Muda Scam: ಸಿದ್ದರಾಮಯ್ಯ ರಾಹುಲ್ ಗಾಂಧಿ ಭೇಟಿ- ಮುಂದೇನು?
ಬೆಂಗಳೂರು ಆಗಸ್ಟ್ 24: ಮುಡಾ ಹಗರಣ ರಾಜ್ಯ ರಾಜಕೀಯದಲ್ಲಿ ಕೋಲಾಹಲವನ್ನೇ ಸೃಷ್ಟಿ ಮಾಡಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಗಿಳಿದಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಇದು ಬಿಜೆಪಿ ಷಡ್ಯಂತ್ರ ಎಂದು ಹೈಕಮಾಂಡ್ ಗಮನಕ್ಕೆ ತಂದಿದ್ದಾರೆ. ಹಾಗಾದರೆ ಮುಂದೇನು?
ಕಳೆದ ದಿನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ವಿವರಿಸಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ರಾಜ್ಯಪಾಲರ ಆಡಳಿತವನ್ನು ದುರುಪಯೋಗ ಮಾಡಿಕೊಂಡು ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಷಡ್ಯಂತ್ರ ನಡೆಸಿದೆ, ಸಿಎಂ ಹುದ್ದೆಗೆ ಯಾವುದೇ ಕುತ್ತು ಬಾರದಂತೆ ನಮ್ಮ ಸಹಾಯಕ್ಕೆ ನೀವು ಇರಬೇಕು ಎಂದು ಸಿಎಂ ಹೈಕಮಾಂಡ್ಗೆ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ.

ಆದರೆ ಸಿಎಂ ಹಾಗೂ ಡಿಸಿಎಂ ಭೇಟಿ ಬಳಿಕ ರಾಹುಲ್ ಗಾಂಧಿ ಸೈಲೆಂಟ್ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ. ಬಿಜೆಪಿ ಮುಡಾ ಹಗರಣವನ್ನು ದೊಡ್ಡದು ಮಾಡಲು ಕಾಯುತ್ತಿದೆ. ನಾವು ಇದಕ್ಕೆ ಪ್ರತಿಕ್ರಿಯೆ ನೀಡಿದರೆ ಅದನ್ನೇ ಬಿಜೆಪಿ ಅಸ್ತ್ರವನ್ನಾಗಿ ಮಾಡಿಕೊಂಡು ಈ ವಿಚಾರವನ್ನು ದೊಡ್ಡದು ಮಾಡಲಿದೆ. ಹೀಗಾಗಿ ಕರ್ನಾಟಕದ ವಿಚಾರ ರಾಜ್ಯದಲ್ಲೇ ಹೋರಾಟ ಮಾಡಿ ರಾಜಕೀಯವಾಗಿ ಎದುರಿಸಿ ಎಂದು ಸಿಎಂಗೆ ರಾಹುಲ್ ಅಭಯ ನೀಡಿದ್ದಾರೆ. ಅಲ್ಲದೆ ಕೆಸಿ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುವುದಾಗಿ ಭರವಸೆ ನೀಡಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ಇದೀಗ ಹರಿಯಾಣ, ಜಮ್ಮು ಚುನಾವಣೆ ಫೋಷಣೆಯಾಗಿದ್ದು ಬಿಜೆಪಿ ರಾಜಕೀಯ ದಾಳಿಗೆ ಬಗ್ಗುವುದು ಬೇಡ ಎಂದು ಸೂಚಿಸಿದ್ದಾರೆ. ಹರಿಯಾಣ, ಜಮ್ಮು ಕಾಶ್ಮೀರ ಚುನಾವಣೆಯ ನಂತರ ಮಹಾರಾಷ್ಟ್ರದಲ್ಲೂ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದರೆ ಬಿಜೆಪಿ ಅದನ್ನು ಅಸ್ತ್ರವನ್ನಾಗಿ ಮಾಡುವ ಸಾಧ್ಯತೆ ಇರುವುದರಿಂದ ರಾಹುಲ್ ಗಾಂಧಿ ಎಚ್ಚರಿಕೆ ಹೆಜ್ಜೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ.

