ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಗ್ಗೆ ಸುಳಿವು ಕೊಟ್ಟ ವಿಜಯೇಂದ್ರ; ಬಂಡಾಯಕ್ಕೆ ಬೀಳುತ್ತಾ ಬ್ರೇಕ್ ?
ಮಂಗಳೂರು,ನವೆಂಬರ್ 23: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್ ಟಿಕೆಟ್ ಹಂಚಿಕೆಯಲ್ಲಿ ತಂದ ಬದಲಾವಣೆಯನ್ನ ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ತರುವ ನಿಟ್ಟಿನಲ್ಲಿ ಕರ್ನಾಟಕದ ಹಾಲಿ 13 ಜನ ಸಂಸದರಿಗೆ ಈ ಬಾರೀ ಟಿಕೆಟ್ ನೀಡುವುದಿಲ್ಲ ಎಂಬ ವರದಿಯಾಗಿದ್ದು, ಈ ಬಾರೀ ದಕ್ಷಿಣ ಕನ್ನಡ ಸಂಸದಾಗಿರುವ ನಳಿನ್ ಕುಮಾರ್ ಕಟೀಲ್ ಅವರಿಗೂ ಟಿಕೆಟ್ ಮಿಸ್ ಎನ್ನಲಾಗಿತ್ತು.
ಹೌದು, ಈ ಬಾರಿಯ ಚುನಾವಣೆಯಲ್ಲಿ ನಳಿನ್ ಕುಮಾರ್ ಕಟೀಲ್ ಅವರಿಗೆ ಟಿಕೆಟ್ ನೀಡಲ್ಲ ಎಂಬ ಚರ್ಚೆಗೆ ನೂತನವಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರು ಬ್ರೇಕ್ ಹಾಕಿದ್ದಾರೆ. ಬುಧವಾರದ ಮಂಗಳೂರಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಬಿ ವೈ ವಿಜಯೇಂದ್ರ ಮಾತನಾಡಿದ್ದು, ಮತ್ತೆ ನಳಿನ್ ಕುಮಾರ್ ಕಟೀಲ್ ಅವರನ್ನು ಗೆಲ್ಲಿಸಿಕೊಡಿ ಎಂದ ಮನವಿ ಮಾಡಿದ್ದಾರೆ.

ಬಿ ವೈ ವಿಜಯೇಂದ್ರ ಅವರ ಹೇಳಿಕೆಯಿಂದಾಗಿ ಈ ಬಾರೀ ನಳಿನ ಕುಮಾರ್ ಕಟೀಲ್ ಅವರಿಗೆ ಟಿಕೆಟ್ ಸಿಗುವುದು ಪಕ್ಕಾ ಎನ್ನಲಾಗಿದೆ. ಆದರೆ, ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಪುತ್ತೂರಿನಲ್ಲಿ ಸೃಷ್ಟಿಯಾದ ಬಂಡಾಯದ ಬೆಂಕಿ ತಣ್ಣಗಾಗಿಸಲು ಪ್ರಯತ್ನ ನಡೆದಿರುವ ಮಧ್ಯೆಯೇ ಅದಕ್ಕೆ ತುಪ್ಪ ಸುರಿಯುವ ಕೆಲಸವನ್ನ ವಿಜಯೇಂದ್ರ ಅವರು ಮಾಡಿದ್ರಾ ಎನ್ನುವ ಮಾತುಗಳು ಕೇಳಿ ಬಂದಿವೆ. ಮುಂದಿನ ಲೋಕಸಭಾ ಚುನಾವಣೆಯನ್ನ ನಾವು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ. ಮತ್ತೊಮ್ಮೆ ನಮ್ಮ ಪಕ್ಷದ ಅಭ್ಯರ್ಥಿಯಾದ ನಳಿನ್ ಕುಮಾರ್ ಕಟೀಲ್ ಅವರನ್ನು ಗೆಲ್ಲಿಸುವ ಕೆಲಸ ಮಾಡಬೇಕಿದೆ ಎಂದು ವಿಜಯೇಂದ್ರ ಕರೆ ನೀಡಿದರು.
