BJP President:'ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಗಳ ರಾಜ್ಯಾಧ್ಯಕ್ಷರ ಘೋಷಣೆ'
ಬೆಂಗಳೂರು, ಜೂನ್ 26: ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ನಮ್ಮದು ರಾಷ್ಟ್ರೀಯ ಪಕ್ಷ. ಎಲ್ಲರ ಅಭಿಪ್ರಾಯ ಪಡೆದಿದ್ದಾರೆ. ನಾನು ಕಳೆದ ಒಂದೂವರೆ ವರ್ಷದಲ್ಲಿ ಬಹಳ ಯಶಸ್ವಿಯಾಗಿ ಕೆಲಸ- ಸಂಘಟನಾ ಕಾರ್ಯ ಮಾಡಿದ್ದೇನೆ ಎಂಬ ವಿಶ್ವಾಸ ನನ್ನಲ್ಲಿದೆ. ನಮ್ಮ ಕಾರ್ಯಕರ್ತರಲ್ಲೂ ಇದೆ. ನಮ್ಮ ಮುಖಂಡರಲ್ಲೂ ಇದೆ. ಹಾಗಾಗಿ ಒಳ್ಳೆಯದಾಗಲಿದೆ ಎಂದು ಹೇಳಿದರು.
ರಾಜ್ಯದ ಬಿಜೆಪಿ ಅಧ್ಯಕ್ಷರ ನೇಮಕಾತಿ ವಿಚಾರದಲ್ಲಿ ಇನ್ನೂ ನೇಮಕಾತಿ ಆಗುತ್ತಿಲ್ಲ. ಗೊಂದಲಗಳಿದ್ದು ಮುಂದೂಡುತ್ತಿದ್ದಾರೆ ಎಂಬುದು ಯಾವುದೂ ಸತ್ಯವಲ್ಲ. ಈಗ ದೇಶದ 14 ರಾಜ್ಯಗಳ ಅಧ್ಯಕ್ಷರ ಆಯ್ಕೆ ಮುಗಿದಿದೆ. ಈ ವಿಚಾರದಲ್ಲಿ ಘೋಷಣೆಯೂ ಆಗಿದೆ. ಸದ್ಯವೇ, ಅತಿ ಶೀಘ್ರದಲ್ಲೇ ಇನ್ನು ಆರೇಳು ರಾಜ್ಯಗಳ ಅಧ್ಯಕ್ಷರ ಘೋಷಣೆ ಆಗಲಿದೆ ಎಂಬ ಮಾಹಿತಿ ನಮಗೆ ಬರುತ್ತಿದೆ. ಅದಾದ ಬಳಿಕ ರಾಷ್ಟ್ರೀಯ ಅಧ್ಯಕ್ಷರ ಘೋಷಣೆ ಆಗಲಿದೆ. ಕರ್ನಾಟಕ ಒಂದೇ ಅಲ್ಲ. ಡಿ.ವಿ.ಸದಾನಂದಗೌಡರ ಹೇಳಿಕೆ ಅರ್ಧ ಸತ್ಯ. ಉತ್ತರ ಪ್ರದೇಶ ರಾಜ್ಯದ ಅಧ್ಯಕ್ಷರ ನೇಮಕಾತಿಯೂ ಆಗಿಲ್ಲ. ತೆಲಂಗಾಣ- ಕರ್ನಾಟಕ ರಾಜ್ಯಗಳ ಅಧ್ಯಕ್ಷರ ನೇಮಕಾತಿಯೂ ನಡೆದಿಲ್ಲ ಎಂದು ಹೇಳಿದರು.

ಬಿಜೆಪಿ ಬೂದಿ ಮುಚ್ಚಿದ ಕೆಂಡದಂತಿದೆ ಎಂಬ ಹಿರಿಯರಾದ ಡಿ.ವಿ.ಸದಾನಂದಗೌಡರ ಹೇಳಿಕೆಯ ಬಗ್ಗೆ ಮಾತನಾಡಿ, ಡಿ.ವಿ.ಸದಾನಂದಗೌಡರು ಹಿರಿಯರಿದ್ದಾರೆ. ನಾಳೆ ಭೇಟಿ ಮಾಡಿ ಅವರ ಜೊತೆ ಚರ್ಚೆ ಮಾಡುತ್ತೇನೆ. ಬೂದಿ ಮುಚ್ಚಿದ ಕೆಂಡದಂತಿದೆ ಎಂಬುದನ್ನು ನಾನು ಒಪ್ಪುವುದಿಲ್ಲ ಎಂದು ತಿಳಿಸಿದರು. ಸಣ್ಣಪುಟ್ಟ ಅಭಿಪ್ರಾಯ ವ್ಯತ್ಯಾಸ ಇರುವುದು ಸಹಜ ಎಂದು ತಿಳಿಸಿದರು.
