ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ನೇಮಕ
ಬೆಂಗಳೂರು, ಮಾರ್ಚ್ 03: ಕರ್ನಾಟಕ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ಎಂ ಎಲ್ ಸಿ ಎನ್.ರವಿ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಇಂದು(ಮಾರ್ಚ್ 03, ಸೋಮವಾರ) ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಭಾಪತಿಗಳಿಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆ. ಛಲವಾದಿ ನಾರಾಯಣಸ್ವಾಮಿ ಬರೆದಿರುವಂತ ಪತ್ರದಲ್ಲಿ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದಂತ ರವಿಕುಮಾರ್. ಎನ್ ಅವರನ್ನು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ನೇಮಿಸಿರುವುದಾಗಿ ತಿಳಿಸಿದ್ದಾರೆ.
ರಾಜ್ಯ ವಿಧಾನಪರಿಷತ್ ಸದಸ್ಯ ರವಿಕುಮಾರ್ ಎನ್. ಅವರನ್ನು ಕರ್ನಾಟಕ ವಿಧಾನಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರವಿಕುಮಾರ್ ಎನ್. ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಭಿನಂದಿಸಿದರು.

ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನೂತನ ಮುಖ್ಯ ಸಚೇತಕರಾಗಿ ನೇಮಕಗೊಂಡಿರುವ ಹಿರಿಯ ಸದಸ್ಯರೂ ಆದ ಎನ್ ರವಿ ಕುಮಾರ್ ಅವರಿಗೆ ಆತ್ಮೀಯ ಅಭಿನಂದನೆಗಳು. ಅತ್ಯುತ್ತಮ ಸಂಸದೀಯ ಪಟುವಾಗಿರುವ ಮಾನ್ಯ ರವಿಕುಮಾರ್ ಅವರಿಗೆ ದೊರೆತಿರುವ ಈ ಜವಾಬ್ದಾರಿಯು ಭಾರತೀಯ ಜನತಾ ಪಾರ್ಟಿಯು ವಿಧಾನ ಪರಿಷತ್ತಿನಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಶಕ್ತಿ ದೊರೆತಂತಾಗಿದೆ ಎಂದು ಹೇಳಿದರು.
ಇನ್ನೂ ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಆಗಲಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಗಾದಿಗೆ ಪೈಪೋಟಿ ನಡೆಯುತ್ತಿದ್ದು, ದಿನೇದಿನೇ ಅದು ದೊಡ್ಡದಾಗುತ್ತಿದೆ. ಸಿದ್ದರಾಮಯ್ಯರ ಪರ, ಡಿಕೆ ಶಿವಕುಮಾರ್ ಪರ- ವಿರುದ್ಧ ಶಾಸಕರು ಹೇಳಿಕೆಗಳನ್ನು ಕೊಡುತ್ತಿದ್ದಾರೆ. ನಿಶ್ಚಿತವಾಗಿ ಬರುವ ದಿನಗಳಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯುವುದರಲ್ಲಿ ಸಂದೇಹವಿಲ್ಲ ಎಂದು ತಿಳಿಸಿದರು.
ಕಾಂಗ್ರೆಸ್ಸಿನ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಾಗೂ ಕಾಂಗ್ರೆಸ್ ಶಾಸಕರು ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವ ಕುರಿತ ಹೇಳಿಕೆ ನೀಡಿದ್ದಾರೆ. ಕಳೆದ ಬೆಳಗಾವಿ ಅಧಿವೇಶನದಲ್ಲಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಗುರುಗಳು ಹೇಳಿದ್ದನ್ನು ನೆನಪು ಮಾಡಿಕೊಂಡಿದ್ದರು. ಅಧಿಕಾರ ಸಿಗದೆ ಇದ್ದಲ್ಲಿ ಅದನ್ನು ಒದ್ದು ಕಿತ್ತುಕೊಳ್ಳಬೇಕೆಂದು ಡಿ.ಕೆ.ಶಿವಕುಮಾರ್ ಅವರಿಗೆ ಅವರ ಗುರುಗಳು ಹೇಳಿದ್ದರಂತೆ ಎಂದು ಗಮನ ಸೆಳೆದರು.