ಈಗಾಗಲೇ ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ನಳಿನ್ ಕುಮಾರ್ ಕಟೀಲ್ ಅಭ್ಯರ್ಥಿತನದ ಬಗ್ಗೆ ಸ್ವಪಕ್ಷೀಯರಲ್ಲೇ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ ನೂತನ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರ ಹೇಳಿಕೆಯಿಂದ ಮತ್ತೆ ಬಂಡಾಯ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನೂ ಕಳೆದ ವಿಧಾನಸಭಾ ಚುಣಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಅವರ ಬಂಡಾಯದಿಂದ ಬಿಜೆಪಿ ಸಾಕಷ್ಟು ಮುಜುಗರಕ್ಕೆ ಒಳಗಾಗಿತ್ತು. ಅರುಣ್ ಕುಮಾರ್ ಪುತ್ತಿಲ ಅವರ ಬಂಡಾಯ ಸದ್ಯ ದಕ್ಷಿಣ ಕನ್ನಡ ಜಿಲ್ಲೆ ಭಾರೀ ಸುದ್ದಿಯಲ್ಲಿದೆ. ಇನ್ನೂ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಈ ಬಾರೀ ಹಲವು ಮಂದಿ ಸಂಸದ ಸ್ಥಾನದ ಟಿಕೆಟ್ ಆಕಾಂಕ್ಷಿಗಳು ಪಕ್ಷದಲ್ಲಿದ್ದಾರೆ. ಈ ಬಂಡಾಯದ ಬೆಂಕಿಯ ಮಧ್ಯ ಮತ್ತೆ ನಳಿನ ಕುಮಾರ್ ಕಟೀಲ್ ಅವರನ್ನ ಗೆಲ್ಲಿಸಿಕೊಡಿ ಎಂದು ವಿಜಯೇಂದ್ರ ಅವರು ಕರೆ ನೀಡಿರುವುದು ಇನ್ನಷ್ಟು ಅಸಮಾಧಾನಕ್ಕೆ ಕಾರಣವಾಗಲಿದೆ ಎನ್ನಲಾಗಿದೆ.
ಇನ್ನೂ ವಿಜಯೇಂದ್ರ ಮಾತನಾಡಿ, ನನ್ನ ಅಧಿಕಾರದ ಕೊನೆಯ ದಿನದವರೆಗೂ ಪಕ್ಷದಲ್ಲಿ ಕೆಲಸ ಮಾಡ್ತೇನೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಅಧಿಕಾರಕ್ಕೆ ತರ್ತೇನೆ. ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ವಿರುದ್ದ ರಸ್ತೆಗಿಳಿದು ಹೋರಾಟ ಮಾಡಬೇಕಿದೆ. ಮುಂದಿನ ಬಾರಿಯೂ ನಳಿನ್ ಪರವಾಗಿ ಕಾರ್ಯಕರ್ತರು ಕೆಲಸ ಮಾಡಬೇಕಿದೆ. ರಾಷ್ಟ್ರೀಯ ಮತ್ತು ರಾಜ್ಯದ ಅಧ್ಯಕ್ಷರಿಗೆ ಕೊಡೋ ಗೌರವ ಬೂತ್ ಅಧ್ಯಕ್ಷರಿಗೂ ಕೊಡಬೇಕು. ನನ್ನ ಜಿಲ್ಲಾ ಪ್ರವಾಸದ ವೇಳೆ ಬೂತ್ ಅಧ್ಯಕ್ಷರ ಮನೆಗೆ ಭೇಟಿ ಕೊಡುತ್ತೇನೆ ಎಂದು ವಿಜಯೇಂದ್ರ ಹೇಳಿದ್ದಾರೆ.












Click it and Unblock the Notifications