ಚೆಕ್ಗೆ ಸಹಿ: ಮುರುಘಾ ಸ್ವಾಮೀಜಿಯಿಂದ ವಿವರಣೆ ಕೇಳಿದ ಹೈಕೋರ್ಟ್
ಬೆಂಗಳೂರು.ಸೆ.28. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಶ್ರೀ ಜಗದ್ಗುರು ಮುರುಘರಾಜೇಂದ್ರ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಸ್ವಾಮೀಜಿ ಚೆಕ್ ಪುಸ್ತಕ್ಕೆ ಸಹಿ ಹಾಕುವ ಕುರಿತಂತೆ ವಿವರವಾದ ಮೆಮೋ ಸಲ್ಲಿಸಲು ಹೈಕೋರ್ಟ್ ಬುಧವಾರ ಸೂಚನೆ ನೀಡಿದೆ.
ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಸ್ವಾಮೀಜಿ, ಮಠದ ಸಿಬ್ಬಂದಿಗೆ ವೇತನ ನೀಡಲು ಚೆಕ್ ಬುಕ್ಗೆ ಸಹಿ ಹಾಕಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠದ ಮುಂದೆ ವಿಚಾರಣೆಗೆ ಬಂದಿತು.
ಆಗ ಕೆಲ ಕಾಲ ವಾದ ಆಲಿಸಿದ ಬಳಿಕ ನ್ಯಾಯಪೀಠ, ಯಾವ ಚೆಕ್ಗಳಿಗೆ ಸಹಿ ಹಾಕಬೇಕು, ಏನು ಎತ್ತ ಬಗ್ಗೆ ವಿವರವಾದ ಮೆಮೋ ಸಲ್ಲಿಸಲು ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು.
ಇದಕ್ಕೂ ಮುನ್ನ ವಾದ ಮಂಡಿಸಿದ ಸ್ವಾಮೀಜಿ ಪರ ವಕೀಲರು, ಸ್ವಾಮೀಜಿ ವಿದ್ಯಾಪೀಠದ ಏಕೈಕ ಟ್ರಸ್ಟಿಯಾಗಿದ್ದು, ಚೆಕ್ ಹಾಗೂ ಸಂಬಂಧಿತ ದಾಖಲೆಗಳಿಗೆ ಸಹಿ ಮಾಡಲು ಅನುಮತಿ ನೀಡಲು ವಿಚಾರಣಾಧೀನ ನ್ಯಾಯಾಲಯ ಅನುಮತಿ ನಿರಾಕರಿಸಿದೆ. ಇದರಿಂದಾಗಿ ಸಿಬ್ಬಂದಿಗೆ ವೇತನ ಭತ್ಯೆ ನೀಡಲು ಸಮಸ್ಯೆಯಾಗುತ್ತಿದೆ, ಸುಮಾರು 200 ಚೆಕ್ ಗಳಗೆ ಸ್ವಾಮೀಜಿ ಸಹಿ ಹಾಕಬೇಕಿದೆ. ಹಾಗಾಗಿ ಅಧೀನ ನ್ಯಾಯಾಲಯದ ಆದೇಶ ರದ್ದು ಮಾಡಬೇಕು, ನ್ಯಾಯಾಂಗಹ ಬಂಧನಲ್ಲಿದಿರುವ ಸ್ವಾಮೀಜಿಗೆ ಸಹಿ ಹಾಕಲು ಅನುಮತಿ ನೀಡಬೇಕು ಎಂದು ಕೋರಿದರು.

ಸಿಬ್ಬಂದಿಯ ವೇತನಕ್ಕೆ ತೊಂದರೆ:
ಚಿತ್ರದುರ್ಗದ ವಿಶೇಷ ಕೋರ್ಟ್ ಸೆಪ್ಟೆಂಬರ್ 20ರಂದು ಮಾಡಿರುವ ಆದೇಶವನ್ನು ರದ್ದು ಮಾಡಬೇಕು. ಅಲ್ಲದೇ, ಮಠ ಹಾಗೂ ವಿದ್ಯಾಪೀಠದ ನಿರ್ವಹಣೆ ಮತ್ತು ಅಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ವೇತನ ಪಾವತಿಸಲು ಮಠ ಮತ್ತು ವಿದ್ಯಾಪೀಠದ ಚೆಕ್ ಮತ್ತು ಸಂಬಂಧಿತ ದಾಖಲೆಗಳಿಗೆ ಸಹಿ ಮಾಡಲು ಅವಕಾಶ ಮಾಡಿಕೊಡುವಂತೆ ಚಿತ್ರದುರ್ಗ ಜಿಲ್ಲಾ ಕಾರಾಗೃಹದ ಮೇಲ್ವಿಚಾರಕರಿಗೆ ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.
