು, ಸೆಪ್ಟೆಂಬರ್ 25: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮುಡಾ ಹಗರಣ ಮತ್ತಷ್ಟು ಸಂಕಷ್ಟಗಳ ಮೇಲೆ ಸಂಕಷ್ಟ ಎದುರಾಗುತ್ತಿದೆ.
ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದ ಬೆನ್ನಲ್ಲೇ ಇದೀಗ ಜನಪ್ರತಿನಿಧಿಗಳ ಕೋರ್ಟ್ನಲ್ಲೂ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಿನ್ನೆಡೆಯಾಗಿದೆ. ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ಹೊರಡಿಸಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅರೆಸ್ಟ್ ಆಗ್ತಾರಾ ಎಂಬ ಅನುಮಾನ ಹುಟ್ಟಿಕೊಂಡಿದೆ.

ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಸುಮಾರು 56 ಕೋಟಿ ರು. ಮೌಲ್ಯದ 14 ಬದಲಿ ನಿವೇಶನಗಳನ್ನು ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ರಾಜ್ಯಪಾಲರು ನೀಡಿದ್ದ ಅನುಮೋದನೆಯನ್ನು ಹೈ ಕೋರ್ಟ್ ಎತ್ತಿಹಿಡಿದಿತ್ತು. ಇದರ ಬೆನ್ನಲ್ಲೇ ಇತ್ತ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವೂ ಸಹ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ.
ಡಿಸೆಂಬರ್ 24ರೊಳಗೆ ಅಂದರೆ ಮೂರು ತಿಂಗಳಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮತ್ತಷ್ಟು ಸಂಕಷ್ಟ ಹೆಚ್ಚಾಗಿದ್ದು, ಬಂಧನವಾಗುವ ಸಾಧ್ಯತೆಗಳು ಸಹ ಇವೆ. 40 ವರ್ಷಗಳ ಸುದೀರ್ಘ ರಾಜಕೀಯ ಜೀವನದಲ್ಲಿ ಸಾಕಷ್ಟು ಅಡೆತಡೆಗಳನ್ನ ಎದುರಿಸಿದ್ದ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೂ ಒಂದಲ್ಲ ಒಂದು ಸಂಕಷ್ಟ ಹಾಗೂ ಸವಾಲುಗಳು ಎದುರಾಗಿದೆ.
CRPC ಸೆಕ್ಷನ್ 156(3) ಅಡಿ ಕೇಸ್ ರಿಜಿಸ್ಟರ್ ಮಾಡಲು ಆದೇಶ ನೀಡಲಾಗಿದ್ದು, ತನಿಖಾ ವರದಿ ನೀಡಲು 3 ತಿಂಗಳ ಗಡುವು ನೀಡಲಾಗಿದೆ. ಡಿಸೆಂಬರ್ 24 ರಂದು ತನಿಖಾ ವರದಿ ನೀಡಲು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೂಚನೆ ನೀಡಿದೆ. ಕೋರ್ಟ್ ಆದೇಶದ ಕಾಪಿ ಲೋಕಾಯುಕ್ತ ಡಿಜಿಗೆ ತಲುಪಲಿದೆ. ಬಳಿಕ ಲೋಕಾಯುಕ್ತ ಡಿಜಿ ಮೈಸೂರಿನ ಎಸ್ಪಿಗೆ ನಿರ್ದೇಶನ ನೀಡಲಿದ್ದಾರೆ. ತದ ನಂತರ ಎಸ್ಪಿ ಲೋಕಾಯುಕ್ತ ಎಸ್ಪಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಲಿದ್ದಾರೆ.
ಒಂದು ವೇಳೆ ಸಿದ್ದರಾಮಯ್ಯ ಅವರ ವಿರುದ್ಧ ಎಫ್ಐಆರ್ ದಾಖಲಾದ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕಾದ ಅನಿವಾರ್ಯತೆ ಎದುರಾಗಲಿದೆ. ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಎಫ್ಐಆರ್ ದಾಖಲು ಮಾಡಿ ನಂತರ ತನಿಖೆ ಶುರುವಾಗಲಿದ್ದು, ಸಿದ್ದರಾಮಯ್ಯ ಬಂಧನ ಸಾಧ್ಯತೆ ಇದೆ. 156(3) ಅಡಿ ತನಿಖೆಗೆ ಆದೇಶವಾದರೆ ಎಫ್ಐಆರ್ ದಾಖಲಿಸಬೇಕು. ಹೀಗಾಗಿ ಶೀಘ್ರದಲ್ಲೇ ಮುಖ್ಯಮಂತ್ರಿ ವಿರುದ್ಧ ಎಫ್ಐಆರ್ ದಾಖಲಾಗಲಿದೆ.
ಅವಶ್ಯಕತೆಗೆ ಅನುಸಾರವಾಗಿ ತನಿಖಾಧಿಕಾರಿ ಅಧಿಕಾರ ಬಳಸಬಹುದು. ಹೀಗಾಗಿ ಬಂಧನ ಸೇರಿದಂತೆ ಸಂಪೂರ್ಣ ಅಧಿಕಾರ ತನಿಖಾಧಿಕಾರಿಗೆ ಇರಲಿದೆ. ಆದ್ದರಿಂದ ಅವಶ್ಯಕತೆ ಇದ್ದರೆ ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯನವರನ್ನು ಬಂಧಿಸಬಹುದು. ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಯಾವ ಸಂದರ್ಭದಲ್ಲಾದರೂ ಬಂಧನ ಮಾಡಬಹುದಾಗಿದೆ.
ಇನ್ನು ಕೋರ್ಟ್ ಲೋಕಾಯುಕ್ತ ತನಿಖೆಗೆ ಆದೇಶದ ಬಳಿಕ ಮಾಧ್ಯಮಗಳ ಜೊತೆಗೆ ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲ ವಸಂತ ಕುಮಾರ್ ಮಾತನಾಡಿ, . ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದಾಗ ತನಿಖೆ ಆಗಬೇಕು. FIR ದಾಖಲಿಸಿ ತನಿಖೆ ಆಗಬೇಕು, ಅರೆಸ್ಟ್ ಕೂಡ ಮಾಡಬಹುದು ಎಂದಿದ್ದಾರೆ. ಮೂರು ತಿಂಗಳೊಳಗೆ ತನಿಖಾ ವರದಿ ಸಲ್ಲಿಸಲು ಲೋಕಾಯುಕ್ತಗೆ ಸೂಚನೆ ನೀಡಿದೆ. ಪ್ರಾಮಾಣಿಕವಾಗಿ ತನಿಖೆ ಆಗಬೇಕು ಅಂತಾ ಮನವಿ ಮಾಡುತ್ತೇವೆ ಎಂದರು.












Click it and Unblock the Notifications