ರಾಜ್ಯದಲ್ಲಿ ಸಿದ್ದರಾಮಯ್ಯ ವಿರುದ್ಧ ಜನಾಭಿಪ್ರಾಯ ಸಂಗ್ರಹಿಸಲು ಬಿಜೆಪಿ ಮತ್ತು ಜೆಡಿಎಸ್ ಕಾರ್ಯಪ್ರವೃತ್ತವಾಗಿವೆ. ಸಿದ್ದರಾಮಯ್ಯ ಅವರನ್ನು ರಾಜೀನಾಮೆ ಕೊಡಿಸುವುದು ಬಿಜೆಪಿ ಮತ್ತು ಜೆಡಿಎಸ್ ಪ್ರಮುಖ ಅಜೆಂಡಾವಾಗಿದೆ. ಈ ನಿಟ್ಟಿನಲ್ಲಿ ನಿರಂತರವಾಗಿ ಹೋರಾಟಗಳನ್ನು ಉಭಯ ಪಕ್ಷಗಳು ನಡೆಸುತ್ತಿವೆ.
ಹೈಕಮಾಂಡ್ ನಾಯಕರ ಜೊತೆಗೆ ಉತ್ತಮ ಸಂಬಂಧವನ್ನು ಹೊಂದಿರುವ ಹಿರಿಯ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಮತ್ತು ಸಿದ್ದರಾಮಯ್ಯ ನಡುವಿನ ಬಾಂಧವ್ಯವೂ ಉತ್ತಮಗೊಂಡಿದೆ. ಕೆಲವೊಂದು ಕಾರಣಗಳಿಂದಾಗಿ ಭಿನ್ನಾಭಿಪ್ರಾಯ ತಲೆಧೋರಿತ್ತು. ಆದರೆ, ಇದೀಗ ಈ ಸಮಸ್ಯೆ ಬಗೆಹರಿದಿದೆ. ಅಲ್ಲದೆ ಸಿದ್ದರಾಮಯ್ಯ ಪರವಾಗಿ ಕಾಂಗ್ರೆಸ್ನ ರಾಜ್ಯ ನಾಯಕರು, ಸಚಿವರು, ಶಾಸಕರು ಬೆಂಬಲ ಸೂಚಿಸಿದ್ದಾರೆ. ಯಾವುದೇ ಕಾರಣಕ್ಕೂ ಎದೆಗುಂಡಬೇಡಿ ಎಂದು ಅಭಯ ನೀಡಿದ್ದಾರೆ.
ಇನ್ನು ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ ಕದ ತಟ್ಟಿದ್ದಾರೆ. ಹೈಕೋರ್ಟ್ನಲ್ಲಿ ಆಗಸ್ಟ್ 29 ಕ್ಕೆ ಈ ಪ್ರಕರಣ ವಿಚಾರಣೆಗೆ ಬರಲಿದೆ. ನ್ಯಾಯಾಲಯದ ಮುಂದಿನ ನಿರ್ಧಾರವೂ ಎಲ್ಲರನ್ನೂ ಕುತೂಹಲ ಕೆರಳಿಸಿದೆ. ಕೋರ್ಟ್ ಯಾವ ತೀರ್ಮಾನ ತೆಗೆದುಕೊಳ್ಳಲಿದೆ ಎನ್ನುವುದ ಮೇಲೆ ಸಿದ್ದರಾಮಯ್ಯ ರಾಜೀನಾಮೆ ತೆಗೆದುಕೊಳ್ಳುತ್ತಾರಾ? ಇಲ್ವಾ? ಕಾದು ನೋಡಬೇಕಿದೆ.












Click it and Unblock the Notifications