MUDA Scam Case: ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ
ಬೆಂಗಳೂರು, ಸೆಪ್ಟೆಂಬರ್, 25: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಹೈಕೋರ್ಟ್ ಒಪ್ಪಿಗೆ ನೀಡಿದೆ. ಇದೀಗ ಇಂದು (ಸೆಪ್ಟೆಂಬರ್ 25) ಈ ಬಗ್ಗೆ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್ ಸಿಆರ್ಪಿಸಿ ಕಾಯ್ದೆ ಉಲ್ಲೇಖಿಸಿ ಮೈಸೂರು ಲೋಕಾಯುಕ್ತ ಪೊಲೀಸರ ತನಿಖೆಗೆ ಆದೇಶ ಹೊರಡಿಸಿದೆ.
3 ತಿಂಗಳಿನಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. ಡಿಸೆಂಬರ್ 24ರೊಳಗೆ ವರದಿ ಸಲ್ಲಿಕೆ ಮಾಡಲು ಸೂಚನೆ ನೀಡಿದೆ.

ಈ ಕುರಿತು ಮೈಸೂರು ಲೋಕಾಯುಕ್ತ ಎಸ್ಪಿಗೆ ತನಿಖೆ ನಡೆಸುವಂತೆ ಆದೇಶ ನೀಡಿದೆ. CrPC 153 (3) ಕಾಯ್ದೆಯಡಿ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಜೊತೆಗೆ ಸಿಎಂ ಸಿದ್ದರಾಮಯ್ಯ ತನಿಖೆಗೆ ಸಹಕರಿಸಬೇಕೆಂದು ಆದೇಶಹೊರಡಿಸಿದೆ.
ಮೈಸೂರು ಲೋಕಾಯುಕ್ತ ಪೊಲೀಸರಿಗೆ ಈ ಜವಾಬ್ದಾರಿಯನ್ನು ನೀಡಲಾಗಿದೆ. ಎಫ್ಐಆರ್ ಕೂಡ ದಾಖಲಿಸಬಹುದು. ಜೊತೆಗೆ ವಶಕ್ಕೆ ಕೂಡ ಪಡೆಯಬಹುದು. ವಿಶೇಷ ಕೋರ್ಟ್ನ ನ್ಯಾ.ಗಜಾನನ ಭಟ್ ಈ ಆದೇಶವನ್ನು ನೀಡಿದ್ದಾರೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರದ ಬಗ್ಗೆ ತನಿಖೆಯ ಅಗತ್ಯ ಇದೆ ಎಂದು ಮೈಸೂರಿನ ಸ್ನೇಹಮಯಿ ಕೃಷ್ಣ ಮತ್ತು ಟಿಜೆ ಅಬ್ರಾಹಂ ಸಲ್ಲಿಸಿದ್ದ ಖಾಸಗಿ ದೂರುಗಳ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಡೆಸಿದೆ.
ಇನ್ನು ಸಿಎಂ ಸಿದ್ದರಾಮಯ್ಯ ಅವರು ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಈ ಹಿನ್ನೆಲೆ ಹೈಕೋರ್ಟ್ ತನ್ನ ವಿಚಾರಣೆ ಮುಕ್ತಾಯ ಆಗುವವರೆಗೂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು. ಮಂಗಳವಾರ (ಸೆಪ್ಟೆಂಬರ್ 24) ಹೈಕೋರ್ಟ್ ತೀರ್ಪು ಪ್ರಕಟಗೊಂಡ ಹಿನ್ನೆಲೆ ಬುಧವಾರ (ಸೆಪ್ಟೆಂಬರ್ 25) ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಿಆರ್ಪಿಸಿ ಕಾಯ್ದೆ ಉಲ್ಲೇಖ ಮಾಡಿದೆ ತೀರ್ಪು ಕೊಟ್ಟಿದೆ.
ಕೋರ್ಟ್ ತನಿಖೆಗೆ ಆದೇಶ ನೀಡಿದ ಬಳಿಕ ಮೈಸೂರು ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಎಫ್ಐಆರ್ ದಾಖಲು ಮಾಡುವ ಸಾಧ್ಯತೆಯಿದೆ. 156(3)ರ ಅಡಿ ತನಿಖೆಗೆ ಆದೇಶ ನೀಡಿದ ಹಿನ್ನೆಲೆ ಎಫ್ಐಆರ್ ದಾಖಲಾಗಬೇಕೆಂದ ನಿಯಮ ಇದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, "ಹೈಕೋರ್ಟ್ ಆದೇಶದ ಮೇಲೆ ಜನಪ್ರತಿನಿಧಿಗಳ ನ್ಯಾಯಾಲಯದಿಂದ ತೀರ್ಪು ಬಂದಿದೆ. ತನಿಖೆ ಮಾಡಲು ಮೈಸೂರು ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ಸೂಚಿಸಿದೆ. ನಾನು ತನಿಖೆ ಎದುರಿಸಲು ಸಿದ್ದನಿದ್ದೇನೆ, ನನಗೆ ಯಾವುದೇ ಭಯವಿಲ್ಲ," ಎಂದು ಹೇಳಿದರು.












Click it and Unblock the Notifications