ನಾನು ಮತ್ತು ರಮೇಶ ಜಾರಕಿಹೊಳಿ ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ: ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ, ಡಿಸೆಂಬರ್ 2: 2023 ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ನಾನು ಮತ್ತು ನನ್ನ ಶಾಸಕ ಸಹೋದರ ರಮೇಶ ಜಾರಕಿಹೊಳಿಯವರು ಬಿಜೆಪಿ ಅಭ್ಯರ್ಥಿಗಳಾಗಿ ಕಣಕ್ಕಿಳಿಯುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದಲ್ಲಿ ಗುರುವಾರ ಸಂಜೆ ಅರಭಾವಿ ಮತ್ತು ಗೋಕಾಕ ಮತಕ್ಷೇತ್ರಗಳ ಹಾಲುಮತ ಕುರುಬ ಸಮಾಜ ಬಾಂಧವರು ಹಮ್ಮಿಕೊಂಡಿದ್ದ ಕನಕದಾಸರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾನು ಮತ್ತು ಸಹೋದರ ರಮೇಶ ಜಾರಕಿಹೊಳಿ ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ಬೇರೆ ಪಕ್ಷ ಸೇರುವುದಿಲ್ಲ ಎಂದು ಹೇಳುವ ಮೂಲಕ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೇರೆ ಪಕ್ಷಗಳ ಸೇರ್ಪಡೆ ಕುರಿತಂತೆ ಎದ್ದಿರುವ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಬಿಜೆಪಿ ಬಿಡುತ್ತಾರೆಂದು ಅಲ್ಲಲ್ಲಿ ವರದಿಗಳು ಮಾಧ್ಯಮಗಳಲ್ಲಿ ಬರುತ್ತಿದೆ. ಆದರೆ ಯಾವುದೇ ಸಂದರ್ಭದಲ್ಲೂ ನಾವಿಬ್ಬರೂ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ. ಅರಭಾವಿ ಮತಕ್ಷೇತ್ರದಿಂದ ನಾನು ಹಾಗೂ ಗೋಕಾಕ ಮತಕ್ಷೇತ್ರದಿಂದ ರಮೇಶ ಜಾರಕಿಹೊಳಿ ಅವರು ಬಿಜೆಪಿಯಿಂದಲೇ ಸ್ಪರ್ಧಿಸಿ, ಜನರ ಪ್ರೀತಿ ಮತ್ತು ಆಶೀರ್ವಾದದಿಂದ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲುತ್ತೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಇತ್ತೀಚಿನ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ಧಿಗಳಲ್ಲಿ ತಮ್ಮ ವಿರೋಧಿಗಳ ಪಾತ್ರ ಇದೆ. ಸುಳ್ಳು ವದಂತಿಗಳನ್ನು ಹರಡಿಸುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಅರಭಾವಿ ಹಾಗೂ ಗೋಕಾಕ ವಿಧಾನಸಭಾ ಮತಕ್ಷೇತ್ರದ ಸರ್ವಾಂಗೀಣ ಪ್ರಗತಿಗಾಗಿ ಶ್ರಮಿಸುತ್ತಿರುವ ನಾವಿಬ್ಬರೂ ಪಕ್ಷ ಬಿಡುವುದಿಲ್ಲ. ಅಲ್ಲದೇ ಮುಂದಿನ 10 ವರ್ಷಗಳವರೆಗೆ ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿರುತ್ತದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮೀತ ಶಾ ಅವರ ದೂರದೃಷ್ಟಿಯ ಆಡಳಿತವೇ ಸಾಕ್ಷಿಯಾಗಿದೆ ಎಂದು ಹೇಳಿದರು.
