ಪಕ್ಷ ಸಂಘಟನೆಗೆ ಮೊದಲ ಆದ್ಯತೆ : ನಳಿನ್ ಕುಮಾರ್ ಕಟೀಲ್
ಬೆಂಗಳೂರು, ಆಗಸ್ಟ್ 21 : "ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷ ಸಂಘಟನೆಗೆ ಮೊದಲ ಆದ್ಯತೆ ನೀಡಲಾಗುವುದು" ಎಂದು ಕರ್ನಾಟಕ ಬಿಜೆಪಿ ನೂತನ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳವಾರ ರಾತ್ರಿ ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕವಾಗಿದ್ದಾರೆ. ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ನಡೆದಿತ್ತು.
ಬಿಜೆಪಿ ಹೊಸ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪರಿಚಯ
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆ ವಿಚಾರದಲ್ಲಿ ಮಂಗಳವಾರ ಬ್ಯುಸಿಯಾಗಿದ್ದರು. ಅತ್ತ ರಾಷ್ಟ್ರೀಯ ನಾಯಕರು ನಳಿನ್ ಕುಮಾರ್ ಕಟೀಲ್ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷ
ಮಾಧ್ಯಮಗಳ ಜೊತೆ ಮಾತನಾಡಿದ ನೂತನ ಅಧ್ಯಕ್ಷರು, "ಪಕ್ಷದ ವರಿಷ್ಟರು ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಬಾಯಿಸುತ್ತೇನೆ. ಪಕ್ಷದ ಎಲ್ಲ ಹಿರಿಯರ ಮಾರ್ಗದರ್ಶನ ಹಾಗೂ ಸಲಹೆ ಗಳನ್ನು ಪಡೆದು ರಾಜ್ಯದಲ್ಲಿ ಪಕ್ಷವನ್ನು ಮತ್ತಷ್ಟು ಸಧೃಡಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ" ಎಂದು ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನಳಿನ್ ಹೆಗಲಿಗೆ
"ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷ ಸಂಘಟನೆಗೆ ಮೊದಲ ಆದ್ಯತೆ ನೀಡಲಾಗುವುದು. ಹೊಸ ಹುಮ್ಮಸ್ಸಿನಿಂದ ಎಲ್ಲರ ಜತೆಗೂಡಿ ಸಧೃಡ ಬಿಜೆಪಿ ಕಟ್ಟುವುದು ನನ್ನ ಆಶಯ" ಎಂದು ತಿಳಿಸಿದರು.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸಂಸತ್ಗೆ ನಳಿನ್ ಕುಮಾರ್ ಕಟೀಲ್ ಆಯ್ಕೆಯಾಗಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನವನ್ನು ಕರಾವಳಿ ಭಾಗದ ನಾಯಕನಿಗೆ ನೀಡುವ ಮೂಲಕ ಕರಾವಳಿಗೆ ಸಚಿವ ಸ್ಥಾನ ನೀಡಿಲ್ಲ ಎಂಬ ಕೂಗನ್ನು ಬಿಜೆಪಿ ಸ್ಪಲ್ಪ ಮಟ್ಟಿಗೆ ದೂರ ಮಾಡಿದೆ.