ಮೋದಿ ಸಂಪುಟದ ಖಾತೆ ಹಂಚಿಕೆ : ಕರ್ನಾಟಕದ ಸಚಿವರಿಗೆ ಯಾವ ಖಾತೆ?
Recommended Video
ಬೆಂಗಳೂರು, ಮೇ 31 : ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಕರ್ನಾಟಕದಿಂದ ನಾಲ್ವರು ನರೇಂದ್ರ ಮೋದಿ ಅವರ ಸಂಪುಟ ಸೇರಿದ್ದರು, ಗುರುವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು.
ಶುಕ್ರವಾರ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ನಿರ್ಮಲಾ ಸೀತಾರಾಮನ್ ಅವರಿಗೆ ಮಹತ್ವದ ಹಣಕಾಸು ಖಾತೆಯನ್ನು ನೀಡಲಾಗಿದೆ. ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ನಿರ್ಮಲಾ ಸೀತಾರಾಮನ್ ಅವರಿಗೆ ಮಹತ್ವದ ಜವಾಬ್ದಾರಿ ಸಿಕ್ಕಿದೆ.
ಮೋದಿ 2.0 ಸರ್ಕಾರ: ರಾಜನಾಥ್ ಗೆ ರಕ್ಷಣಾ, ಅಮಿತ್ ಗೆ ಗೃಹ, ನಿರ್ಮಲಾಗೆ ವಿತ್ತ
ಕರ್ನಾಟಕದಿಂದ ಪ್ರಹ್ಲಾದ್ ಜೋಶಿ, ಡಿ.ವಿ.ಸದಾನಂದ ಗೌಡ, ಸುರೇಶ್ ಅಂಗಡಿ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ಸುರೇಶ್ ಅಂಗಡಿ ಅವರು ರಾಜ್ಯ ಖಾತೆ ಸಚಿವರಾಗಿದ್ದು, ಉಳಿದ ಎಲ್ಲರೂ ಸಂಪುಟ ದರ್ಜೆ ಸ್ಥಾನಮಾನ ಪಡೆದಿದ್ದಾರೆ.
ಪಾಳು ಗುಡಿಸಲಿನ ಒಡೆಯ ಈಗ ಮೋದಿ ಸರ್ಕಾರದ ಸಚಿವ!
ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಪುನಃ ರಾಜ್ಯಕ್ಕೆ ಸಿಕ್ಕಿದೆ. ನರೇಂದ್ರ ಮೋದಿ ಸರ್ಕಾರದ ಮೊದಲ ಭಾಗದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದರಾಗಿದ್ದ ಅನಂತ್ ಕುಮಾರ್ ಅವರು ಈ ಖಾತೆಯನ್ನು ಹೊಂದಿದ್ದರು. ಈ ಬಾರಿ ಡಿ.ವಿ.ಸದಾನಂದ ಗೌಡ ಅವರಿಗೆ ಈ ಖಾತೆಯ ಹೊಣೆ ಸಿಕ್ಕಿದೆ.....
ಕರ್ನಾಟಕದಿಂದ ಮೋದಿ ಸಂಪುಟ ಸೇರುವ ಸಂಸದರ ಪಟ್ಟಿ ಅಂತಿಮ
ಹಣಕಾಸು ಖಾತೆ ಹೊಣೆ
60 ವರ್ಷದ ನಿರ್ಮಲಾ ಸೀತಾರಾಮನ್ ಅವರಿಗೆ ಮಹತ್ವದ ಹಣಕಾಸು ಖಾತೆಯನ್ನು ನೀಡಲಾಗಿದೆ. ತಮಿಳುನಾಡಿನ ಮಧುರೈ ಮೂಲದ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದು, ಕರ್ನಾಟಕದ ಕೋಟಾದಡಿ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ನರೇಂದ್ರ ಮೋದಿ ಅವರ ಸಂಪುಟದಲ್ಲಿ ರಕ್ಷಣಾ ಸಚಿವರಾಗಿ ಅವರು ಕೆಲಸ ಮಾಡಿದ್ದರು.
ರಾಸಾಯನಿಕ ಮತ್ತು ರಸಗೊಬ್ಬರ ಖಾತೆ
66 ವರ್ಷದ ಡಿ.ವಿ.ಸದಾನಂದ ಗೌಡ ಅವರಿಗೆ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಹೊಣೆ ನೀಡಲಾಗಿದೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದರಾದ ಸದಾನಂದ ಗೌಡರು ನರೇಂದ್ರ ಮೋದಿ ಸಂಪುಟದಲ್ಲಿ ರೈಲ್ವೆ, ಸಾಂಖ್ಯಿಕ ಖಾತೆಯನ್ನು ನಿರ್ವಹಣೆ ಮಾಡಿದ ಅನುಭವ ಹೊಂದಿದ್ದಾರೆ.
ಧಾರವಾಡ ಸಂಸದ
57 ವರ್ಷದ ಧಾರವಾಡ ಕ್ಷೇತ್ರದ ಸಂಸದ ಪ್ರಹ್ಲಾದ್ ಜೋಶಿ ಅವರಿಗೆ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಖಾತೆ ಹೊಣೆಯನ್ನು ನೀಡಲಾಗಿದೆ. ಧಾರವಾಡ ಕ್ಷೇತ್ರದಿಂದ 4 ಬಾರಿ ಸಂಸದರಾಗಿ ಆಯ್ಕೆಯಾಗಿರುವ ಜೋಶಿ ಅವರು, ಪೆಟ್ರೋಲಿಂ ಮತ್ತು ನೈಸರ್ಗಿಕ ಇಲಾಖೆಯ ಸಂಸದೀಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ.
ರೈಲ್ವೆ ಖಾತೆ ರಾಜ್ಯ ಸಚಿವರು
64 ವರ್ಷದ ಸುರೇಶ್ ಅಂಗಡಿ ಅವರು ರೈಲ್ವೆ ಖಾತೆಯ ರಾಜ್ಯ ಸಚಿವರಾಗಿದ್ದಾರೆ. 2004 ರಿಂದ ಸತತವಾಗಿ ಬೆಳಗಾವಿ ಕ್ಷೇತ್ರದಿಂದ ಆಯ್ಕೆಯಾಗುತ್ತಿರುವ ಸುರೇಶ್ ಅಂಗಡಿ ಅವರು ಬಿ.ಕಾಂ, ಎಲ್ಎಲ್ಬಿ ವ್ಯಾಸಂಗ ಮಾಡಿದ್ದಾರೆ.