2023 ರಲ್ಲಿ ನಡೆಯುವ ಚುನಾವಣೆಯಲ್ಲಿ ಎಲ್ಲ ಸಮಾಜ ಬಾಂಧವರು ತಮ್ಮನ್ನು ಬೆಂಬಲಿಸಿ ಆಶೀರ್ವದಿಸಲಿದ್ದಾರೆ. ಎಲ್ಲ ಸಮಾಜಗಳ ಪ್ರೀತಿ ಮತ್ತು ವಿಶ್ವಾಸವನ್ನು ನಾವು ಗಳಿಸಿಕೊಂಡಿದ್ದೇವೆ. ಯಾವ ಸಮಾಜಕ್ಕೂ ನಮ್ಮಿಂದ ಅನ್ಯಾಯವಾಗಿಲ್ಲ. ಸರ್ವ ಜನಾಂಗಗಳ ಶಾಂತಿಯ ತೋಟದಂತೆ ಜನಸೇವೆ ಮಾಡುತ್ತಿದ್ದೇವೆ. ನಾವು ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂದು ಹೇಳುತ್ತಿರುವುದು ಅಹಂಕಾರದಿಂದಲ್ಲ. ಅದು ಎಲ್ಲ ಸಮುದಾಯಗಳ ಜನರ ಪ್ರೀತಿ ಮತ್ತು ವಿಶ್ವಾಸವೇ ಕಾರಣ ಎಂದು ಹೇಳಿದರು.
ಕಳೆದ 30 ವರ್ಷಗಳಿಂದ ಅರಭಾವಿ ಕ್ಷೇತ್ರದಲ್ಲಿ ಎಲ್ಲ ಸಮುದಾಯಗಳ ಆಶೀರ್ವಾದದಿಂದ ಪ್ರಭಾಶುಗರ ಕಾರ್ಖಾನೆ ಚುಕ್ಕಾಣಿ ಹಿಡಿಯುವ ಮೂಲಕ ರಾಜಕೀಯ ಆರಂಭಿಸಿರುವ ನನಗೆ ಇಂದು ಅರಭಾವಿ ಮತಕ್ಷೇತ್ರದಲ್ಲಿ 5 ಬಾರಿ ಶಾಸಕನಾಗಿ, 4 ಬಾರಿ ಸಚಿವನಾಗಿ ಮತ್ತು ಕಳೆದ 2 ವರ್ಷಗಳಿಂದ ಕೆಎಂಎಫ್ ಅಧ್ಯಕ್ಷನಾಗಿ ರೈತರ ಸೇವೆ ಮಾಡುವ ಅವಕಾಶವನ್ನು ಕ್ಷೇತ್ರದ ಸಮಸ್ತ ಜನತೆ ಒದಗಿಸಿಕೊಟ್ಟಿದ್ದಾರೆ. ಅಂತಹ ಹೃದಯವಂತ ಜನರ ಋಣ ತೀರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ಹೇಳಿದರು.
2004 ರ ಪೂರ್ವ ಮತ್ತು 2004 ನಂತರ ಅರಭಾವಿ ಕ್ಷೇತ್ರ ಹೇಗಿತ್ತು ಎಂಬುದನ್ನು ನೀವೇ ಅರ್ಥ ಮಾಡಿಕೊಳ್ಳಬೇಕು. ನಾನು 2004 ರಿಂದ ಅರಭಾವಿ ಕ್ಷೇತ್ರದ ಶಾಸಕನಾಗಿ ಆಯ್ಕೆಯಾದ ನಂತರ ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ನಿರಂತರವಾಗಿ ಸ್ಪಂದಿಸುತ್ತಿದ್ದೇನೆ. ಜೊತೆಗೆ ಮತಕ್ಷೇತ್ರವನ್ನು ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿಪಡಿಸುತ್ತಿದ್ದೇನೆ. ಅಭಿವೃದ್ಧಿ ಸಹಿಸದ ಕೆಲವರು ಇಲ್ಲ ಸಲ್ಲದ ಅಪಪ್ರಚಾರದಲ್ಲಿ ತೊಡಗುತ್ತಿದ್ದಾರೆ. ಜೊತೆಗೆ ನಮ್ಮನ್ನು ಟೀಕಿಸುತ್ತಿದ್ದಾರೆ. ಟೀಕಿಸುವವರು ಟೀಕಿಸಲಿ. ಅದರ ಬಗ್ಗೆ ಯಾರು ತಲೆ ಕೆಡಿಸಿಕೊಳ್ಳಬೇಡಿ. ನಾವಂತೂ ಜನರ ಋಣ ತೀರಿಸುವ ಅಭಿವೃದ್ಧಿಪರ ಕೆಲಸಗಳನ್ನು ಮಾಡುತ್ತಿದ್ದೇವೆ. ಎಲ್ಲ ಸಮುದಾಯಗಳನ್ನು ಒಗ್ಗೂಡಿಸುವ ಕೆಲಸ ನಿರಂತವಾಗಿ ನಡೆಯುತ್ತಿದೆ. ಸಮುದಾಯಗಳನ್ನು ಕೂಡಿಸುತ್ತಿದ್ದೇವೆಯೇ ಹೊರತು ಯಾವ ಸಮುದಾಯವನ್ನು ಒಡೆಯುವ ಕೆಲಸ ಮಾಡುತ್ತಿಲ್ಲ. ಯಾರು ನಮ್ಮ ಬಗ್ಗೆ ಜನರಲ್ಲಿ ತಪ್ಪು ತಿಳುವಳಿಕೆ ಮೂಡಿಸಿ ಸುಳ್ಳು ವದಂತಿ ಹಬ್ಬಿಸುತ್ತಿದ್ದಾರವೋ ಅವರನ್ನು ಕಲ್ಲೋಳಿ ಮಾರುತೇಶ್ವರ ದೇವರು ನೋಡಿಕೊಳ್ಳಲಿ ಎಂದು ವಿರೋಧಿಗಳಿಗೆ ಟಾಂಗ್ ಕೊಟ್ಟರು.
ನಮ್ಮ ತಂದೆಯವರಾಗಿದ್ದ ಲಕ್ಷ್ಮಣರಾವ್ ಜಾರಕಿಹೊಳಿ, ಗೋಕಾಕ ಮಾಜಿ ಶಾಸಕರಾಗಿದ್ದ ಶಂಕರ ಕರನಿಂಗ, ಪ್ರಭಾವಿ ಸಹಕಾರಿ ಮುಖಂಡ ವಿವೇಕರಾವ್ ಪಾಟೀಲ ಸೇರಿಕೊಂಡು ಜನರ ಆಶೀರ್ವಾದದಿಂದ ಪ್ರಭಾಶುಗರ ಕಾರ್ಖಾನೆಯನ್ನು ಅಂದಿನ ಅರಭಾವಿ ಶಾಸಕರಾಗಿದ್ದ ಎಸ್. ಕೌಜಲಗಿ ಅವರ ಹಿಡಿತದಲ್ಲಿದ್ದ, ಆಡಳಿತವನ್ನು ನಾವು ಪಡೆದುಕೊಂಡೆವು. ಆಗ ಎಲ್ಲ ಸಮುದಾಯದ ಜನರು ನಮಗೆ ಆಶೀರ್ವಾದ ನೀಡಿದರು. ಅಂದಿನಿಂದ ನಮ್ಮ ಕುಟುಂಬ ಜನರ ಸೇವೆಯಲ್ಲಿ ತೊಡಗಿದೆ ಎಂದು ತಿಳಿಸಿದರು.
ಮುಂದಿನ ಜನೇವರಿ ತಿಂಗಳಲ್ಲಿ ಗೋಕಾಕದಲ್ಲಿ ಉಭಯ ಮತಕ್ಷೇತ್ರಗಳ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗುವುದು. ಇದು ನಮ್ಮ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಗಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯ ವಿವೇಕರಾವ್ ಪಾಟೀಲ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.