ಸಿಎಂ ಯಡಿಯೂರಪ್ಪ ಬದಲಾವಣೆ: ಸಿದ್ದರಾಮಯ್ಯ ಆರೋಪಕ್ಕೆ ಕಟೀಲ್ ಪ್ರತಿಕ್ರಿಯೆ!
ಬೆಂಗಳೂರು, ಅ. 22: ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ರಾಜ್ಯ ಬಿಜೆಪಿಯಲ್ಲಿ ಸಂಚಲವನ್ನುಂಟು ಮಾಡಿದೆ. ಮೊನ್ನೆಯಷ್ಟೇ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆ ಮಾಡಲು ಬಿಜೆಪಿ ಹೈಕಮಾಂಡ್ ತೀರ್ಮಾನಿಸಿದೆ ಎಂದಿದ್ದರು.
ಅವರ ಹೇಳಿಕೆಯ ಬೆನ್ನಲ್ಲಿಯೇ ಇವತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೂಡ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ರಾಜಕೀಯ ಭವಿಷ್ಯದ ಬಗ್ಗೆ ಮಾತನಾಡಿದ್ದಾರೆ. ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ ನಳಿನ್ ಕುಮಾರ್ ಕಟೀಲ್ ಎಂಬ ಪೋಕರಿಯನ್ನು ಯಾರೋ ತಮ್ಮ 'ಸಂತೋಷ'ಕ್ಕಾಗಿ ತಂದು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರು. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್. ಯಡಿಯೂರಪ್ಪ ಅವರನ್ನು ಕೆಡವುವದು. ಕಟೀಲ್ ಅದನ್ನೇ ಮಾಡುತ್ತಾ ಇದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದರು.
ಸಿಎಂ ಯಡಿಯೂರಪ್ಪ ಕುರಿತು ಸ್ಪೋಟಕ ಮಾಹಿತಿ ಹೊರಹಾಕಿದ ಸಿದ್ದರಾಮಯ್ಯ!
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ಬಿಜೆಪಿಯಲ್ಲಿ ಸಂಚಲವನ್ನುಂಟು ಮಾಡಿದ್ದು, ಅವರ ಹೇಳಿಕೆಗೆ ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ವಿಧಾನಸೌಧದಲ್ಲಿ ತಮ್ಮ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಸೋಲಿನ ಹೊಣೆ ಯಡಿಯೂರಪ್ಪ ತಲೆಗೆ!
ಈಗ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಹೇಗಾದರೂ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಅದರ ಹೊಣೆಯನ್ನು ಯಡಿಯೂರಪ್ಪ ಅವರ ತಲೆಗೆ ಕಟ್ಟಿ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಬೇಕು. ಇದು ನಳಿನ್ ಕುಮಾರ್ ಕಟೀಲ್ ಅವರಿಗೆ ಪಕ್ಷದೊಳಗಿನ ಕೆಲವು ನಾಯಕರೇ ಕೊಟ್ಟಿರುವ ಟಾಸ್ಕ್ ಎನ್ನುವುದು ಈಗ ಗುಟ್ಟಾಗಿ ಉಳಿದಿಲ್ಲ ಎಂದು ಸಿದ್ದರಾಮಯ್ಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದರು. ಅದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೀಗೆ ಪ್ರತಿಕ್ರಿಯಿಸಿದ್ದಾರೆ.
ಸಿದ್ದರಾಮಯ್ಯ ಹೇಳಿಕೆಗೆ ಕಟೀಲ್ ಪ್ರತಿಕ್ರಿಯೆ
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ರಾಜಕೀಯದಲ್ಲಿ ಇವೆಲ್ಲ ಸಹಜ ಎಂದಿದ್ದಾರೆ. ನಾನು ಸಿದ್ದರಾಮಯ್ಯ ಅವರನ್ನು ಕಾಡಿಗೆ ಕಳುಹಿಸಬೇಕು ಎಂದು ಹೇಳಿದ್ದೆ. ಅದಕ್ಕಾಗಿ ಅವರು ಹಾಗೆ ಹೇಳಿದ್ದಾರೆ ಎಂದಿದ್ದಾರೆ.
ಒಪ್ಪಲಿಲ್ಲ, ತಿರಸ್ಕಾರವನ್ನೂ ಮಾಡಲಿಲ್ಲ
ಇನ್ನು ಸಿಎಂ ಬದಲಾವಣೆ ಕುರಿತು ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಪ್ರಶ್ನೆ ಮಾಡಿದಾಗ, ಸಿದ್ದರಾಮಯ್ಯ ಅವರ ವಾಗ್ದಾಳಿಗೆ ನಮ್ಮ ಪಕ್ಷದ ವಕ್ತಾರ ಗಣೇಶ್ ಕಾರ್ಣಿಕ್ ಮೂಲಕ ಉತ್ತರ ಕೊಡುತ್ತೇವೆ ಎಂದು ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದರು. ಸಿಎಂ ಸ್ಥಾನದಿಂದ ಯಡಿಯೂರಪ್ಪ ಅವರ ಬದಲಾವಣೆ ವಿಚಾರವನ್ನು ಕಟೀಲ್ ಅವರು ಒಪ್ಪಿಕೊಳ್ಳಲಿಲ್ಲ, ಹಾಗೆಯೇ ತಿರಸ್ಕಾರವನ್ನೂ ಮಾಡಲಿಲ್ಲ!
ಇಬ್ಬರ ಹೇಳಿಕೆಯಲ್ಲಿ ಸಾಮ್ಯತೆ!
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೂ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗೂ ಸಾಮ್ಯತೆ ಇರುವುದು ಬಿಜೆಪಿ ವಲಯದಲ್ಲಿ ಚರ್ಚೆ ಹುಟ್ಟುಹಾಕಿದೆ. ತಮ್ಮ ಮೇಲೆ ಸಿದ್ದರಾಮಯ್ಯ ಮಾಡಿರುವ ಆರೋಪಕ್ಕೆ ನಳಿನ್ ಕುಮಾರ್ ಕಟೀಲ್ ಅವರು ಉತ್ತರ ಕೊಡದೇ, ಪಕ್ಷದ ವಕ್ತಾರರಿಂದ ಉತ್ತರ ಕೊಡಿಸುತ್ತೇನೆ ಎಂದಿರುವುದು ಕೂಡ ಕುತೂಹಲ ಮೂಡಿಸಿದೆ.
Recommended Video