Siddaramaiah: ಸಿಎಂ ಕೊರಳಿಗೆ ಲೋಕಾ ವ್ಯೂಹ : ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ತಾರಾ ಡಿ ಕೆ ಶಿವಕುಮಾರ್ ?
ಬೆಂಗಳೂರು, ಸೆಪ್ಟೆಂಬರ್ 26: ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದ ಬೆನ್ನಲ್ಲೇ ಇದೀಗ ಜನಪ್ರತಿನಿಧಿಗಳ ಕೋರ್ಟ್ನಲ್ಲೂ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಿನ್ನೆಡೆಯಾಗಿದೆ. ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ಹೊರಡಿಸಿದೆ. ಈ ಎಲ್ಲಾ ಬೆಳವಣೆಗೆಗಳ ನಡುವೆ ವಿಪಕ್ಷಗಳು ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆಯನ್ನ ನಡೆಸುತ್ತಿದ್ದಾರೆ.
ಸಿದ್ದರಾಮಯ್ಯ ಅವರ ವಿರುದ್ಧದ ವಿಚಾರಣೆ ಸಂಬಂಧ ಕಾಂಗ್ರೆಸ್ ಪಕ್ಷದ ನಿಲುವಿನ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ನಮ್ಮ ಪಕ್ಷ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲಲಿದೆ. ಅವರು ಅತ್ಯುತ್ತಮ ಆಡಳಿತ ನೀಡುತ್ತಿದ್ದಾರೆ. ಬಿಜೆಪಿಯಿಂದ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ. ಈ ಷಡ್ಯಂತ್ರ ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲ, ದೇಶದಲ್ಲಿ ಎಲ್ಲೆಲ್ಲಿ ವಿರೋಧ ಪಕ್ಷಗಳ ಸರ್ಕಾರ ಇದೆಯೋ ಅಲ್ಲೆಲ್ಲಾ ಷಡ್ಯಂತ್ರ ರೂಪಿಸಲಾಗುತ್ತಿದೆ. ನನ್ನ ಮೇಲೂ ಷಡ್ಯಂತ್ರ ರೂಪಿಸಿದ್ದರು. ನಾನು ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಟ ಮಾಡಿದ್ದೆ ಎಂದು ತಿಳಿಸಿದರು.

ವಿರೋಧ ಪಕ್ಷಗಳು ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನಗೆ ಉತ್ತರಿಸಿದ ಅವರು, ಬಿಜೆಪಿ ಕಾಲದಲ್ಲಿನ ಅಕ್ರಮಗಳ ಬಗ್ಗೆ ಮಾಜಿ ಸಚಿವರು ಹಾಗೂ ಕೇಂದ್ರ ಮಂತ್ರಿಗಳ ವಿರುದ್ಧ ತನಿಖೆಗೆ ಅನುಮತಿ ನೀಡುವಂತೆ ಮನವಿ ಸಲ್ಲಿಸಲಾಗಿದೆ. ಅವರು ಮೊದಲು ಆ ನಾಯಕರ ವಿಚಾರದಲ್ಲಿ ತೀರ್ಮಾನ ಮಾಡಲಿ. ಆನಂತರ ಈ ವಿಚಾರವಾಗಿ ಆಗ್ರಹ ಮಾಡಲಿ ಎಂದರು.
ಹೈಕಮಾಂಡ್ ಜತೆ ನಿರಂತರ ಸಂಪರ್ಕದಲ್ಲಿದ್ದೀರಾ ಎಂಬ ಪ್ರಶ್ನೆಗೆ, ಪ್ರತಿನಿತ್ಯ ನಾನು ಹೈಕಮಾಂಡ್ ನಾಯಕರ ಜತೆ ಸಂಪರ್ಕದಲ್ಲಿರುತ್ತೇನೆ. ನನ್ನ ಪಕ್ಷದ ಗ್ರಾಮ ಮಟ್ಟದ ನಾಯಕರಿಂದ ದೆಹಲಿ ಮಟ್ಟದ ನಾಯಕರ ವರೆಗೂ ಎಲ್ಲರ ಸಂಪರ್ಕದಲ್ಲಿರುತ್ತೇನೆ ಎಂದುಡಿ ಕೆ ಶಿವಕುಮಾರ್ ತಿಳಿಸಿದರು.
ಮೂಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ವಿಚಾರಣೆಯನ್ನು ಲೋಕಾಯುಕ್ತಕ್ಕೆ ನೀಡಿರುವ ಬಗ್ಗೆ ಮಾತನಾಡಿ, ನ್ಯಾಯಾಲಯ ತನಿಖೆಗೆ ಆದೇಶ ನೀಡಿದ್ದರೆ, ತನಿಖೆ ನಡೆಯುತ್ತದೆ. ಮೂಡಾ ಅಕ್ರಮದಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಿಲ್ಲ ಎಂದು ನಮಗೆ ಭರವಸೆ ಇದೆ. ಈ ಪ್ರಕರಣದಲ್ಲಿ ತಪ್ಪು ನಡೆದಿದ್ದರೆ ಅಧಿಕಾರಿಗಳಿಂದ ಆಗಿರಬಹುದು. ಈ ಬಗ್ಗೆ ನನಗೆ ಗೊತ್ತಿಲ್ಲ. ಇದರಲ್ಲಿ ಮುಖ್ಯಮಂತ್ರಿಗಳ ಪಾತ್ರ ಇಲ್ಲ. ಅವರು ದೋಷಮುಕ್ತರಾಗಿ ಬರುತ್ತಾರೆ ಎಂದು ಸ್ಪಷ್ಟವಾಗಿ ಹೇಳಬಲ್ಲೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಅವರ ರಾಜಕೀಯ ಜೀವನದಲ್ಲಿ ಇದು ಬ್ಲಾಕ್ ಮಾರ್ಕ್ ಅಲ್ಲವೇ ಎಂಬ ಪ್ರಶ್ನಗೆ ಉತ್ತರಸಿ, ಮಾರ್ಕ್ ಆಗಿಲ್ಲದಿರುವಾಗ ಬ್ಲಾಕ್ ಎಲ್ಲಿಂದ ಆಗುತ್ತದೆ. ತನಿಖೆ ನಡೆಯಬೇಕು. ಕೆಲವರು ತಮ್ಮ ತಮ್ಮ ಅಭಿಪ್ರಾಯ ಹೇಳಿದ್ದಾರೆಯೇ ಹೊರತು. ಮುಖ್ಯಮಂತ್ರಿಗಳು ತಪ್ಪು ಮಾಡಿದ್ದಾರೆ ಎಂದು ಸಾಬೀತುಪಡಿಸಿಲ್ಲ" ಎಂದು ತಿಳಿಸಿದರು.
ಸಿದ್ದರಾಮಯ್ಯ ಅವರ ಪ್ರಕರಣವನ್ನು ಹರ್ಯಾಣ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಸ್ತಾಪಿಸಿದ್ದಾರೆ ಎಂದು ಕೇಳಿದಾಗ, ಈ ವಿಚಾರದಲ್ಲಿ ರಾಜಕಾರಣ ಮಾಡುವವರು ರಾಜಕಾರಣ ಮಾಡುತ್ತಾರೆ. ಕಾನೂನಿಗೂ ರಾಜಕಾರಣಕ್ಕೂ ವ್ಯತ್ಯಾಸವಿದೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಅವರ ರಾಜೀನಾಮೆ ಆಗ್ರಹಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸುವ ಬಗ್ಗೆ ಕೇಳಿದಾಗ, "ಯಾವ ಪ್ರಕರಣದಲ್ಲಿ ಯಾವ ಯಾವ ಕೇಂದ್ರ ಸಚಿವರ ವಿರುದ್ಧ ತನಿಖೆ ನಡೆಯುತ್ತಿದೆ. ಅವರು ಅಧಿಕಾರದಲ್ಲಿ ಮುಂದುವರಿದಿಲ್ಲವೇ? ಮೊದಲು ಅವರ ರಾಜೀನಾಮೆ ತೆಗೆದುಕೊಳ್ಳಿ. ನಂತರ ನಮ್ಮ ಮುಖ್ಯಮಂತ್ರಿಗಳ ರಾಜೀನಾಮೆ ಬಗ್ಗೆ ಚರ್ಚೆ ಮಾಡೋಣ" ಎಂದು ತಿಳಿಸಿದರು.












Click it and Unblock the Notifications