ಮತ್ತೊಂದೆಡೆ ಮೊನ್ನೆ ಡಿ.ಕೆ.ಶಿವಕುಮಾರ್ ಅವರು ನಟ್ ಮತ್ತು ಬೋಲ್ಟ್ ಟೈಟ್ ಮಾಡುವ ಅಹಂನಿಂದ ಕೂಡಿದ ಹೇಳಿಕೆ ಕೊಟ್ಟಿದ್ದಾರೆ. ಶಿವಕುಮಾರ್ ಅವರ ಈ ಹೇಳಿಕೆ ಚಿತ್ರರಂಗದ ಬಗ್ಗೆ ಹೇಳಿದ್ದಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಅಥವಾ ಸರಕಾರದಲ್ಲಿ ಯಾರು ಶಿವಕುಮಾರರಿಗೆ ಮುಖ್ಯಮಂತ್ರಿ ಆಗಲು ಅವಕಾಶ ನೀಡುತ್ತಿಲ್ಲವೋ ಅವರಿಗೆ ಒಂದು ರೀತಿಯ ಎಚ್ಚರಿಕೆಯ ಮಾತನ್ನು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ ಎಂಬುದು ಚರ್ಚೆಯಲ್ಲಿದೆ ಎಂದು ವಿವರಿಸಿದರು.
ಈ ಸರಕಾರದ ನಟ್ ಮತ್ತು ಬೋಲ್ಟ್ ಎರಡೂ ಸಡಿಲ ಆಗಿದೆ. ಅಭಿವೃದ್ಧಿ ವಿಷಯದಲ್ಲಿ ಈ ಸರಕಾರದ ನಟ್ ಮತ್ತು ಬೋಲ್ಟ್ ಲೂಸ್ ಆಗಿದೆ. ಇದು ಮಾನ್ಯ ರಾಜ್ಯಪಾಲರ ಭಾಷಣದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ. ಒಂದು ಕಡೆ ಹೈನುಗಾರಿಕೆಗೆ ಪ್ರೋತ್ಸಾಹಧನದ ಪ್ರಸ್ತಾಪ ಮಾಡಿದ್ದಾರೆ. ಸಾವಿರಾರು ಕೋಟಿ ಹಳೆಯ ಪ್ರೋತ್ಸಾಹಧನ ಹಾಗೇ ಬಾಕಿ ಉಳಿಸಿಕೊಂಡಿದ್ದಾರೆ. ಪ್ರಾದೇಶಿಕ ಅಸಮಾನತೆ ಹೋಗಲಾಡಿಸಲು 90 ಸಾವಿರ ಕೋಟಿ ಖರ್ಚು ಮಾಡುವುದಾಗಿ ಹೇಳಿದ್ದಾರೆ. ಕಳೆದೆರಡು ವರ್ಷಗಳಲ್ಲಿ ಎಷ್ಟು ಮೀಸಲಿಟ್ಟಿದ್ದಾರೆ? ಎಷ್ಟು ಖರ್ಚಾಗಿದೆ ಎಂದು ಪ್ರಶ್ನಿಸಿದರು.
ಮಾನ್ಯ ರಾಜ್ಯಪಾಲರ ಭಾಷಣ ಕೇಳಿಸಿಕೊಂಡರೆ ರಾಜ್ಯಪಾಲರ ಸಮಯವನ್ನು ಕೂಡ ಈ ಸರಕಾರ ವ್ಯರ್ಥ ಮಾಡಿದೆ. ಅಭಿವೃದ್ಧಿಯ ವೇಗವನ್ನು ಚುರುಕುಗೊಳಿಸುವುದರಲ್ಲಿ ಮತ್ತು ಸರಕಾರದ ಹಣಕಾಸಿನ ವ್ಯವಸ್ಥೆಯನ್ನು ಇನ್ನಷ್ಟು ಸದೃಢಗೊಳಿಸುವಲ್ಲಿ ಯಶಸ್ವಿಯಾಗಿದೆ ಎಂಬ ಹಸಿಸುಳ್ಳನ್ನು ಈ ಕಾಂಗ್ರೆಸ್ ಸರಕಾರವು ಗೌರವಾನ್ವಿತ ರಾಜ್ಯಪಾಲರ ಬಾಯಲ್ಲಿ ಹೇಳಿಸಿದೆ ಎಂದು ಟೀಕಿಸಿದರು.












Click it and Unblock the Notifications