Siddeshwara Swamiji : ವಿಜಯಪುರದ ಜೀವಂತ ದೇವರ ಅಗಲುವಿಕೆಯಿಂದ ನಾಡಿಗೇ ಆಘಾತ: ನಳಿನ್ಕುಮಾರ್ ಕಟೀಲ್
ಬೆಂಗಳೂರು,ಜನವರಿ 3: ವಿಜಯಪುರ ಜ್ಞಾನಯೋಗಾಶ್ರಮದ ಜ್ಞಾನ ಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ, ವಿಜಯಪುರದ ಜೀವಂತ ದೇವರು ಎಂದೇ ಪ್ರಸಿದ್ಧರಾದವರು. ಅವರ ಅಗಲುವಿಕೆಯು ನಾಡಿಗೆ ಮಾತ್ರವಲ್ಲದೆ ದೇಶ ವಿದೇಶಗಳಲ್ಲಿನ ಅವರ ಅಪಾರ ಭಕ್ತಸಮೂಹಕ್ಕೆ ಆಘಾತವನ್ನು ಉಂಟು ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಸಂತಾಪ ಸಂತಾಪ ಸೂಚಿಸಿದ್ದಾರೆ.
ಪರಮ ಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ಅತ್ಯಂತ ಸರಳ ಸಜ್ಜನಿಕೆಯ ಸಾಕಾರ ಮೂರ್ತಿ, ನನ್ನದು-ತನ್ನದೆಂಬ ಮಮಕಾರ ತೊರೆದ ಮಹಾಪುರುಷರೇ ಶ್ರೀ ಸಿದ್ಧೇಶ್ವರ ಸ್ವಾಮಿಗಳವರು, ಇವರು ಸಂತರಷ್ಟೇ ಅಲ್ಲ, ಜ್ಞಾನೋಪಾಸಕರು ಕೂಡ ಆಗಿದ್ದರು. ಅಧ್ಯಾತ್ಮದ ಬಗ್ಗೆ ತುಂಬ ಆಳವಾದ ಅಧ್ಯಯನ ಚಿಂತನೆಗಳನ್ನು ನಡೆಸಿರುವ ಶ್ರೇಷ್ಠ ಅನುಭಾವಿಗಳೂ ಮಧುರ ಸ್ವಭಾವದವರೂ ಆಗಿದ್ದು ಕನ್ನಡ, ಸಂಸ್ಕೃತ, ಇಂಗ್ಲಿಷ್, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ನಿಪುಣಾರು. ಒಬ್ಬ ಜ್ಞಾನಯೋಗಿಗಳ ರೂಪದಲ್ಲಿ ಅವರು ಮುಂದೆಯೂ ನಮ್ಮೊಂದಿಗೆ ಇರುತ್ತಾರೆ ಎಂದು ತಿಳಿಸಿದ್ದಾರೆ.
ವಿಜಯಪುರದ ಜ್ಞಾನಯೋಗಾಶ್ರಮ ಜನತೆಗೆ ಜ್ಞಾನದಾಸೋಹ ನೀಡುವ ವಿಶಿಷ್ಟ ಕೇಂದ್ರವಾಗಿದೆ. ವಿಜಯಪುರ ಜ್ಞಾನಯೋಗಾಶ್ರಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಶ್ರೀ ಸಿದ್ಧೇಶ್ವರರು ತಮ್ಮ ಗುರುಗಳ ಮಾರ್ಗದರ್ಶನದಲ್ಲೇ ಆಶ್ರಮದ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಬಂದವರು. ಸಿದ್ದೇಶ್ವರರ ಪ್ರವಚನ ಕೇಳಿದವರು ಅದರಲ್ಲೇ ಅನುರಕ್ತರಾಗಿ ಬಿಡುತ್ತಾರೆ. ಅವರ ಪ್ರವಚನ ಕಾರ್ಯಕ್ರಮ ಎಲ್ಲಿ ಏರ್ಪಡಿಸಿದರೂ ಸಹ ಅಲ್ಲಿಗೆ ಸಾವಿರಾರು ಸಂಖ್ಯೆಯಲ್ಲಿ ಜನ ಸೇರುತ್ತಿದ್ದರು. ಒಂದು ಗಂಟೆಯ ಅವರ ಪ್ರವಚನದುದ್ದಕ್ಕೂ ಸೇರಿದ ಅಷ್ಟು ತುಂಬು ತನ್ಮಯತೆಯಿಂದ ಕುಳಿತಿರುತ್ತಿದ್ದರು. ಸೂಜಿಗಲ್ಲಿನಂತಹ ಸೆಳೆತ, ಅವರು ಭಾಷೆ, ಧಾಟಿ, ಪದಪ್ರಯೋಗ, ಉದಾಹಣೆಗಳ ಮೂಲಕ ಪ್ರಚಲಿತ ಸಂಗತಿಗಳನ್ನು ಸಮ್ಮಿಳಿತಗೊಳಿಸುತ್ತಿದ್ದರು ಎಂದು ವಿವರಿಸಿದ್ದಾರೆ. ತಮ್ಮ ಗುರುಗಳು ಸ್ಥಾಪಿಸಿದ ನೂರಾರು ವಿದ್ಯಾ ಸಂಸ್ಥೆಗಳನ್ನು ಸಿದ್ದೇಶ್ವರರು ಮುಂದುವರೆಸಿಕೊಂಡು ಬರುತ್ತಿದ್ದರು. ಕೆರೆಯ ನೀರನ್ನು ಕೆರೆಗೆ ಚೆಲ್ಲಿ. ಎಂಬ ದಾಸ ವಾಣಿಯಂತೆ ಅವರು ನಡೆದವರು ಎಂದಿದ್ದಾರೆ.