ತುರ್ತು ಪರಿಸ್ಥಿತಿ ಸಂಬಂಧ ಇಂದಿರಾ ಗಾಂಧಿಯವರನ್ನು ಕರಾಳವಾಗಿ ತೋರಿಸಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ಸಿನವರು ಮೂರ್ಖರಿದ್ದಾರೆ. ಶ್ರೀಮತಿ ಇಂದಿರಾ ಗಾಂಧಿಯವರು ಈ ದೇಶದ ಪ್ರಧಾನಮಂತ್ರಿ ಆಗಿದ್ದಾಗ 50 ವರ್ಷಗಳ ಹಿಂದೆ ಪ್ರಜಾಪ್ರಭುತ್ವದ ಕಗ್ಗೊಲೆ ಆಗಿತ್ತು. ಎಲ್ಲ ಹಕ್ಕುಗಳನ್ನು ಕಿತ್ತುಕೊಳ್ಳುವ ಕೆಲಸ ಆಗಿತ್ತು. ಅನೇಕರನ್ನು ಜೈಲಿಗೆ ಅಟ್ಟಿದ್ದರು. ಮಾಧ್ಯಮಗಳ ಮೇಲೂ ದಬ್ಬಾಳಿಕೆ ಮಾಡಿದ್ದರು. ಅಂಥ ಕರಾಳ ದಿನವನ್ನು ನಿನ್ನೆ ನೆನಪಿಸುವ ದಿನ.
ತುರ್ತು ಪರಿಸ್ಥಿತಿಯಂಥ ಕರಾಳ ದಿನಗಳು ಮತ್ತೆ ಮರುಕಳಿಸಬಾರದು ಎಂಬ ಆಶಯ ಇದರ ಹಿಂದಿದೆ. ಶ್ರೀಮತಿ ಇಂದಿರಾ ಗಾಂಧಿಯವರು ಪ್ರಧಾನಮಂತ್ರಿ ಆಗಿದ್ದಾಗ ತಮ್ಮ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ ಯಾವ ರೀತಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲಾಗಿದೆ ಎಂಬುದನ್ನು ನೆನಪು ಮಾಡಿಕೊಳ್ಳುವ ದಿನ. ಇಂದಿರಾ ಗಾಂಧಿ ಅವರ ನಡವಳಿಕೆ ಹಿಟ್ಲರ್ ನಂತೆ ಎಂದಲ್ಲದೆ ಇನ್ನೇನು ಹೇಳಲು ಸಾಧ್ಯ ಎಂದು ವಿಜಯೇಂದ್ರ ಅವರು ಕೇಳಿದರು.
ನಮ್ಮ ಸಾಮಾಜಿಕ ಜಾಲತಾಣದ ಟ್ವೀಟ್ ಮೇಲಿನ ಸಿದ್ದರಾಮಯ್ಯನವರ ಎಫ್ಐಆರ್, ಗೂಂಡಾಗಿರಿಯಂಥ ಗೊಡ್ಡು ಬೆದರಿಕೆಗೆ ಹೆದರುವ ಪ್ರಶ್ನೆಯೇ ಇಲ್ಲ. ಇಂಥ ನೂರು ಎಫ್ಐಆರ್ ದಾಖಲಿಸಲಿ. ನಾವು, ನಮ್ಮ ಕಾರ್ಯಕರ್ತರು ಅದನ್ನು ಎದುರಿಸಲು ಸಿದ್ಧ ಎಂದು ತಿಳಿಸಿದರು. ಇಂಥ ದಬ್ಬಾಳಿಕೆ, ಗೂಂಡಾಗರ್ದಿ ನಡೆಯಲು ಸಾಧ್ಯವಿಲ್ಲ ಎಂದು ಬಿ ವೈ ವಿಜಯೇಂದ್ರ ಅವರು ಹೇಳಿದರು.












Click it and Unblock the Notifications