Murugha Mutt Case : ಮುರುಘಾಮಠದ ವಿವಾದ; ತನಿಖಾಧಿಕಾರಿ ಬದಲಾವಣೆಗೆ ಅರ್ಜಿ
ಬೆಂಗಳೂರು, ಜನವರಿ 31; ಚಿತ್ರದುರ್ಗದ ಮುರುಘಾಮಠದ ಪ್ರಕರಣದ ವಿವಾದ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಪ್ರಕರಣದ ತನಿಖಾಧಿಕಾರಿ ಬದಲಾವಣೆ ಮಾಡಲು ಕೋರಿ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ.
ಮುರುಘಾ ಶರಣರ ವಿರುದ್ಧ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ ಅಡಿ ಪ್ರಕರಣ ದಾಖಲಿಸುವಲ್ಲಿ ಮಠದ ಮಾಜಿ ಆಡಳಿತಾಧಿಕಾರಿ ಎಸ್. ಕೆ. ಬಸವರಾಜನ್ ಮತ್ತು ಅವರ ಪತ್ನಿ ಸೌಭಾಗ್ಯ ಬಸವರಾಜನ್ ಅವರ ಪಾತ್ರವಿದೆ ಎಂದು ಆರೋಪಿಸಲಾಗಿದೆ.
ಈ ಪ್ರಕರಣದ ತನಿಖಾಧಿಕಾರಿ ಬದಲಾಯಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಮಠದ ಉಸ್ತುವಾರಿ ಸ್ವಾಮೀಜಿ ಬಸವಪ್ರಭು ಸಲ್ಲಿಸಿರುವ ಈ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿ, ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.

ಅರ್ಜಿದಾರರ ಪರ ವಕೀಲರು, ಪ್ರಕರಣದ ತನಿಖೆಯನ್ನು ಈಗಿನ ತನಿಖಾಧಿಕಾರಿ ಸಮರ್ಪಕವಾಗಿ ನಡೆಸುತ್ತಿಲ್ಲ. ಆದ್ದರಿಂದ, ಇದನ್ನು ಹಿರಿಯ ಮಹಿಳಾ ತನಿಖಾಧಿಕಾರಿಯೊಬ್ಬರಿಗೆ ವಹಿಸಲು ನಿರ್ದೇಶಿಸಬೇಕು ಎಂದು ಕೋರಿದರು.
ವಾದ ಆಲಿಸಿದ ನ್ಯಾಯಪೀಠ, ತನಿಖೆಯ ಪ್ರಗತಿ ವರದಿಯನ್ನು ಕೋರ್ಟ್ಗೆ ಹಾಜರುಪಡಿಸುವಂತೆ ಪ್ರಾಸಿಕ್ಯೂಷನ್ ಪರ ವಕೀಲರಿಗೆ ನಿರ್ದೇಶಿಸಿ ವಿಚಾರಣೆಯನ್ನು ಫೆಬ್ರವರಿ 10ಕ್ಕೆ ಮುಂದೂಡಿದೆ.
ಏನಿದು ಪ್ರಕರಣ?; ಎಸ್. ಕೆ. ಬಸವರಾಜನ್ ಮತ್ತವರ ಪತ್ನಿ ಸೌಭಾಗ್ಯ ಮುರುಘಾ ಮಠದ ಮೇಲೆ ಪ್ರಕರಣ ಬರಲು ಷಡ್ಯಂತ್ರ ರೂಪಿಸಿದ್ದಾರೆ ಎಂಬ ಆರೋಪವಿದೆ. ಈ ಕುರಿತು ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ದಾಖಲಾದ ಎಫ್ಐಆರ್ ಎದ್ದು ಕೋರಿ ಎಸ್. ಕೆ. ಬಸವರಾಜನ್ ದಂಪತಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಅವರು ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯಲ್ಲಿ ದೂರುದಾರರಾದ ಮರುಘಾ ರಾಜೇಂದ್ರ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮತ್ತು ಗ್ರಾಮೀಣಾ ಠಾಣಾ ಪೊಲೀಸರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ.
ಮಠ ನಡೆಸುತ್ತಿರುವ ಪ್ರಿಯದರ್ಶಿನಿ ಶಾಲೆಯ ಶಿಕ್ಷಕ ಬಸವ ರಾಜೇಂದ್ರಪ್ಪ ಮತ್ತು ಪ್ರಕರಣದ ಸಂತ್ರಸ್ತೆಯ ತಾಯಿ ನಡುವೆ ನಡೆದ ಮೊಬೈಲ್ ಕರೆ ಸಂಭಾಷಣೆಯನ್ನು ಆಧರಿಸಿ ದೂರುದಾರರು ಪೊಲೀಸರಿಗೆ ದೂರು ದಾಖಲಿಸಿದ್ದಾರೆ.
ಡಾ. ಶಿವಮೂರ್ತಿ ಮರುಘಾ ಸ್ವಾಮಿಜಿ ಅವರ ವ್ಯಕ್ತಿತ್ವ ಮತ್ತು ಘನತೆಗೆ ಧಕ್ಕೆ ತಂದು ಮತ್ತು ಅವರಿಗೆ ಕಿರುಕುಳ ನೀಡುವ ಉದ್ದೇಶದಿಂದ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ದೂರು ದಾಖಲಿಸಲು ಸಂತ್ರಸ್ತರಿಗೆ ಪ್ರಚೋದನೆ ನೀಡಲಾಗಿದೆ ಹಾಗೂ ಪಿತೂರಿ ನಡೆಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಆದರೆ ಅದೆಲ್ಲಾ ಸುಳ್ಳು ಮತ್ತು ಆ ಆರೋಪಗಳಲ್ಲಿ ಯಾವುದೇ ಆಧಾರವಿಲ್ಲವೆಂದು ತಿಳಿಸಲಾಗಿದೆ.
ಪ್ರಕರಣ ಸಂಬಂಧ ಪೊಲೀಸರು ದಾಖಲಿಸಿದ ಎಫ್ಐಆರ್ನಲ್ಲಿ ತಮ್ಮ ಹೆಸರು ಉಲ್ಲೇಖವಾಗಿಲ್ಲ. ಆದರೂ ಪೊಲೀಸರು ಅಧಿಕಾರ ದುರ್ಬಳಕೆ ಮಾಡಿಕೊಂಡು ತಮ್ಮನ್ನು ಬಂಧಿಸಿದ್ದಾರೆ. ತಮಗೂ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಪೊಲೀಸರು ನಡೆಯಿಂದ ಸಂವಿಧಾನದ ಪರಿಚ್ಛೇದ 21 ಅಡಿಯಲ್ಲಿ ತಮಗೆ ಪ್ರಾಪ್ತವಾಗಿರುವ ಜೀವಿಸುವ ಮತ್ತು ವೈಯಕ್ತಿಕ ಸ್ವಾತಂತ್ರದ ಹಕ್ಕು ಉಲ್ಲಂಘನೆಯಾಗಿದೆ. ಆದ್ದರಿಂದ ಎಫ್ಐಆರ್ ರದ್ದುಪಡಿಸಬೇಕು ಎಂದು ಕೋರಿದ್ದಾರೆ.












Click it and Unblock the Notifications