ಪೂಜ್ಯರು ಉಪನಿಷತ್ತುಗಳು, ಭಗವದ್ಗೀತೆ, ಯೋಗಸೂತ್ರ, ವಚನಶಾಸ್ತ್ರ ಮುಂತಾದ ವಿಷಯಗಳ ಬಗೆಗೆ ತಾವು ಹೇಗೆ ಗುರು ಮುಖೇನ ಕಲಿತ ಜ್ಞಾನವನ್ನು ಬಳಸಿಕೊಂಡು ಬೋಧನೆ, ಪ್ರವಚನಗಳನ್ನು ನೀಡುತ್ತಿದ್ದರು. ಗಹನವಾದ ವೇದಾಂತ ತತ್ವಗಳನ್ನು ಅತ್ಯಂತ ಸರಳವಾಗಿ ಜನಮಾನಸದಲ್ಲಿ ಉಳಿಯುವಂತೆ ವಿವರಿಸುವುದೇ ಅವರ ವೈಶಿಷ್ಟ್ಯವಾಗಿತ್ತು. ಅವರ ಭಾಷಣಗಳು ಪ್ರತಿಯೊಬ್ಬರ ಜೀವನದಲ್ಲಿ ಅದ್ಭುತ ರೂಪಾಂತರವನ್ನು ತರುತ್ತಿದ್ದವು. ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಜೀವಂತ ದೇವರಿಗೆ ಹೋಲಿಸಬಹುದಾದ ಮಾನವರಲ್ಲಿ ಒಬ್ಬರು ಎಂದು ತಿಳಿಸಿದ್ದಾರೆ.
ಅವರು ವಚನಗಳ ಬಗ್ಗೆ ಹೊಸ ಬೆಳಕನ್ನು ಚೆಲ್ಲಿದ್ದಾರೆ. ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಸರಳವಾದ ಸ್ಪೂರ್ತಿದಾಯಕ ಜೀವನ ಶೈಲಿಯನ್ನು ಹೊಂದಿದವರು. ಅವರು ಜೀವನವನ್ನು ಆಧ್ಯಾತ್ಮಿಕತೆಗೆ ಮೀಸಲಿಟ್ಟಿದ್ದಾರೆ ಮತ್ತು ಭಾರತದ ಸಂತರು ಮತ್ತು ಸಿಯರ್ಸ್ ಕೃತಿಗಳ ಆಧಾರದ ಮೇಲೆ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. ಅವರ ಪುಸ್ತಕಗಳು ನಮಗೆ ಮಾರ್ಗದರ್ಶನ ನೀಡಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪದ್ಮಶ್ರೀ ಪ್ರಶಸ್ತಿ, ಕರ್ನಾಟಕ ವಿಶ್ವವಿದ್ಯಾನಿಲಯ ಅವರಿಗೆ ಗೌರವ ಡಾಕ್ಟರೇಟ್ ಅನ್ನು ನಯವಾಗಿಯೇ ನಿರಾಕರಿಸಿದ್ದು ಅವರ ಶ್ರೇಷ್ಠ ವ್ಯಕ್ತಿತ್ವಕ್ಕೆ ಕೈಗನ್ನಡಿ ಎಂದು ಅವರು ತಿಳಿಸಿದ್ದಾರೆ.
ಆದ್ಯಾತ್ಮದ ಕೊಂಡಿ ಕಳಚಿಕೊಂಡ ನಾಡು: ಗೋವಿಂದ ಕಾರಜೋಳ
ನಡೆದಾಡುವ ದೇವರು, ವಿಜಯಪುರದ ಜ್ಞಾನಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿ ಅವರ ಅಗಲುವಿಕೆಯಿಂದ ಅತೀವ ದುಃಖವಾಗಿದೆ ಎಂದು ಸಚಿವ ಗೋವಿಂದ ಕಾರಜೋಳ ಸಂತಾಪ ಸೂಚಿಸಿದ್ದಾರೆ.
ನಿಸ್ವಾರ್ಥ ಸೇವೆ, ಮಮಕಾರಗಳಿಲ್ಲದೆ, ಯಾರ ಹಂಗಿಗೂ ಒಳಗಾಗದೆ ಸರ್ವಜನರಿಂದಲೂ ಪ್ರೀತಿ, ವಿಶ್ವಾಸದ ಖನಿಜ ವಾಗಿದ್ದ ವಿಜಯಪುರ ಜ್ಞಾನಯೋಗಾಶ್ರಮದ ಪರಮ ಪೂಜ್ಯ ಶ್ರೀ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರು ತಮ್ಮ ಗುರುಗಳ ಮಾರ್ಗದರ್ಶನದಲ್ಲೇ ಆಶ್ರಮದ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಬಂದರು.
ಸಿದ್ದೇಶ್ವರ ಸ್ವಾಮೀಜಿ ಅವರ ಪ್ರವಚನ ಕೇಳಿದವರು ಅದರಲ್ಲೇ ಅನುರಕ್ತರಾಗಿ ಬಿಡುತ್ತಿದ್ದರು . ಅವರ ಪ್ರವಚನ ಕಾರ್ಯಕ್ರಮ ಎಲ್ಲಿ ಏರ್ಪಡಿಸಿದರೂ ಸಹ ಅಲ್ಲಿಗೆ ಲಕ್ಷಾಂತರ ಸಂಖ್ಯೆಯಲ್ಲಿ ಜನ ಸೇರುತ್ತಿದ್ದರು. ಒಂದು ಗಂಟೆಯ ಅವರ ಪ್ರವಚನದುದ್ದಕ್ಕೂ ಸೇರಿದ ಅಷ್ಟು ತುಂಬು ತನ್ಮಯತೆಯಿಂದ ಕುಳಿತು ಪ್ರವಚನ ಆಲಿಸುತ್ತಿದ್ದರು. ಸೂಜಿಗಲ್ಲಿನಂತಹ ಸೆಳೆತ, ಅವರ ಭಾಷೆ,ಧಾಟಿ, ಪದಪ್ರಯೋಗ,ಉದಾಹಣೆಗಳ ಮೂಲಕ ಪ್ರಚಲಿತ ಸಂಗತಿಗಳನ್ನು ಸಮ್ಮಿಳಿತಗೊಳಿಸುತ್ತಿದ್ದ ಅವರ ಶೈಲಿ ಜೊತೆಗೆ ಕಲ್ಲು,ಮಣ್ಣು,ಗಿಡ,ಮರ,ಹೂ,ಹಕ್ಕು,ಪಕ್ಷಿ,ಪ್ರಾಣಿಗಳಲ್ಲಿ ಜೀವಚೈತನ್ಯವಿದೆ ಎಂಬುದನ್ನು ಅವರು ವಿವರಿಸುವ ರೀತಿ ಅದ್ಬುತವಾದುದು. ತಮ್ಮ ಗುರುಗಳು ಸ್ಥಾಪಿಸಿದ ನೂರಾರು ವಿದ್ಯಾ ಸಂಸ್ಥೆಗಳನ್ನು ಸಿದ್ದೇಶ್ವರರು ಮುಂದುವರಿಸಿಕೊಂಡು ಬರುತ್ತಿದ್ದರೂ ಅವರ ಯಾವ ಸಂಸ್ಥೆಗಳಿಗೂ ಆಶ್ರಮದ ಹೆಸರಾಗಲಿ, ಅವರ ಹೆಸರಾಗಲಿ ಇರುವುದಿಲ್ಲ ಎಂದರೆ ಆಶ್ಚರ್ಯವಲ್ಲವೆ? ಕೆರೆಯ ನೀರನ್ನು ಕೆರೆಗೆ ಚೆಲ್ಲಿ. ಎಂಬ ದಾಸ ವಾಣಿಯಂತೆ ನನ್ನದೇನಿದೆ,ಎಲ್ಲವೂ ಭಗವಂತನದು,ಇಲ್ಲಿರುವ ಪ್ರತಿಯೊಬ್ಬ ಮನುಷ್ಯನೂ ದೇವರು.ಎಲ್ಲರಲ್ಲೂ ದೇವರನ್ನು ಕಾಣಬೇಕು. ನಾನು ನನ್ನದೆಂಬ ಮಮಕಾರ ಸಲ್ಲದು. ಇಹಪರ ಎರಡೂ ಒಂದೆ ಎಂದು ಸಾರುತ್ತ ಅದರಂತೆ ನಡೆಯುತ್ತ ಇರುವ ಅಪರೂಪದ ಯೋಗಿಗಳು ಶ್ರೀ ಸಿದ್ದೇಶ್ವರ ಸ್ವಾಮೀಜಿ ಎಂದರು.












Click it and Unblock the Notifications