ಸ್ವಾಮಿಜಿಯೇ ಏಕೈಕ ಟ್ರಸ್ಟಿ:
ಭಾರತೀಯ ಟ್ರಸ್ಟ್ ಕಾಯಿದೆ 1882ರ ಸೆಕ್ಷನ್ 34, ಟ್ರಸ್ಟ್ ನ ನಿರ್ವಹಣೆ ಮತ್ತು ಆಡಳಿತಕ್ಕೆ ಸಂಬಂಧಪಟ್ಟಿದೆ. ಇಲ್ಲಿ ಅರ್ಜಿದಾರರು ಚೆಕ್ ಮತ್ತು ಸಂಬಂಧಿತ ದಾಖಲೆಗಳಿಗೆ ಸಹಿ ಮಾಡಲು ಮಾತ್ರ ಅವಕಾಶ ಕೋರುತ್ತಿದ್ದಾರೆ. ಆದರೆ ಅನುಮತಿ ನಿರಾಕರಿಸಲಾಗಿದೆ ಎಂದು ಹೇಳಲಾಗಿದೆ.
ವಿದ್ಯಾಪೀಠದ ಆಡಳಿತ ಮತ್ತು ನಿರ್ವಹಣೆ ನೋಡಿಕೊಳ್ಳುವುದಕ್ಕೆ ಮಠದ ಆಡಳಿತ ಮಂಡಳಿ ಸೀಮಿತವಾಗಿದ್ದು, ಸಿಬ್ಬಂದಿಯ ವೇತನ, ಮಠ ಹಾಗೂ ವಿದ್ಯಾಪೀಠದ ನಿರ್ವಹಣೆಗೆ ಸಂಬಂಧಿಸಿದ ದಾಖಲೆಗಳಿಗೆ ಸಹಿ ಮಾಡುವ ಅಥವಾ ಹಣಕಾಸಿನ ವಿಚಾರದಲ್ಲಿ ಆಡಳಿತ ಮಂಡಳಿಯ ಪಾತ್ರವಿಲ್ಲ. ಮಠ ಅಥವಾ ವಿದ್ಯಾಪೀಠದ ಬ್ಯಾಂಕ್ ಖಾತೆಗಳನ್ನು ನಿರ್ವಹಿಸುವ ಅಧಿಕಾರ ಆಡಳಿತ ಮಂಡಳಿಗೆ ಇಲ್ಲ. ಹಣಕಾಸಿನ ವಿಚಾರ ಹಾಗೂ ಚೆಕ್ ಗೆ ಸಹಿ ಮಾಡುವ ಅಧಿಕಾರ ಅರ್ಜಿದಾರರಿಗೆ ಮಾತ್ರ ಇದೆ ಎಂದು ಹೇಳಲಾಗಿದೆ.
ಮಠ ಮತ್ತು ವಿದ್ಯಾಪೀಠದಲ್ಲಿ ಸುಮಾರು ಮೂರು ಸಾವಿರ ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಆರೋಪಿ ಸ್ವಾಮೀಜಿ ಅವರು ಚೆಕ್ ಮತ್ತು ಸಂಬಂಧಿತ ದಾಖಲೆಗಳಿಗೆ ಸಹಿ ಮಾಡಲು ಅನುಮತಿಸದಿದ್ದರೆ ಸಿಬ್ಬಂದಿಗೆ ವೇತನ ಪಾವತಿಯಾಗದೆ, ಆರ್ಥಿಕ ಸಮಸ್ಯೆ ಉಂಟು ಮಾಡಿದಂತಾಗುತ್ತದೆ. ಕರ್ನಾಟಕ ಕಾರಾಗೃಹ ಕಾಯಿದೆ 1963ರ ಸೆಕ್ಷನ್ 40ರ ಅಡಿ ಅರ್ಜಿದಾರರು ವಿಚಾರಣಾಧೀನ ಕೈದಿಯಾಗಿದ್ದು, ಚೆಕ್ ಮತ್ತು ಸಂಬಂಧಿತ ದಾಖಲೆಗಳಿಗೆ ಸಹಿ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕೋರಲಾಗಿದೆ.












Click it and Unblock the Notifications