Muda Scam: ಲೋಕಾಯುಕ್ತ ಅಧಿಕಾರಿಗಳಿಂದ ವಿಚಾರಣೆ ಅಂತ್ಯ: ಸಿದ್ದರಾಮಯ್ಯ ಹೇಳಿದ್ದೇನು..?
ಬೆಂಗಳೂರು, ನವೆಂಬರ್ 06: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿನ ನಿವೇಶನ ಹಂಚಿಕೆ ಹಗರಣ ಸಂಬಂಧ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಮನ್ಸ್ ನೀಡಿದ್ದು, ಸಿದ್ದರಾಮಯ್ಯ ಇಂದು ವಿಚಾರಣೆಗೆ ಹಾಜರಾಗಿದ್ದಾರೆ. ಮೈಸೂರಿಗೆ ಪ್ರಕರಣದ ವಿಚಾರಣೆಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸತತ ಎರಡು ಗಂಟೆಗಳವರೆಗೆ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಲೋಕಾಯುಕ್ತ ವಿಚಾರಣೆ ಅಂತ್ಯಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣ ಸಂಬಂಧ ಇಂದು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದೆ, ಅವರ ಪ್ರಶ್ನೆಗಳಿಗೆ ಸೂಕ್ತ ಉತ್ತರವನ್ನು ನೀಡಿದ್ದೇನೆ. ನನ್ನ ಮೇಲೆ ದುರುದ್ದೇಶದಿಂದ ಕೂಡಿದ ಸುಳ್ಳು ಪ್ರಕರಣ ಇದಾಗಿದ್ದು, ವಿಚಾರಣೆಯ ಸಂದರ್ಭದಲ್ಲಿ ವಾಸ್ತವಾಂಶ ತಿಳಿಸಿದ್ದೇನೆ ಎಂದರು.

ಸ್ನೇಹಮಯಿ ಕೃಷ್ಣ ಅವರು ಕೋರಿದಂತೆ, ರಾಜ್ಯಪಾಲರ ಆದೇಶದಂತೆ ಲೋಕಾಯುಕ್ತ ವಿಚಾರಣೆಯನ್ನು ನಡೆಸಲಾಗಿದೆ. ಈಗ ಬಿಜೆಪಿ ನಾಯಕರು ಲೋಕಾಯುಕ್ತ ವಿಚಾರಣೆ ಬೇಡ, ಸಿಬಿಐಗೆ ವಹಿಸಬೇಕು ಎಂದು ತಗಾದೆ ತೆಗೆದರೆ ಅದು ವಿಚಾರಣೆಯ ವಿರುದ್ಧವಾಗಿದ್ದಾರೆ ಎಂಬ ಅರ್ಥವಲ್ಲವೇ? ಇದರಿಂದಲೇ ಅವರ ಎಲ್ಲಾ ಆರೋಪ ಸುಳ್ಳು ಎಂದು ಸ್ಪಷ್ಟವಾಗುತ್ತದೆ.
ಕೇಂದ್ರ ಸರ್ಕಾರದ ಅಧೀನದಲ್ಲಿ ಸಿಬಿಐ ಇದೆ. ಬಿಜೆಪಿಯವರು ಇದುವರೆಗೆ ಯಾವುದಾದರೂ ಹಗರಣವನ್ನು ಸಿಬಿಐ ಗೆ ವಹಿಸಿದ್ದಾರೆಯೇ? ಲೋಕಾಯುಕ್ತ ಒಂದು ಸ್ವತಂತ್ರ ತನಿಖಾ ಸಂಸ್ಥೆ. ಲೋಕಾಯುಕ್ತದಲ್ಲಿ ನಂಬಿಕೆಯಿಲ್ಲದ ಬಿಜೆಪಿಯವರಿಗೆ ಕಾನೂನಿನ ಬಗ್ಗೆಯೂ ಗೌರವವಿಲ್ಲ. ರಾಜ್ಯಪಾಲರು ಕೂಡ ಲೋಕಾಯುಕ್ತದಲ್ಲಿಯೇ ತನಿಖೆಯಾಗಬೇಕೆಂದು ಸೂಚಿಸಿದ್ದು, ಅದರಂತೆ ವಿಚಾರಣೆ ನಡೆಯುತ್ತಿದೆ.
ಮುಡಾದಿಂದ 14 ನಿವೇಶನಗಳು ಕಾನೂನೂಬದ್ಧವಾಗಿಯೇ ಹಂಚಿಕೆ ಆಗಿದೆ. ಬಿಜೆಪಿ - ಜೆಡಿಎಸ್ ನವರು ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಈ ಸಂಬಂಧ ಲೋಕಾಯುಕ್ತ ವಿಚಾರಣೆಯಲ್ಲಿ ಇಂದು ಉತ್ತರವನ್ನು ನೀಡಿದ್ದೇನೆ. ತನಿಖೆಯನ್ನು ಕಾನೂನುರೀತ್ಯಾ ಮುಂದುವರೆಸಲಿದ್ದಾರೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ದಾಖಲೆ ನನ್ನ ಬಳಿಯಿಲ್ಲ ಹಾಗೂ ನನ್ನಿಂದ ಯಾವುದೇ ದಾಖಲೆ ಕೇಳಲಾಗಿಲ್ಲ. ಇಡೀ ಪ್ರಕರಣವೇ ಒಂದು ಷಡ್ಯಂತ್ರವಾಗಿರುವುದರಿಂದ ನ್ಯಾಯಾಲಯದಲ್ಲಿ ತೀರ್ಮಾನವಾಗುವವರೆಗೆ ನನ್ನ ರಾಜಕೀಯ ಜೀವನಕ್ಕೆ ಯಾವುದೇ ಕಪ್ಪು ಮಸಿ ಇಲ್ಲ. ನನ್ನ ಮೇಲೆ ಮಾಡಲಾಗಿರುವ ಸುಳ್ಳು ಆರೋಪಗಳಿಗೆ ನ್ಯಾಯಾಲಯದಲ್ಲಿ ತಕ್ಕ ಉತ್ತರವನ್ನು ನೀಡಲಿದ್ದೇನೆ ಎಂದು ಹೇಳಿದ್ದಾರೆ.












Click it and Unblock the Notifications