ಸೆಪ್ಟೆಂಬರ್ 30ರಂದು ದಸರಾ ಜಂಬೂ ಸವಾರಿ - ಸಿದ್ದರಾಮಯ್ಯ
ಬೆಂಗಳೂರು, ಜುಲೈ 24: ಸೆಪ್ಟೆಂಬರ್ 30 ರಂದು ಮಧ್ಯಾಹ್ನ 1.15 ಕ್ಕೆ ನಂದಿಪೂಜೆ ಮಾಡುವ ಮೂಲಕ ಐತಿಹಾಸಿಕ ಮೈಸೂರು ದಸರಾ ಜಂಬೂ ಸವಾರಿಗೆ ಚಾಲನೆ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
"ವಿಧಾನಸಭೆಯಲ್ಲಿ ದಸರಾ ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಅವರು ಈ ಬಾರಿ ರಾಜ್ಯದಲ್ಲಿ ಬರಗಾಲ ಇರುವ ಹಿನ್ನಲೆಯಲ್ಲಿ ಸಾಂಪ್ರದಾಯಿಕ ದಸರಾ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು. ಸೆಪ್ಟೆಂಬರ್ 21ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಉತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಸೆಪ್ಟೆಂಬರ್ 30ರವರೆಗೆ ದಸರಾ ಉತ್ಸವ ನಡೆಯಲಿದೆ," ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ದಸರಾ ಮಹೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಲುವಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕಾರಿ ಸಮಿತಿ ರಚಿಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ತನ್ವೀರ್ ಸೇಠ್ ಅವರು ಸಮಿತಿ ಉಪಾಧ್ಯಕ್ಷರಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಸಚಿವೆ ಶ್ರೀಮತಿ ಉಮಾಶ್ರೀ ಹಾಗೂ ಪ್ರವಾಸೋದ್ಯಮ ಸಚಿವ ಶ್ರೀ ಪಿಯಾಂಕ್ ಖರ್ಗೆ ಮತ್ತಿತರರು ಈ ಸಮಿತಿಯಲ್ಲಿದ್ದಾರೆ. ಪ್ರಚಾರದ ಜವಾಬ್ದಾರಿಯನ್ನು ಪ್ರವಾಸೋದ್ಯಮ ಇಲಾಖೆಗೆ ವಹಿಸಲಾಗಿದೆ.
ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಆಚರಣೆ ಸಂಬಂಧ ರಚಿಸಲಾಗಿರುವ ಉನ್ನತಮಟ್ಟದ ಸಮಿತಿಯ ಪೂರ್ವಭಾವಿ ಸಭೆಯನ್ನು ಇಂದು ನಡೆಸಿದೆ. pic.twitter.com/bLRhGxedSZ
— CM of Karnataka (@CMofKarnataka) July 24, 2017
ಇದೇ ವೇಳೆ, "ದಸರಾ ಉದ್ಘಾಟನೆಗೆ ಸುಮಾರು 10ಜನರ ಹೆಸರು ಪರಿಶೀಲನೆಯಲ್ಲಿದೆ. ಆದರೆ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ," ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಉದ್ಘಾಟಕರನ್ನು ಆಯ್ಕೆ ಮಾಡುವ ಅಧಿಕಾರವನ್ನು ಕಾರ್ಯಕಾರಿ ಸಮಿತಿಯು ಮುಖ್ಯಮಂತ್ರಿಗಳಿಗೆ ನೀಡಿದೆ. ಇನ್ನು ಒಂದು ವಾರದೊಳಗೆ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈ ಬಾರಿ ವಸ್ತು ಪ್ರದರ್ಶನದಲ್ಲಿ ಜಿಲ್ಲಾ ಪಂಚಾಯತಿಗಳು ಮಳಿಗೆ ಪ್ರಾರಂಭಿಸುವುದು ಬೇಡ. ಸರ್ಕಾರದ ಪ್ರಮುಖ 15 ರಿಂದ 20 ಇಲಾಖೆಗಳು ದಸರಾ ಉದ್ಘಾಟನೆಯ ದಿನದಂದೇ ವಸ್ತು ಪ್ರದರ್ಶನ ಮಳಿಗೆಯನ್ನು ಪ್ರಾರಂಭಿಸಬೇಕು ಎಂದು ಮುಖ್ಯ ಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಲಿದ್ದಾರೆ ಎಂದು ಸಿಎಂ ತಿಳಿಸಿದರು.
"ಮೈಸೂರು ನಗರದಲ್ಲಿ ರಾಮಸ್ವಾಮಿ ವೃತ್ತದಿಂದ ಬನ್ನಿಮಂಟಪದವರೆಗೆ ದಸರಾ ಮೆರವಣಿಗೆ ನಡೆಯಲಿರುವ ರಸ್ತೆಯನ್ನು ಕಾಂಕ್ರೀಂಟ್ ರಸ್ತೆಯಾಗಿ ಅಭಿವೃದ್ಧಿಪಡಿಸಲಾಗಿದೆ. ನಗರದ ಇತರ ರಸ್ತೆಗಳ ಅಭಿವೃದ್ಧಿಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಮೈಸೂರು ಮಹಾನಗರಪಾಲಿಕೆ ಹಾಗೂ ಲೋಕೋಪಯೋಗಿ ಇಲಾಖೆಗೆ ಸೂಚನೆ ನೀಡಲಾಗಿದೆ," ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ದಸರಾ ಸಂದರ್ಭದಲ್ಲಿ ವಾಹನ ಪ್ರವೇಶ ತೆರಿಗೆ ಇದ್ದಲ್ಲಿ ವಿನಾಯಿತಿ ನೀಡಲು ಕ್ರಮಕೈಗೊಳ್ಳಲಾಗುವುದು. ಕಳೆದ ವರ್ಷ ದಸರಾಕ್ಕೆ 13.2 ಕೋಟಿ ರೂ. ವೆಚ್ಚವಾಗಿದ್ದು ಈ ವರ್ಷ 15 ಕೋಟಿ ರೂ. ವೆಚ್ಚವಾಗಬಹುದೆಂದು ಅಂದಾಜಿಸಲಾಗಿದೆ. ಇದರೊಂದಿಗೆ ಈ ಬಾರಿಯ ವಿಶ್ವಪ್ರವಾಸೋದ್ಯಮ ದಿನಾಚರಣೆಯನ್ನು ಸೆಪ್ಟೆಂಬರ್ 27 ರಂದು ಮೈಸೂರಿನಲ್ಲೇ ಹಮ್ಮಿಕೊಳ್ಳಲಾಗುವುದೆಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಲೋಕೋಪಯೋಗಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಸಚಿವೆ ಶ್ರೀಮತಿ ಉಮಾಶ್ರೀ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್, ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ, ಮೈಸೂರು ಜಿಲ್ಲೆಯ ಶಾಸಕರುಗಳು, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ನಯಿಮಾ ಸುಲ್ತಾನೆ, ಮೇಯರ್ ರವಿಕುಮಾರ್ ಮೊದಲಾದವರು ಸಭೆಯಲ್ಲಿ ಹಾಜರಿದ್ದರು.












Click it and Unblock the Notifications