ಬಿಜೆಪಿ ಮುಖಂಡ ಯೋಗೀಶ ಕೊಲೆ; ಸುಪಾರಿ ಹಂತಕರು ನ್ಯಾಯಾಂಗ ಬಂಧನಕ್ಕೆ
ಧಾರವಾಡ ಮಾರ್ಚ್ 7: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ 6 ಸುಪಾರಿ ಹಂತಕರನ್ನು ಸಿಬಿಐ ಅಧಿಕಾರಿಗಳು ಬಿಗಿ ಭದ್ರತೆಯಲ್ಲಿ ಇಲ್ಲಿನ ಪ್ರಧಾನ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಶನಿವಾರ ಹಾಜರುಪಡಿಸಿದ್ದರು.
ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ವಿಜಯಲಕ್ಷ್ಮೀ ಘಾನಾಪುರ ಅವರು, ಆರೋಪಿಗಳನ್ನು ಮಾ. 20ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ನ್ಯಾಯಾಲಯ 6 ಆರೋಪಿಗಳನ್ನು ವಿಚಾರಣೆ ನಡೆಸಿ ಸಿಬಿಐ ಕಸ್ಟಡಿಗೆ ನೀಡಿ ಆದೇಶಿಸಿತ್ತು. ಶನಿವಾರ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಆರು ಆರೋಪಿಗಳಾದ ದಿನೇಶ, ಅಶ್ವಥ್, ಸುನೀಲಕುಮಾರ್, ನಾಜೀರ ಅಹ್ಮದ , ಶಾನವಾಜ್ ಹಾಗೂ ನೂತನ್ ನನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಸಿಬಿಐ ಅಧಿಕಾರಿಗಳು ಮಾ. 2ರಿಂದ 7ರವರೆಗೆ 6 ಆರೋಪಿಗಳನ್ನು ಧಾರವಾಡ, ದಾಂಡೇಲಿ ಸೇರಿದಂತೆ ಇನ್ನೂ ಹಲವು ಅಜ್ಞಾತ ಸ್ಥಳಗಳಿಗೆ ಕರೆದೊಯ್ದು ತೀವ್ರ ವಿಚಾರಣೆಗೊಳಪಡಿಸಿದ್ದರು. 5 ದಿನಗಳ ಕಾಲ ಆರೋಪಿಗಳಿಂದ ಹತ್ಯೆಗೆ ಸಂಬಂಧಿಸಿದ ಹಲವು ಕುತೂಹಲಕಾರಿ ಅಂಶಗಳನ್ನು ತನಿಖಾ ವೇಳೆ ಕಲೆ ಹಾಕಿದ್ದಾರೆ ಎನ್ನಲಾಗಿದೆ.

ನ್ಯಾಯಾಲಯದ ಆದೇಶದಂತೆ ಆರೋಪಿಗಳನ್ನು ಉಪನಗರ ಪೊಲೀಸ್ ಠಾಣೆಯ ಪೊಲೀಸರ ಭದ್ರತೆಯಲ್ಲಿ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಒಪ್ಪಿಸಲಾಯಿತು.












Click it and Unblock the Notifications